ಶಿಕ್ಷಕರ ವರ್ಗಾವಣೆ; ಚುನಾವಣಾ ಆಯೋಗಕ್ಕೆ ಪತ್ರ
ಬೆಂಗಳೂರು, ಮಾರ್ಚ್ 28; ಕರ್ನಾಟಕದಲ್ಲಿ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದೆ. ಚುನಾವಣಾ ವೇಳಾಪಟ್ಟಿ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದ್ದರೂ ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಭರವಸೆ ನೀಡಿದ್ದರು. ಈ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.
ರಿತೇಶ್ ಕುಮಾರ್ ಸಿಂಗ್ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚುನಾವಣಾ ಆಯೋಗಕ್ಕೆ ಶಿಕ್ಷಕರ ವರ್ಗಾವಣೆ ಕುರಿತು ಪತ್ರವನ್ನು ಬರೆದಿದ್ದಾರೆ. ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳಡಿಯಲ್ಲಿ ವರ್ಗಾವಣೆಗಾಗಿ ಶಿಕ್ಷಕರಿಂದ 88,324 ಅರ್ಜಿಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿಯನ್ವಯ ಹಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಹಾಗೂ ಸಾಮಾನ್ಯ ವರ್ಗಾವಣೆ (ಕೌನ್ಸಿಲಿಂಗ್ ಮುಖಾಂತರ ಮಾತ್ರ) ಪ್ರಕ್ರಿಯೆಯನ್ನು ಮುಂದುವರೆಸಲು ಸಕ್ಷಮ ಪ್ರಾಧಿಕಾರ ಅನುಮೋದನೆ ನೀಡಿರುತ್ತದೆ ಎಂದು ವಿವರಣೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ, 2020 ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು, 2020ರಂತೆ ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ 2022 ಮತ್ತು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ನಿಯಮಗಳು 2022ರ ಪ್ರಕಾರ 26/12/2022ರಂದು 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತ ಪ್ರಾಥಮಿಕ ಶಾಲಾ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು/ ತತ್ಸಮಾನ ವೃಂದದ ಸಾಮಾನ್ಯ ವರ್ಗಾವಣೆಗಳನ್ನು ಕೈಗೊಳ್ಳಲು ಮಾರ್ಗಸೂಚಿ ಸಹಿತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು.
ಆದರೆ, ತಾಂತ್ರಿಕ ದೋಷಗಳ ಕಾರಣದಿಂದಾಗಿ ಸದರಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ನಿರ್ಧರಿಸಲಾಗಿತ್ತು. ವರ್ಗಾವಣೆಗಾಗಿ ಶಿಕ್ಷಕರಿಂದ 88,324 ಅರ್ಜಿಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿಯನ್ವಯ ಹಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಹಾಗೂ ಸಾಮಾನ್ಯ ವರ್ಗಾವಣೆ (ಕೌನ್ಸಿಲಿಂಗ್ ಮುಖಾಂತರ ಮಾತ್ರ) ಪ್ರಕ್ರಿಯೆಯನ್ನು ಮುಂದುವರೆಸಲು ಸಕ್ಷಮ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಹಾಗೂ ಶಿಕ್ಷಕರು ವರ್ಗಾವಣೆಗೊಂಡ ಸ್ಥಳಕ್ಕೆ ನೂತನ ಶೈಕ್ಷಣಿಕ ವರ್ಷದ ಆರಂಭದಿಂದ ಅಂದರೆ 1ನೇ ಜೂನ್-2023ರ ನಂತರ ಕರ್ತವ್ಯಕ್ಕೆ ಹಾಜರಾಗುವ ಷರತ್ತಿಗೊಳಪಟ್ಟು ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಹಾಗೂ 2022-3ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು / ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು/ ತತ್ಸಮಾನ ವೃಂದದ ಸಾಮಾನ್ಯ ವರ್ಗಾವಣೆಗಳನ್ನು (ಕೌನ್ಸಿಲಿಂಗ್ ಮುಖಾಂತರ ಮಾತ್ರ ಮಾಡಲಾಗುವುದು) ಮುಂದುವರೆಸಲು ಅನುಮತಿ ನೀಡುವಂತೆ ಕೋರಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಹಲವು ದಿನಗಳಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ವಿಚಾರ ನೆನೆಗುದಿಗೆ ಬಿದ್ದಿತ್ತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ಎಸ್. ಷಡಾಕ್ಷರಿ ಹಾಗೂ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಸಿದ್ದಬಸಪ್ಪ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಶಿಕ್ಷಕರು ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕುರಿತು ಚರ್ಚಿಸಿದ್ದರು. ಈಗಾಗಲೇ ವರ್ಗಾವಣೆಗಾಗಿ 79 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅರ್ಜಿ ಸಲ್ಲಿಸಿರುತ್ತಾರೆ. ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಆಯಾ ತಾಲ್ಲೂಕಿನ ಒಳಗಡೆ ವರ್ಗಾವಣೆ ಮಾಡುವುದು. ದೀರ್ಘಕಾಲದಿಂದ ನೆನೆಗುದಿಯಲ್ಲಿರುವ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಶೀಘ್ರವಾಗಿ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು.
ಈಗಾಗಲೇ ಯಾವುದೇ ವರ್ಗಾವಣೆಗಳನ್ನು ಮಾಡಬೇಕಾಗಿದ್ದಲ್ಲಿ ರಾಜ್ಯ ಚುನಾವಣಾ ಆಯೋಗದ ಅನುಮತಿಯನ್ನು ಪಡೆಯುವಂತೆ ಸುತ್ತೋಲೆಯನ್ನು ಹೊರಡಿಸಿರುವುದರಿಂದ ರಾಜ್ಯ ಚುನಾವಣಾ ಆಯೋಗದ ಅನುಮತಿಯನ್ನು ಪಡೆದುಕೊಂಡು ಶಿಕ್ಷಕರ ವರ್ಗಾವಣೆ ಕಡತಕ್ಕೆ ಅನುಮೋದನೆ ನೀಡಿ ವರ್ಗಾವಣೆ ಪ್ರಕ್ರಿಯೆಗಳನ್ನು ಆರಂಭಿಸಲು ನಿರ್ದೇಶನ ನೀಡುವ ಭರವಸೆಯನ್ನು ನೀಡಿದ್ದರು.












Click it and Unblock the Notifications