ಸಿದ್ದರಾಮಯ್ಯ ಅವರಿಗೆ ತೊಂದರೆಯಾದರೆ ತೆಲಂಗಾಣ ಸರ್ಕಾರಕ್ಕೂ ಕಂಟಕ: ಸತೀಶ್ ಜಾರಕಿಹೊಳಿ
ಬೆಂಗಳೂರು, ಆಗಸ್ಟ್ 20: ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಕುರಿತಾಗಿ ವಿಪಕ್ಷಗಳಿಂದ ಕೂಗು ಕೇಳಿಬರುತ್ತಿದೆ. ಒಂದು ವೇಳೆ ರಾಜ್ಯದಲ್ಲಿ ಈ ರೀತಿ ನಡೆದದ್ದೇ ಆದರೆ ಇದರ ಪರಿಣಾಮ ಪಕ್ಕದ ತೆಲಂಗಾಣದ ಮೇಲೂ ಬೀರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಸಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರಿಗೆ ಏನಾದರೂ ತೊಂದರೆಯಾದರೆ, ತೆಲಂಗಾಣ ಸರ್ಕಾರವೂ ಪತನವಾಗಲಿದೆ.
ತೆಲಂಗಾಣದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರ್ಕಾರವನ್ನು ತೆಗೆಯುವ ಪ್ರಯತ್ನ ಕೂಡ ನಡೆಯಲಿದೆ. ಹೀಗಾಗಿ ಸಿದ್ದರಾಮಯ್ಯ ಅವರನ್ನು ನಾವೆಲ್ಲ ಉಳಿಸಿಕೊಳ್ಳಲೇಬೇಕು. ನಮ್ಮ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯವರಿಗೆ ಅವಕಾಶ ನೀಡಬಾರದು. ಆದ ಕಾರಣ ಸಿದ್ದರಾಮಯ್ಯ ಅವರ ಪರ ಹೈಕಮಾಂಡ್ ಮತ್ತಷ್ಟು ಬಲವಾಗಿ ನಿಲ್ಲಬೇಕು ಎಂದಿದ್ದಾರೆ.

ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾಯಿಸುವುದು ಸಾಧ್ಯವೇ ಇಲ್ಲ. ಸಿಎಂ ಸ್ಥಾನದಲ್ಲಿ ನೂರಕ್ಕೆ ನೂರು ಪಟ್ಟು ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದು ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ನವರು ಒಗ್ಗೂಡಿ ಸಿದ್ದರಾಮಯ್ಯ ಅವರನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ.
ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಕುಗ್ಗಿಸಿದರೆ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಬಹುದು ಎನ್ನುವ ಲೆಕ್ಕಾಚಾರದಲ್ಲಿ ಹೀಗೆ ಮಾಡುತ್ತಿದ್ದಾರೆ. ನಮ್ಮ ಪಕ್ಷ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತಿದೆ. ಹೈಕಮಾಂಡ್ ಕೂಡಾ ಅವರ ಬೆಂಬಲಕ್ಕಿದೆ. ಆದ ಕಾರಣ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಬರುವುದಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಅವರ ಮೇಲೆ ಮಾಡಿರುವಂತಹ ಯಾವುದೇ ಆರೋಪಗಳು ಈವರೆಗೂ ಸಾಬೀತಾಗಿಲ್ಲ. ಇದರ ಕುರಿತು ಅಗತ್ಯವಿದ್ದರೆ ತನಿಖೆಯಾಗಲಿ. ಸಿದ್ದರಾಮಯ್ಯ ಅವರನ್ನು ಬಿಜೆಪಿ ಗುರಿ ಮಾಡಿದ್ದು, ಇದು ಅವರ ವರ್ತನೆಯಿಂದಲೇ ತಿಳಿಯುತ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ವಿಚಾರದಲ್ಲಿ ನಾವೂ ಕಾನೂನು ಹಾಗೂ ರಾಜಕೀಯ ಹೋರಾಟ ಮಾಡುತ್ತೇವೆ ಎಂದಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸತೀಶ್ ಜಾರಕಿಹೊಳಿ ಅವರು ನಿನ್ನೆ ರಹಸ್ಯವಾಗಿ ಮಾತುಕತೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರು ನಮ್ಮ ಪಕ್ಷದ ಮುಖ್ಯಸ್ಥರು. ಅಲ್ಲದೆ ಚಿಕ್ಕೋಡಿ, ಬೆಳಗಾವಿ, ಬೆಳಗಾವಿ ಗ್ರಾಮಾಂತರ ಜಿಲ್ಲೆಗಳಿಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಬೇಕಾಗಿದೆ. ಈ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ಪಟ್ಟಿ ಕಳುಹಿಸುವಂತೆ ಶಿವಕುಮಾರ್ ಅವರು ಹೇಳಿದ್ದರು. ಈ ವಿಚಾರವಾಗಿ ಅವರನ್ನು ನಾನು ಭೇಟಿ ಮಾಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ತೆಲಂಗಾಣಕ್ಕೆ ಯಾವ ರೀತಿ ಎಫೆಕ್ಟ್?: ನೆರೆಯ ರಾಜ್ಯವಾದ ತೆಲಂಗಾಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ಪಾತ್ರ ವಹಿಸಿದ್ದರು. ಹಲವು ದಿನಗಳು ಅಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿರುಸಿನ ಪ್ರಚಾರ ಕೂಡ ನಡೆಸಿದ್ದರು.
ಅದರಂತೆ ಅಲ್ಲಿ ಅಧಿಕಾರದಲ್ಲಿದ್ದ ಬಿಆರ್ಎಸ್ ಪಕ್ಷವನ್ನು ಮಣಿಸಿ, ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಇವರಿಬ್ಬರ ಪಾತ್ರ ಸಾಕಷ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನೇ ತೆಲಂಗಾಣದಲ್ಲೂ ಅನುಕರಣೆ ಮಾಡಲಾಗಿತ್ತು. ಇದೆಲ್ಲದರ ಪರಿಣಾಮ ತೆಲಂಗಾಣದಲ್ಲಿ ಕೈ ಗೆಲುವು ಸಾಧಿಸಿತ್ತು. ಹಾಗಾಗಿ, ಇದೀಗ ರಾಜ್ಯದಲ್ಲಿ ಕಾಂಗ್ರೆಸ್ಗೆ ಕಂಟಕ ಎದುರಾದರೆ, ಅದರ ಪ್ರಭಾವ ತೆಲಂಗಾಣ ಕಾಂಗ್ರೆಸ್ನ ಮೇಲೂ ಬೀರಲಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications