ಪದವಿ ವಿದ್ಯಾರ್ಥಿಗಳೇ ಪ್ರವೇಶ ಪ್ರಕ್ರಿಯೆ ಕುರಿತು ತುರ್ತು ಮಾಹಿತಿ ಗಮನಿಸಿ!
ಬೆಂಗಳೂರು, ಆ. 10: ಕೊರೊನಾವೈರಸ್ ಸಾಂಕ್ರಾಮಿಕದಿಂದ ಕಳೆದ ಎರಡು ವರ್ಷಗಳಿಂದ ಪ್ರಾಥಮಿಕ ಶಾಲೆಯಿಂದ ಉನ್ನತ ಶಿಕ್ಷಣದವರೆಗಿನ ಶೈಕ್ಷಣಿಕ ಚಟುವಟಿಕೆಗಳು ಕುಂಠಿತಗೊಂಡಿವೆ. ಇದೀಗ ಕೊರೊನಾ ಜೊತೆಗೆ ಬದುಕುವುದು ಅನಿವಾರ್ಯವಾಗುತ್ತಿದೆ. ಇದೇ ತೀರ್ಮಾನಕ್ಕೆ ಸರ್ಕಾರವೂ ಬಂದಿದೆ. ಕೊರೊನಾವೈರಸ್ ಆತಂಕದ ಮಧ್ಯೆ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ ಸಿದ್ಧವಾಗಿದೆ.
ಇತಿಹಾಸದಲ್ಲಿ ಮನುಷ್ಯರಿಗೆ ಬಂದಿರುವ ಯಾವುದೇ ಸಾಂಕ್ರಾಮಿಕ ರೋಗವೂ ತಕ್ಷಣವೇ ಕಡಿಮೆಯಾದ ಉದಹಾರಣೆಗಳಿಲ್ಲ. ಹೀಗಾಗಿ ಕೊರೊನಾ ಮೂರನೇ ಅಲೆ ಸಂಕಷ್ಟದ ಸವಾಲಿನ ಮಧ್ಯೆ ಕಾಲೇಜು ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ಪದವಿ ವಿದ್ಯಾರ್ಥಿಗಳು, ಬೋಧಕರಿಗೆ ವ್ಯಾಕ್ಸಿನ್
ಕಾಲೇಜು ಆರಂಭಿಸುಬವ ಕುರಿತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಚರ್ಚಿಸಿ ಕಾಲೇಜು ತರಗತಿ ಆರಂಭಿಸುವ ತೀರ್ಮಾನಕ್ಕೆ ಬದಲಾಗಿದೆ. ಜೊತೆಗೆ ಇದೇ ತಿಂಗಳು ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುತ್ತಿದೆ. ವಿದ್ಯಾರ್ಥಿಗಳು ಅಡ್ಮಿಶನ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಡಾ. ಅಶ್ವಥ್ ನಾರಾಯಣ ಸೂಚಿಸಿದ್ದಾರೆ. ಹೀಗಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಮುಂದಿದೆ.
ಕಾಲೇಜ್ ಪ್ರವೇಶ ಪ್ರಕ್ರಿಯೆ ಆರಂಭ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಮಹತ್ವದ ಮಾತುಕತೆ ನಡೆಸಿದ್ದಾರೆ. ಜೊತೆಗೆ ಇದೇ ಆಗಸ್ಟ್ 23ರಿಂದಲೇ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
"ಹೊಸದಾಗಿ ರೂಪಿಸಲಾಗಿರುವ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ದಾಖಲಾತಿ ಪ್ರಕ್ರಿಯೆ ಆರಂಭ ಮಾಡಲಾಗುವುದು. ಅದರ ಮಾದರಿಯನ್ನೂ ಉದ್ಘಾಟಿಸಲಾಗುವುದು" ಎಂದು ಡಾ. ಅಶ್ವಥ್ ನಾರಾಯಣ ವಿವರಿಸಿದ್ದಾರೆ. ಹೀಗಾಗಿ ಇದೇ ತಿಂಗಳು ಪದವಿ ಕಾಲೇಜ್ಗಳ ಪ್ರವೇಶ ಪ್ರಕ್ರಿಯೆ ಶುರುವಾಗಿ ಮುಗಿಯಲಿದೆ.
