ಕೊರೋನಾ ಸೋಂಕು ಏರಿಕೆ, ಶೀಘ್ರವೇ ಮಾರ್ಗಸೂಚಿ ಬಿಡುಗಡೆ, 3ನೇ ಡೋಸ್ ಲಸಿಕೆ ಪಡೆಯಲು ಸುಧಾಕರ್ ಮನವಿ
ಬೆಳಗಾವಿ, ಡಿಸೆಂಬರ್ 21: ಕೋವಿಡ್ ವೈರಸ್ ಜೊತೆ ಜೊತೆಗ ಹೊಸ ರೂಪಾಂತರಿ ವೈರಸ್ ಸೋಂಕುಗಳು ಕಂಡು ಬರುತ್ತಿರುತ್ತಿವೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಆದಷ್ಟು ಶೀಘ್ರವೇ ಬಿಡುಗಡೆ ಮಾಡಲಾಗುವುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಸಚಿವರು, ಚೀನಾ, ಜಪಾನ್ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಹೀಗಾಗಿ ಎಲ್ಲ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಿ ಪರೀಕ್ಷಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ. ಜೊತೆಗೆ ಕೋವಿಡ್ ಮಾರ್ಗಸೂಚಿ ಸಹ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.
ಆದ್ದರಿಂದ ಸಾರ್ವಜನಿಕರು ಎಲ್ಲರೂ ಕೋವಿಡ್ ಲಸಿಕೆಯ ಮೂರನೇ ಡೋಸ್ ಪಡೆಯಬೇಕು. ನಾವು ಈಗಾಗಲೇ ಎರಡು ಡೋಸ್ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಹೊಸದಾಗಿ ಸೋಂಕಿಗೆ ಒಳಗಾಗುತ್ತಿರುವವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸ್ ಪರೀಕ್ಷೆಗೆ ನೀಡಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ನಿರ್ದೇಶನ ಮೇರೆಗೆ ಇದಕ್ಕೆ ರಾಜ್ಯ ಸರ್ಕಾರ ಈಗಾಗಲೇ ಕ್ರಮ ವಹಿಸಿದೆ. ಹಾಗೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಕೊರೋನಾ ಹೆಚ್ಚುತ್ತಿರುವ ಬಗ್ಗೆ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗುವುದು.
ಶೇ. 20ರಷ್ಟು ಮಂದಿ ಮಾತ್ರ 3ನೇ ಡೋಸ್ ಪಡೆದಿದ್ದಾರೆ
ಕೋವಿಡ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅತೀ ಹೆಚ್ಚು ಪ್ರಯಾಣಿಕರು ಬರುತ್ತಿದ್ದಾರೆ. ಇಲ್ಲಿಯೂ ನಿಗಾ ಇರಿಸಲು ಕ್ರಮ ಕೈಗೊಳ್ಳಲಾಗುವುದು. ಎರಡು ಡೋಸ್ಗಳಲ್ಲಿ ಶೇ.100 ರಷ್ಟು ಸಾಧನೆಯಾಗಿದೆ. ಆದರೆ ಅನೇಕರು ಮೂರನೇ ಡೋಸ್ ಪಡೆದಿಲ್ಲ. ಕರ್ನಾಟಕದಲ್ಲಿ ಈದುವರೆಗೆ ಕೇವಲ ಶೇ.20ರಷ್ಟು ಮಂದಿ ಮಾತ್ರ ಮುನ್ನೆಚ್ಚರಿಕಾ ಡೋಸ್ ಪಡೆದಿದ್ದಾರೆ. ಉಳಿದವರು ಸಹ ಕೂಡಲೇ ಮೂರನೇ ಡೋಸ್ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.

ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗದರ್ಶನ ಕೂಡ ಪಡೆದುಕೊಂಡು ಕ್ರಮ ವಹಿಸಲಾಗುವುದು. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗುವುದು. ಹಾಗೆಯೇ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಲಾಗುವುದು ಎಂದರು.











Click it and Unblock the Notifications