#GetWellSiddaramaiah ಕರ್ನಾಟಕ ಬಿಜೆಪಿ ಟ್ವೀಟ್
ಬೆಂಗಳೂರು, ನವೆಂಬರ್ 18 : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಡುವೆ ಟ್ವೀಟ್ ಸಮರ ನಡೆಯುತ್ತಿದೆ. ತನ್ವೀರ್ ಸೇಠ್ ಹತ್ಯೆಗೆ ಯತ್ನ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತನ್ವೀರ್ ಸೇಠ್ ಹತ್ಯೆ ಯತ್ನ ಪ್ರಕರಣದ ಬಗ್ಗೆ ಸೋಮವಾರ ಹಲವು ನಾಯಕರು ಟ್ವೀಟ್ ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ ಟ್ವೀಟ್ಗೆ ಕರ್ನಾಟಕ ಬಿಜೆಪಿ ಪ್ರತಿಕ್ರಿಯೆ ನೀಡಿದೆ. #GetWellSiddaramaiah ಎಂಬ ಹ್ಯಾಷ್ ಟ್ಯಾಗ್ ಬಳಸಿದೆ.
ಮಾಜಿ ಸಚಿವ ತನ್ವೀರ್ ಸೇಠ್ ಹತ್ಯೆ ಯತ್ನ, 5 ಮಂದಿ ವಶಕ್ಕೆ
ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಮುಂತಾದ ನಾಯಕರು ತನ್ವೀರ್ ಸೇಠ್ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಚಿವ ವಿ. ಸೋಮಣ್ಣ ಮೈಸೂರಿನ ಆಸ್ಪತ್ರೆಗೆ ಭೇಟಿ ನೀಡಿ ತನ್ವೀರ್ ಸೇಠ್ ಆರೋಗ್ಯ ವಿಚಾರಿಸಿದರು.
ಶಾಸಕ ತನ್ವೀರ್ ಸೇಠ್ ಮೇಲೆ ಕತ್ತಿಯಿಂದ ಹಲ್ಲೆ, ತೀವ್ರ ಗಾಯ
ತನ್ವೀರ್ ಸೇಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರ್ಹಾನ್ ಪಾಷಾ ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೆಲಸ ಕೊಡಿಸಲಿಲ್ಲ ಎಂದು ತನ್ವೀರ್ ಸೇಠ್ ಗೆ ಇರಿದನೇ ಆರೋಪಿ?
ಸಿದ್ದರಾಮಯ್ಯ ಟ್ವೀಟ್ ಏನು?
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, "ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ, ಶಿಕ್ಷಿಸುವ ಜೊತೆಗೆ ಸಾರ್ವಜನಿಕ ಜೀವನದಲ್ಲಿರುವ ಗಣ್ಯರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸುತ್ತೇನೆ" ಎಂದು ಹೇಳಿದ್ದರು.
ಟ್ವೀಟ್ ಮೂಲಕ ಬಿಜೆಪಿ ಪ್ರತಿಕ್ರಿಯೆ
ಕರ್ನಾಟಕ ಬಿಜೆಪಿ ಸಿದ್ದರಾಮಯ್ಯ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದೆ. "ಮಾನ್ಯ @siddaramaiah ನವರೆ, ಕಳೆದ ಆರು ವರ್ಷಗಳ ಕಾಲ ತುಘಲಕ್ ದರ್ಬಾರ್ ನಡೆಸಿದ್ದು ಯಾರು?. ಟಿಪ್ಪು ಸುಲ್ತಾನ್ ವ್ಯಾಮೋಹದಲ್ಲಿ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ್ದು ಯಾರು?. ನಿಮ್ಮ ಸುಳ್ಳಿನ ಪ್ರಪಂಚದಿಂದ ಆಚೆ ಬಂದು ಒಮ್ಮೆ ಕನ್ನಡಿ ನೋಡಿ, ಉತ್ತರ ದೊರಕುತ್ತದೆ?" ಎಂದು ಪ್ರಶ್ನೆ ಮಾಡಿದೆ.
ತನ್ವೀರ್ ಸೇಠ್ ಮೇಲೆ ಹಲ್ಲೆ
ಮಾಜಿ ಸಚಿವ, ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಭಾನುವಾರ ರಾತ್ರಿ 11.45ರ ಸುಮಾರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ವಾಪಸ್ ತೆರಳುವ ವೇಳೆ ಪರ್ಹಾನ್ ಪಾಷಾ ಅವರ ಮೇಲೆ ಹಲ್ಲೆ ನಡೆಸಿದ್ದ. ಹತ್ಯೆ ಮಾಡುವ ಉದ್ದೇಶದಿಂದಲೇ ಹಲ್ಲೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.
ಆರೋಗ್ಯದಲ್ಲಿ ಚೇತರಿಕೆ
ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ತನ್ವೀರ್ ಸೇಠ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. 48 ಗಂಟೆಗಳ ಕಾಲ ಅವರ ಆರೋಗ್ಯದ ಬಗ್ಗೆ ವೈದ್ಯರು ನಿಗಾ ವಹಿಸಿದ್ದಾರೆ.