ಕನ್ನಡ ಭಾಷೆ ಉಪೇಕ್ಷಿಸಿಲ್ಲ!
"ಶಿಕ್ಷಣ ನೀತಿ ಜಾರಿಗೆ ಕೇಂದ್ರ ಸರಕಾರ 15 ವರ್ಷ ಕಾಲಾವಕಾಶ ನೀಡಿದೆ. ಆದರೆ ರಾಜ್ಯ ಸರಕಾರ ಹತ್ತೇ ವರ್ಷಗಳಲ್ಲಿ ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತರಲಿಕ್ಕೆ ಅಗಸ್ಟ್ 7ರಂದೇ ಆದೇಶ ಹೊರಡಿಸಲಾಗಿದೆ. ಅದಕ್ಕಾಗಿ ಈಗಾಗಲೇ ಮಾರ್ಗಸೂಚಿಯನ್ನೂ ಪ್ರಕಟಿಸಲಾಗಿದೆ" ಎಂದು ಡಾ. ಅಶ್ವಥ್ ನಾರಾಯಣ ವಿವರಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ವಿದ್ಯಾರ್ಥಿಗಳಿಗೆ ಆಗುವ ಅನುಕೂಲವೇನು?
"ನೂತನ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಮೊದಲಿಗಿಂತ ಹೆಚ್ಚು ವಿಸ್ತೃತವಾಗಿ ಕನ್ನಡವನ್ನು ಕಲಿಯುವ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಕಾರಣಕ್ಕೂ ಕನ್ನಡವನ್ನು ಉಪೇಕ್ಷೆ ಮಾಡಿಲ್ಲ. ಎರಡು ವರ್ಷಗಳ ಕನ್ನಡ ಕಲಿಕೆ ಇತ್ತು. ಹಾಗೆ ನೋಡಿದರೆ ಮೊದಲು ಕಡ್ಡಾಯ ಇರಲಿಲ್ಲ. ಈಗ ಕಡ್ಡಾಯ ಮಾಡಲಾಗಿದೆ" ಎಂದು ಉನ್ನತ ಶಿಕ್ಷಣ ಸಚಿವರು ಹೇಳಿದ್ದಾರೆ.
ವಿಷಯವಾರು ಮಾದರಿ ಪಠ್ಯ ತಯಾರಿಕೆ
2021-22ರಿಂದಲೇ ಶಿಕ್ಷಣ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿಷಯವಾರು ಮಾದರಿ ಪಠ್ಯಕ್ರಮಗಳನ್ನು ಸಿದ್ಧಪಡಿಸಲು ವಿಷಯ ತಜ್ಞರ 32 ಸಮಿತಿಗಳನ್ನು ರಚಿಸಲಾಗಿದೆ. ಈ ಪ್ರಕಾರವಾಗಿ 3 ವರ್ಷದ ಪದವಿ ಪ್ಲಸ್ 2 ವರ್ಷದ ಸ್ನಾತಕೋತ್ತರ ಅಥವಾ 4 ವರ್ಷದ ಆನರ್ಸ್ ಪದವಿ ಪ್ಲಸ್ 1 ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನದ ಬಗ್ಗೆ ವಿಷಯವಾರು ಮಾದರಿ ಪಠ್ಯ ತಯಾರಿಸುವಂತೆ ಆಯಾ ಸಮಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಾ. ಅಶ್ವಥ್ ನಾರಾಯಣ ತಿಳಿಸಿದರು.
ಈ ಎಲ್ಲ ವಿಷಯವಾರು ಸಮಿತಿಗಳು ಸಲ್ಲಿಸುವ ವರದಿಗಳ ಆಧಾರದ ಆಯಾ ವಿಷಯದ ಪಠ್ಯ ರಚನೆಯಾಗಲಿದ್ದು, ಇದೇ ಅಗಸ್ಟ್ 31ರೊಳಗೆ ಪಠ್ಯ ಸಿದ್ಧಪಡಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ವಿವಿಗಳ ಕುಲಪತಿಗಳ ಜತೆ ವಿಷದವಾಗಿ ಚರ್ಚೆ ನಡೆಸಿಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಶಿಕ್ಷಣ ನೀತಿಯ ಬಗ್ಗೆ ಗೊಂದಲ ಬೇಡ
"ಶಿಕ್ಷಣ ನೀತಿಯ ಬಗ್ಗೆ ಕೆಲವರು ಕೆಲ ಅನುಮಾನ, ಪ್ರಶ್ನೆಗಳನ್ನು ಎತ್ತುತ್ತಿದ್ದು, ಎಲ್ಲಕ್ಕೂ ಈಗಾಗಲೇ ಉತ್ತರ ನೀಡಲಾಗಿದೆ. ಮತ್ತೆ ಬೇಕಿದ್ದರೂ ಸರಕಾರ ಉತ್ತರ ನೀಡಲು ಸಿದ್ಧವಿದೆ ಎಂದ ಅವರು ಪ್ರಧಾನಿ ನರೇಂದ್ರ ಮೋದಿ ಅವರು 38 ವರ್ಷಗಳ ನಂತರ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸಂಕಲ್ಪ ಮಾಡಿದ್ದರು. ಈ ನೀತಿಯನ್ನು ರೂಪಿಸುವ ಮುನ್ನ ಎಲ್ಲ ವಿವಿಗಳ ಉಪ ಕುಲಪತಿಗಳು, ವಿಷಯವಾರು ತಜ್ಞರು, ವಿಜ್ಞಾನಿಗಳು, ತಂತ್ರಜ್ಞರು, ಭಾಷಾತಜ್ಞರು ಸೇರಿ ಎಲ್ಲ ಕ್ಷೇತ್ರಗಳ ಮುಂಚೂಣಿ ವ್ಯಕ್ತಿಗಳ ಅಭಿಪ್ರಾಯ ಪಡೆಯಲಾಗಿದೆ. ಐದು ವರ್ಷಗಳ ಕಾಲ ಅಧ್ಯಯನ ನಡೆಸಿದ ಕರಡು ನಂತರ ಕೇಂದ್ರಕ್ಕೆ ಅಂತಿಮ ವರದಿ ಸಲ್ಲಿಸಲಾಯಿತು" ಎಂದು ಡಾ. ಅಶ್ವಥ್ ನಾರಾಯಣ ವಿವರಿಸಿದ್ದಾರೆ.
ಕೇಂದ್ರವು ಶಿಕ್ಷಣ ನೀತಿಯನ್ನು ಪ್ರಕಟಿಸಿದ ಕೂಡಲೇ ರಾಜ್ಯ ಸರಕಾರ ನೀತಿಯನ್ನು ಅಂಗೀಕರಿಸಿತಲ್ಲದೆ, ಸಂಪುಟದ ಒಪ್ಪಿಗೆ ಸಿಕ್ಕ ಕೂಡಲೇ ಸದನದ ಒಳಗೆ ಹೊರಗೆ ವ್ಯಾಪಕ ಚರ್ಚೆ ನಡೆಸಲಾಯಿತು. ವಿದ್ಯಾರ್ಥಿಗಳು ತಮಗಿಷ್ಟವಾದ ಕೋರ್ಸ್ ಗಳನ್ನು ಮುಕ್ತವಾಗಿ ಆಯ್ಕೆ ಮಾಡಿಕೊಳ್ಳುವ ಬಹುಆಯ್ಕೆಯ ಮತ್ತು ಬಹುಶಿಸ್ತೀಯ ವ್ಯವಸ್ಥೆ ಶಿಕ್ಷಣ ನೀತಿಯಲ್ಲಿದೆ. ಜತೆಗೆ, ಶೇಕಡಾ 40ರಷ್ಟು ಡಿಜಿಟಲ್ ಕಲಿಕೆಗೂ ಅವಕಾಶ ಮಾಡಿಕೊಡಲಾಗುತ್ತದೆ. ಡಿಜಿಟಲ್ ಕಲಿಕೆ ಅನ್ನುವುದು ಕಡ್ಡಾಯವಲ್ಲ. ಅಗತ್ಯ ಇದ್ದವರು ಮಾತ್ರ ಪಡೆಯಬಹುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಅವರು ಅವರು ವಿವರಿಸಿದರು.
