BREAKING: ಜುಲೈ 11ರಂದು ನೂತನ ರಾಜ್ಯಪಾಲರ ಪ್ರಮಾಣ ವಚನ ಕಾರ್ಯಕ್ರಮ!
ಬೆಂಗಳೂರು, ಜು. 09: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ 11 ರಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ 19 ನೇ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಜುಲೈ 11 ರಂದು ಬೆಳಗ್ಗೆ 10.30ಕ್ಕೆ ನೂತನ ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.
ರಾಜ್ಯಪಾಲ ವಜುಭಾಯಿ ವಾಲಾ ಅವರು ಸುಮಾರು 6 ವರ್ಷ 10 ತಿಂಗಳು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆದೇಶ ಮಾಡಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಮುಗಿದು 2 ವರ್ಷಗಳಾಗಿದ್ದವು.
Recommended Video
ರಾಜ್ಯಸಭೆಯ ಸದಸ್ಯರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಎನ್ಡಿಎ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಂಪುಟ ಸಚಿವರಾಗಿದ್ದರು. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ನಗ್ಡಾದಲ್ಲಿ 1948ರ ಮೇ 18ರಂದು ಪರಿಶಿಷ್ಟ ಕುಟುಂಬದಲ್ಲಿ ಜನಿಸಿರುವ 73 ವರ್ಷದ ಗೆಹ್ಲೋಟ್ ಅವರು, ಉಜ್ಜಯಿನಿಯ ವಿಕ್ರಮ್ ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ಅವರಿಗೆ ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ವಿಜ್ಞಾನಗಳ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.