ಕರ್ನಾಟಕದಲ್ಲಿ 40 ಡಿಗ್ರಿ ದಾಟಲಿದೆ ತಾಪಮಾನ: 2 ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಮಾರ್ಚ್ 19: ಕರ್ನಾಟದಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.
ಒಂದೆಡೆ ಕೊರೊನಾ ವೈರಸ್ ಬಿಸಿ ಏರುತ್ತಿದ್ದರೆ ಇನ್ನೊಂದೆಡೆ ತಾಪಮಾನವೂ ಕೂಡ ಅಪಾಯದ ಮಟ್ಟಕ್ಕೆ ತಲುಪುತ್ತಿದೆ.
ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮಾರ್ಚ್ ಕೊನೆಯ ವಾರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ಮಂಡ್ಯ, ಹಾಸನ, ಮೈಸೂರು, ಕೊಡಗು ಸೇರಿದಂತೆ ಸಾಕಷ್ಟು ಕಡೆಗಳಲ್ಲಿ ಮಳೆ ಬೀಳಲಿದೆ.

2-3 ದಿನ ರಾಜ್ಯದ ಹಲವೆಡೆ ಮಳೆ
ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಗಾಳಿಯ ಒತ್ತಡ ಕಡಿಮೆ ಆಗಿರುವುದರಿಂದ ತೆಲಂಗಾಣ ಭಾಗದಲ್ಲಿ ಮಳೆಯಾಗಿದ್ದು ಇದರ ಪರಿಣಾಮ ಮುಂದಿನ 2-3 ದಿನ ರಾಜ್ಯದಲ್ಲೂ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಕರ್ನಾಟಕದಲ್ಲಿ ಮಳೆ
ಮಂಗಳವಾರ ಮತ್ತು ಬುಧವಾರ ಉತ್ತರ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.ಮಾ.19 ಮತ್ತು 20 ರಂದು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಾರ್ಚ್ 20-21ರಂದು ಎಲ್ಲೆಲ್ಲಿ ಮಳೆ
ಮಾರ್ಚ್ 20 ಹಾಗೂ 21 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರಗಿಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲು
ಬುಧವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡಿರುವ ಹವಾಮಾನ ಇಲಾಖೆ ಅಂಕಿ ಅಂಶಗಳ ಪ್ರಕಾರ ಕಲಬುರಗಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮಂಡ್ಯದಲ್ಲಿ ಅತಿ ಕಡಿಮೆ 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications