ಚುನಾವಣಾ ಫಲಿತಾಂಶ ಉಳಿದವರು ಕಂಡಂತೆ!
ಬೆಂಗಳೂರು, ಫೆಬ್ರವರಿ 24 : 2018ರ ವಿಧಾನಸಭೆ ಚುನಾವಣೆ ದಿಕ್ಸೂಚಿ ಎಂದು ಹೇಳಲಾಗುತ್ತಿದ್ದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದೆ. ರಾಜಕೀಯ ಪಕ್ಷಗಳು ಬಹುಮತ ಪಡೆದ ಜಿಲ್ಲೆಗಳಿಗಿಂತ ಹೆಚ್ಚು ಜಿಲ್ಲೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ.
30 ಜಿಲ್ಲಾ ಪಂಚಾಯಿತಿ ಮತ್ತು 175 ತಾಲೂಕು ಪಂಚಾಯಿತಿಗಳ ಚುನಾವಣೆಯ ಫಲಿತಾಂಶ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷಕ್ಕೆ ತೃಪ್ತಿ ತಂದಿಲ್ಲ. 'ನಿರೀಕ್ಷಿತ ಫಲಿತಾಂಶ ಬಂದಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. [ಚುನಾವಣಾ ಫಲಿತಾಂಶ : ಸಿದ್ದರಾಮಯ್ಯ ಹೇಳಿದ್ದಿಷ್ಟು]
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಿದೆ. ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಎರಡನೇ ಮತ್ತು ಮೂರನೇ ಸ್ಥಾನ ಪಡೆದಿವೆ. 10 ಜಿಲ್ಲಾ ಪಂಚಾಯಿತಿ ಮತ್ತು 55 ತಾಲೂಕು ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ. [ಜಿಲ್ಲಾ ಪಂಚಾಯತ್ ಚುನಾವಣೆ ಗೆದ್ದವರು ಯಾರು?]
ರಾಜಕೀಯ ಪಕ್ಷಗಳು ಬಹುಮತ ಪಡೆದ ಜಿಲ್ಲೆಗಳಿಗಿಂತ ಹೆಚ್ಚು ಜಿಲ್ಲೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದ್ದು, ಮೈತ್ರಿ ಮಾತುಕತೆ ಅನಿವಾರ್ಯವಾಗಿದೆ. 'ಬಹುಮತವಿಲ್ಲದ ಕಡೆ ಪಕ್ಷೇತರ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸುತ್ತೇವೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಿವಿಧ ರಾಜಕೀಯ ನಾಯಕರು ಫಲಿತಾಂಶದ ಬಗ್ಗೆ ಹೇಳಿದ್ದೇನು? ಚಿತ್ರಗಳಲ್ಲಿ ನೋಡಿ....[ತಾಲೂಕು ಪಂಚಾಯಿತಿಯಲ್ಲಿ ಗೆದ್ದವರು ಯಾರು?]
'ನಿರೀಕ್ಷೆ ಹುಸಿಯಾಗಿದೆ'
'ಕಾಂಗ್ರೆಸ್ ಪಕ್ಷ 15 ರಿಂದ 20 ಜಿಲ್ಲೆಗಳಲ್ಲಿ ಗೆಲುವು ಸಾಧಿಸಬಹುದು ಎಂಬ ನಿರೀಕ್ಷೆ ಇತ್ತು. ನಿರೀಕ್ಷೆ ಹುಸಿಯಾಗಿದೆ. ಆದರೆ, ಫಲಿತಾಂಶದಿಂದ ಮುಜುಗರ ಅಥವ ನಿರಾಸೆಯಾಗಲೀ ಆಗಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.'ಫಲಿತಾಂಶ ನೋಡಿದರೆ ನಾವು ಜನರ ವಿಶ್ವಾಸ ಉಳಿಸಿಕೊಂಡಿದ್ದೇವೆ. ಜನರಿಗೆ ಸರ್ಕಾರದ ಮೇಲೆ ಒಲವಿದ್ದರೂ, ಈ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಒಲವನ್ನು ಅವರು ತೋರಿಲ್ಲ ಎಂಬುದು ಸ್ಪಷ್ಟವಾಗಿದೆ' ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
'ಅತಂತ್ರ ಫಲಿತಾಂಶ ಬಂದಿರುವ ಕಡೆ ಮೈತ್ರಿ'
ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು, 'ನಿರೀಕ್ಷೆಯಂತೆ ಫಲಿತಾಂಶ ಬಂದಿದೆ. ಸರ್ಕಾರದ ಕಾರ್ಯಕ್ರಮಗಳ ಆಧಾರದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ದೇವೆ. ಅತಂತ್ರ ಫಲಿತಾಂಶ ಬಂದಿರುವ ಕಡೆಗಳಲ್ಲಿ ಜೆಡಿಎಸ್ ಮತ್ತು ಇತರರೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ' ಎಂದು ಹೇಳಿದ್ದಾರೆ.
'ನಮ್ಮ ಪಕ್ಷದ ಸಾಧನೆ ಬಗ್ಗೆ ತೃಪ್ತಿ ಇದೆ'
'ಬಿಜೆಪಿ ವಿರೋಧ ಪಕ್ಷವಾಗಿದ್ದರೂ ಆಡಳಿತ ಪಕ್ಷಕ್ಕೆ ಸಮನಾಗಿ ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ಪಕ್ಷದ ಸಾಧನೆ ಬಗ್ಗೆ ತೃಪ್ತಿ ಇದೆ. ಅತಂತ್ರವಾಗಿರುವ ಜಿಲ್ಲಾ, ತಾಲೂಕು ಪಂಚಾಯತಿಗಳಲ್ಲಿ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಮೈತ್ರಿ ಮಾಡಿಕೊಳ್ಳುತ್ತೇವೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.
'ಸಿದ್ದರಾಮಯ್ಯ ಸರ್ಕಾರಕ್ಕೆ ಜನರಿಂದ ಪಾಠ'
'ರಾಜ್ಯ ಸರ್ಕಾರ ಹಸಿ ಸುಳ್ಳುಗಳನ್ನು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸದಲ್ಲಿ ನಿರತವಾಗಿದೆ. ಮೂರು ವರ್ಷಗಳಿಂದ ಅಭಿವೃದ್ಧಿ ಯೋಜನೆಗಳನ್ನು ರೂಪಿಸದೇ ಕಾಲಹರಣ ಮಾಡಿರುವ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸಿದ್ದಾರೆ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
'ಸರ್ಕಾರ ಪಾಠ ಕಲಿಯಬೇಕಾಗಿದೆ'
'ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಫಲಿತಾಂಶದಿಂದ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಪಾಠ ಕಲಿಯಬೇಕಾಗಿದೆ. ಜನರ ತೀರ್ಪನ್ನು ವಿಶ್ಲೇಷಿಸುವ ಕೆಲಸವನ್ನು ಪಕ್ಷ ಹಾಗೂ ಸರ್ಕಾರ ಮಾಡಬೇಕು. ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಬೇಕು' ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.