ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಿಕೆ
ಬೆಂಗಳೂರು, ಏಪ್ರಿಲ್ 19; "ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಮುಂದೂಡುವ ಚಿಂತನೆ ಇದೆ. ಕೋವಿಡ್ ಪ್ರಕರಣಗಳ ಹೆಚ್ಚಳದ ಕಾರಣದಿಂದಾಗಿ ಚುನಾವಣೆ ಬೇಡವೆಂಬ ಸಲಹೆ ಇವೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
Recommended Video
ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, "ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬರುತ್ತಿದೆ. ಸದ್ಯಕ್ಕೆ ಚುನಾವಣೆ ಮುಂದಕ್ಕೆ ಹಾಕಲು ಚಿಂತನೆ ಇದೆ" ಎಂದರು.
"ಸಂಪುಟ ಸಬ್ ಕಮಿಟಿ ಸಭೆಯಲ್ಲಿ ಈ ಕುರಿತು ಚರ್ಚಿಸುತ್ತೇವೆ. ನಂತರ ಇದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ. ಅವಧಿ ಮುಗಿದ ಕಡೆ ಆಡಳಿತಾಧಿಕಾರಿ ಹಾಕಬೇಕು. ಈ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ" ಎಂದು ತಿಳಿಸಿದರು.

"ಕೋವಿಡ್ ಹೆಚ್ಚು ಉಲ್ಬಣವಾಗುತ್ತಿದೆ. ಚುನಾವಣೆಯಲ್ಲಿ ಮೂರುವರೆ ಕೋಟಿ ಜನರು ಭಾಗಿಯಾಗಬೇಕು ಹಾಗಾಗಿ ಚುನಾವಣೆ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಚರ್ಚೆ ಬಳಿಕ ಈ ಕುರಿತು ಚುನಾವಣಾ ಆಯೋಗಕ್ಕೆ ಶಿಫಾರಸು ಕಳಿಸುತ್ತೇವೆ" ಎಂದರು.
"ಚುನಾವಣೆ ಮುಂದೂಡುವ ಬಗ್ಗೆ ನಮ್ಮ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಅವರು ಮುಂದೂಡಿಕೆ ಬಗ್ಗೆ ಸಲಹೆ ಕೊಟ್ಟಿದ್ದಾರೆ. ಹಾಗಾಗಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ. ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ" ಎಂದು ಈಶ್ವರಪ್ಪ ಹೇಳಿದರು.
ಜಿ.ಪಂ., ತಾ ಪಂ. ಚುನಾವಣೆ ಬೇಡವೆಂಬ ಸಲಹೆ ಇವೆ ಕೋವಿಡ್ 19 ಹೆಚ್ಚಳದಿಂದ ಸದ್ಯಕ್ಕೆ ಚುನಾವಣೆಗಳನ್ನು ಮುಂದಕ್ಕೆ ಹಾಕಲು ಚಿಂತನೆಯನ್ನು ಸಂಪುಟದಲ್ಲಿ ಮಾಡಿ ನಿರ್ಧರಿಸಲಾಗುವುದು, ಅವಧಿ ಮುಗಿದ ಜಿಲ್ಲೆಗಳಲ್ಲಿ ಆಡಳಿತಾಧಿಕಾರಿ ನೇಮಿಸಲು ಕೂಡ ಚಿಂತನೆ ನಡೆಸಲಾಗಿದೆ.
— K S Eshwarappa (@ikseshwarappa) April 19, 2021
ಕೋವಿಡ್ ಪರಿಸ್ಥಿತಿಯಲ್ಲಿಯೂ ಬೆಳಗಾವಿ, ಮಸ್ಕಿ ಮತ್ತು ಬಸವಕಲ್ಯಾಣ ಉಪ ಚುನಾವಣೆಯನ್ನು ನಡೆಸಲಾಗಿದೆ. ಜೂನ್ ತಿಂಗಳಿನಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ತೀರ್ಮಾನಿಸಲಾಗಿತ್ತು.
ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದೆ. ಭಾನುವಾರ ರಾಜ್ಯದಲ್ಲಿ 19067 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 133543ಕ್ಕೆ ಏರಿಕೆಯಾಗಿದೆ.












Click it and Unblock the Notifications