ಸಿದ್ದರಾಮಯ್ಯರ ಅನುಮಾನಕ್ಕೆ ಉತ್ತರಿಸಿದ್ದೇವೆ
ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೇಳಿದ್ದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ. "ವಿಪಕ್ಷ ನಾಯಕ ಸಿದ್ದರಾಮಯ್ಯ ಎತ್ತಿರುವ ಎಲ್ಲ ಪ್ರಶ್ನೆಗಳಿಗೆ ಈಗಾಗಲೇ ಉತ್ತರ ನೀಡಿದ್ದೇವೆ. ಅಗತ್ಯಬಿದ್ದರೆ, ಮತ್ತಷ್ಟು ವಿವರ ನೀಡಲಾಗುವುದು. ಇದರಲ್ಲಿ ಮುಚ್ಚುಮರೆ ಏನಿಲ್ಲ. ಅತ್ಯಂತ ಪಾರದರ್ಶಕವಾಗಿ, ರಾಷ್ಟ್ರದ ಹಿತದೃಷ್ಟಿಯಿಂದ ಜಾರಿಗೆ ಬರುತ್ತಿರುವ ಶಿಕ್ಷಣ ನೀತಿ. ಮುಖ್ಯವಾಗಿ ಕನ್ನಡದ ಕಲಿಕೆಯ ಬಗ್ಗೆ ಸಿದ್ದರಾಮಯ್ಯ ಹೇಳಿರುವ ಮಾತು ಸತ್ಯಕ್ಕೆ ದೂರವಾದದ್ದು" ಎಂದು ಡಾ. ಅಶ್ವಥ್ ನಾರಾಯಣ ಹೇಳಿದರು
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಡುತ್ತೇವೆ. ಉನ್ನತ ಶಿಕ್ಷಣ ಸುಧಾರಣೆಗೆ ಕನಿಷ್ಠ 3000 ಕೋಟಿಯಾದರೂ ಬೇಕು. ವರ್ಷಕ್ಕೊಂದು ಸಾವಿರ ಕೋಟಿ ಕೊಟ್ಟರೆ ಒಳ್ಳೆಯದು. ಈ ಬಗ್ಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.
Recommended Video
ಎಲ್ಲಿಗೆ ಬಂತು ಕಾಲೇಜು ವಿದ್ಯಾರ್ಥಿಗಳ ಲಸಿಕೆ ಅಭಿಯಾನ?
18 ವರ್ಷಕ್ಕೂ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಅಭಿಯಾನವನ್ನು ರಾಜ್ಯ ಸರ್ಕಾರ ಕಳೆದ ತಿಂಗಳು ಆರಂಭಿಸಿತ್ತು. ಜುಲೈ ಅಂತ್ಯದ ಒಳಗೆ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಕೊಡುವ ತೀರ್ಮಾನವನ್ನು ಆರೋಗ್ಯ ಇಲಾಖೆಯೊಂದಿಗೆ ಉನ್ನತ ಶಿಕ್ಷಣ ಇಲಾಖೆ ಮಾಡಿತ್ತು. ಅದರಂತೆ ಎಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗಿದೆ ಎಂಬ ಮಾಹಿತಿಯನ್ನು ಉನ್ನತ ಶಿಕ್ಷಣ ಇಲಾಖೆ ಕೊಟ್ಟಿಲ್ಲ. ಹೀಗಾಗಿ ಏಕಾಏಕಿ ಕಾಲೇಜು ಆರಂಭೀಸಿದರೆ ಹೇಗೆ? ಎಂಬ ಆತಂಕ ವಿದ್ಯಾರ್ಥಿಗಳ ಪಾಲಕರನ್ನು ಕಾಡುತ್ತಿದೆ. ಕನಿಷ್ಠ ಮುಂಜಾಗ್ರತಾ ಕ್ರಮಗಳೊಂದಿಗೆ ಕಾಲೇಜು ಆರಂಭಿಸಿ ಎಂಬುದು ವಿಧ್ಯಾರ್ಥಿಗಳು ಹಾಗೂ ಪಾಲಕರ ಒತ್ತಾಯವಾಗಿದೆ.