ಬೆಂಗಳೂರು ಕುಡಿಯುವ ನೀರಿನ ಯೋಜನೆಗೆ ಕಾವೇರಿ ನೀರು ಬಳಕೆ: ಸುಪ್ರೀಂಗೆ ಅರ್ಜಿ ಸಲ್ಲಿಸಿದ ತಮಿಳುನಾಡು
ಕಾವೇರಿ ನೀರು ವಿವಾದದಲ್ಲಿ ಮತ್ತೆ ತಮಿಳುನಾಡು ಸರ್ಕಾರ ವಿವಾದ ಶುರು ಮಾಡಿದೆ. ಬೆಂಗಳೂರು ಮಹಾನಗರ ಪಾಲಿಕೆ ಯೋಜನೆಗೆ ಕಾವೇರಿ ನೀರು ಬಳಕೆ ಬಗೆಗ ತಕರಾರು ತೆಗೆದಿದೆ.
ಬೆಂಗಳೂರು, ಫೆಬ್ರವರಿ. 01: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಹೆಚ್ಚುವರಿ ಅರ್ಜಿ ಸಲ್ಲಿಸಿದೆ. ಬೆಂಗಳೂರು ಮಹಾನಗರ ಪಾಲಿಕೆ ಯೋಜನೆಗೆ ಕಾವೇರಿ ನೀರು ಹರಿಸುವುದನ್ನು ಕರ್ನಾಟಕ ಸರ್ಕಾರ ನಿಷೇಧಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಕಾವೇರಿ ನದಿ ನೀರು ವಿವಾದ ತಮಿಳುನಾಡು ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ನಡುವೆ ಹಲವು ವರ್ಷಗಳಿಂದ ನಡೆಯುತ್ತಿದೆ. ಕಾವೇರಿ ನೀರು ಹಂಚಿಕೆ ಎರಡು ರಾಜ್ಯಗಳ ನಡುವೆ ಹಲವು ವರ್ಷಗಳಿಂದ ಸಮಸ್ಯೆಯಾಗಿದ್ದು, ಪ್ರಸ್ತುತ ತಮಿಳುನಾಡು ಸರ್ಕಾರದ ಈ ಕ್ರಮ ಮತ್ತೆ ಈ ವಿವಾದದ ಬೆಂಕಿಗೆ ತುಪ್ಪ ಸುರಿದಿದೆ.
ಬೆಂಗಳೂರಿನ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಮತ್ತು ವಿದ್ಯುತ್ ಉತ್ಪಾದನೆಗೆ ರಾಜ್ಯ ಸರ್ಕಾರವು ಕಾವೇರಿ ನದಿಗೆ ಅಡ್ಡಲಾಗಿ ರಾಮನಗರ ಜಿಲ್ಲೆಯ ಮೇಕೆದಾಟು ಎಂಬಲ್ಲಿ ಸುಮಾರು 9,000 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಅಣೆಕಟ್ಟು ನಿರ್ಮಿಸಲು ಯೋಜಿಸುತ್ತಿದೆ.

ಸರ್ಕಾರವು ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಿ ಕೇಂದ್ರ ಜಲಶಕ್ತಿ ಇಲಾಖೆ, ಕೇಂದ್ರ ಸರ್ಕಾರ ಮತ್ತು ಪರಿಸರ ಇಲಾಖೆಗೆ ಕಳುಹಿಸಿದೆ. ಆದರೆ, ಕಾವೇರಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟುವುದರಿಂದ ತಮಿಳುನಾಡಿಗೆ ನೀರು ಹರಿಸುವ ಪ್ರಮಾಣ ಕಡಿಮೆಯಾಗಲಿದೆ ಎಂದು ತಮಿಳುನಾಡು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ಮೇಕೆದಾಟು ಅಣೆಕಟ್ಟು ವಿಚಾರವಾಗಿ ತಮಿಳುನಾಡು ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣವೂ ದಾಖಲಾಗಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇದರಿಂದಾಗಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಕೇಂದ್ರ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ.

ಕರ್ನಾಟಕ ಸರ್ಕಾರ ಬೆಂಗಳೂರು ನಗರದ ಕುಡಿಯುವ ನೀರಿನ ಅಗತ್ಯತೆ ಹಾಗೂ ಕೈಗಾರಿಕೆ ಬಳಕೆಗೆ ಅನುಮತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಕಾವೇರಿಯಿಂದ ನೀರು ತೆಗೆಯುತ್ತಿದೆ ಎಂಬ ಆರೋಪ ಬಹಳ ದಿನಗಳಿಂದ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಹೆಚ್ಚುವರಿ ಅರ್ಜಿ ಸಲ್ಲಿಸಿದೆ.
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ಪರವಾಗಿ ವಕೀಲರಾದ ಜಿ.ಉಮಾಪತಿ ಮತ್ತು ಡಿ.ಕುಮನನ್ ಅವರು ಸುಪ್ರೀಂ ಕೋರ್ಟ್ನಲ್ಲಿ ಹೆಚ್ಚುವರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿನಲ್ಲಿ ಬೆಂಗಳೂರು ನಗರ ಕುಡಿಯುವ ಉದ್ದೇಶಕ್ಕೆ ಮಾತ್ರ 4.75 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು. ಕುಡಿಯುವ ನೀರಿಗೆ ಅಗತ್ಯವಿಲ್ಲದ ನೀರನ್ನು ಸಂಸ್ಕರಿಸಿ ಮತ್ತೆ ಕಾವೇರಿಗೆ ಬಿಡಬೇಕು ಎಂದು ವರದಿ ನೀಡಲಾಗಿದೆ. ಆದರೆ ಬೆಂಗಳೂರು ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ಸುಪ್ರೀಂ ಕೋರ್ಟ್ನ ಈ ತೀರ್ಪನ್ನು ಧಿಕ್ಕರಿಸಿ ವರ್ತಿಸುತ್ತಿದೆ. ಕಾವೇರಿ ನ್ಯಾಯಾಧಿಕರಣದ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್ ತೀರ್ಪನ್ನು ಪಾಲಿಸುವಂತೆ ಬೆಂಗಳೂರು ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಕಾವೇರಿ ಮತ್ತು ಅದರ ಉಪನದಿಗಳಿಂದ ತೆಗೆದುಕೊಂಡ ಹೆಚ್ಚುವರಿ ನೀರನ್ನು ಬೆಂಗಳೂರಿಗೆ ಹರಿಸದಂತೆ ಕುಡಿಯುವ ನೀರಿನ ಒಳಚರಂಡಿ ಮಂಡಳಿಗೆ ನಿರ್ದೇಶನ ನೀಡಬೇಕು. ಉಳಿದ ನೀರನ್ನು ಸರಿಯಾಗಿ ಸಂಸ್ಕರಿಸಿ ಕಾವೇರಿ ನದಿಗೆ ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಬೆಂಗಳೂರು ನಗರದ ಕುಡಿಯುವ ನೀರಿನ ಅಗತ್ಯತೆಗಾಗಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ನಿಗಾ ವಹಿಸಲು ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.












Click it and Unblock the Notifications