ಈಗಲ್ ಟನ್ ರೆಸಾರ್ಟ್ ಮೇಲೆ ಐಟಿ ದಾಳಿ ನಡೆದಿದ್ದು ಏಕೆ?
ಬೆಂಗಳೂರು, ಆ.2 : ಗುಜರಾತ್ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿರುವ ಈಗಲ್ ಟನ್ ಗಾಲ್ಫ್ ರೆಸಾರ್ಟ್ ಮೇಲೆ ಬುಧವಾರ ಬೆಳಗ್ಗೆ ಐಟಿ ದಾಳಿ ನಡೆಸಿದೆ. ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ನಿವಾಸದ ಮೇಲೆಯೂ ದಾಳಿ ನಡೆಸಲಾಗಿದೆ.
ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ಹೊರವಲಯದ ರೆಸಾರ್ಟ್ ನಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದರು. ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಗಳ ನೆರವು ಪಡೆದಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರೆಸಾರ್ಟ್ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲಿಸುತ್ತಿದ್ದಾರೆ.

ಬುಧವಾರ ಬೆಳಗ್ಗೆ ಏಳು ಗಂಟೆಗೆ 10 ಅಧಿಕಾರಿಗಳು ಈಗಲ್ ಟನ್ ಗಾಲ್ಫ್ ರೆಸಾರ್ಟ್ ಮೇಲೆ ದಾಳಿ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆ ಮೂಲಗಳ ಮಾಹಿತಿ ಪ್ರಕಾರ ಭಾರೀ ಪ್ರಮಾಣದ ಹಣದ ಹರಿವು, ಶಾಸಕರ ವಾಸ್ತವ್ಯಕ್ಕೆ ಕೋಟಿ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ.
ಗುಜರಾತ್ ಕಾಂಗ್ರೆಸ್ ಶಾಸಕರ ವಾಸ್ತವ್ಯದ ವ್ಯವಸ್ಥೆಯನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ನೋಡಿಕೊಳ್ಳುತ್ತಿದ್ದಾರೆ. ಆದ್ದರಿಂದ, ಅವರ ನಿವಾಸ ಮೇಲೆ ದಾಳಿ ನಡೆಸಲಾಗಿದೆ. ಸುಮಾರು 20 ಅಧಿಕಾರಿಗಳ ತಂಡ ಡಿ.ಕೆ.ಶಿವಕುಮಾರ್ ಅವರ ಕನಕಪುರ ನಿವಾಸ, ಬೆಂಗಳೂರಿನ ಸದಾಶಿವನಗರದ ನಿವಾಸದ ಮೇಲೆ ದಾಳಿ ನಡೆದಿದೆ.
ಗುಜರಾತ್ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬರುತ್ತಿದ್ದಂತೆ ಕರ್ನಾಟಕ ಸರ್ಕಾರ 982 ಕೋಟಿ ದಂಡವನ್ನು ಪಾವತಿ ಮಾಡುವಂತೆ ಈಗಲ್ ಟನ್ ಗಾಲ್ಫ್ ರೆಸಾರ್ಟ್ ಗೆ ಸೂಚಿಸಿತ್ತು. ಜುಲೈ 27ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.
'ರೆಸಾರ್ಟ್ 77 ಎಕರೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿತ್ತು. ಅದಕ್ಕೆ ಪ್ರತಿಯಾಗಿ 982 ಕೋಟಿ ದಂಡ ಪಾವತಿ ಮಾಡಬೇಕು ಅಥವ ಭೂಮಿಯನ್ನು ಸರ್ಕಾರಕ್ಕೆ ಒಪ್ಪಿಸಬೇಕು ಎಂದು ಸೂಚನೆ ನೀಡಲಾಗಿತ್ತು' ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಕುದುರೆ ವ್ಯಾಪಾರ ತಪ್ಪಿಸಲು ಅಲ್ಲಿನ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆತಂದು ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ಶಾಸಕರು ಆಗಮಿಸಿದ ಸಂದರ್ಭದಲ್ಲಿಯೇ ಐಟಿ ದಾಳಿ ನಡೆದಿದೆ.












Click it and Unblock the Notifications