ಅಂಗನವಾಡಿ ಹುದ್ದೆಗಳ ನೇಮಕ: ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು?
ಬೆಂಗಳೂರು,ಜುಲೈ 09: ಅಂಗನವಾಡಿ ಕಾರ್ಯಕರ್ತೆಯರ 4180 ಹುದ್ದೆಗಳು ಹಾಗೂ ಸಹಾಯಕಿಯರ 9411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿದ್ದರಾಮಯ್ಯ ಅವರು, ನಗರ ಪ್ರದೇಶದಲ್ಲಿ ಸಹಾಯಕಿಯರ ಹುದ್ದೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಸೂಚನೆ ನೀಡಿದರು.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು. ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದರು.

ದೌರ್ಜನ್ಯ ತಡೆ ಅಧಿನಿಯಮದ ಅಡಿ ದಾಖಲಾಗಿರುವ ಒಟ್ಟು 26 ಕೊಲೆ ಪ್ರಕರಣಗಳಲ್ಲಿ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕಾಗಿದ್ದು, ಆದಷ್ಟು ಬೇಗನೆ ನೌಕರಿ ಒದಗಿಸಬೇಕು. ಜಿಲ್ಲೆಯಲ್ಲಿ ಉಪ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಸಬೇಕು.
ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗಾಗಿ ನೀಡಬೇಕು. ಪ್ರಸ್ತುತ 2684 ಅರ್ಜಿಗಳು ಬಾಕಿಯಿದ್ದು, ಅರ್ಹತೆ ಇದ್ದವರಿಗೆ ತಕ್ಷಣ ಪ್ರಮಾಣ ಪತ್ರ ನೀಡಬೇಕು. ವಿನಾಕಾರಣ ಸಿಂಧುತ್ವ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿ ಅವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಂಬೇಡ್ಕರ್ ಭವನ ನಿರ್ಮಾಣ ಕಾಮಮಗಾರಿ ಹಲವು ಕಡೆ ಅರ್ಧದಲ್ಲಿ ನಿಂತಿದ್ದು, ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮದಡಿ 298798 ಅರ್ಜಿ ಸ್ವೀಕೃತಗೊಂಡಿದ್ದು, 258086 ಅರ್ಜಿಗಳು ತಿರಸ್ಕೃತಗೊಂಡಿವೆ.
24186 ಅರ್ಜಿಗಳು ಇತ್ಯರ್ಥವಾಗದೇ ಬಾಕಿಯಿವೆ. ಇದುವರೆಗೆ 16426 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 56479 ಎಕ್ರೆ ಭೂಮಿ ಮಂಜೂರು ಮಾಡಲಾಗಿದೆ. ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಖಾತ್ರಿಪಡಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ರಾಜ್ಯದ 5ಜಿಲ್ಲೆಗಳ ಹಾಡಿಗಳಲ್ಲಿ ವಾಸಿಸುತ್ತಿರುವ ಜೇನುಕುರುಬ ಹಾಗೂ ಕೊರಗ ಜನಾಂಗದವರಿಗೆ ಸೌಲಭ್ಯಗಳನ್ನು ಕಲ್ಪಿಸಲು ಪಿಎಂ ಜನಮನ್ ಯೋಜನೆ ಜಾರಿಯಲ್ಲಿದೆ.
ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ 44040 ಜೇನುಕುರುಬ ಹಾಗೂ 13007 ಕೊರಗರು ಇದ್ದಾರೆ. ಈ ಜನಾಂಗದ 19 ಸಾವಿರ ಕುಟುಂಬಗಳಿದ್ದು, 6871 ಕುಟುಂಬಗಳಿಗೆ ಮಾತ್ರ ಮನೆಯಿದೆ. 12ಸಾವಿರ ಮನೆಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಸ್ಥಳ ಗುರುತಿಸಿ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು. ಗುರುತಿನ ಚೀಟಿ ಸಮಸ್ಯೆಯನ್ನು ಬಗೆಹರಿಸಬೇಕು. ಈ ಜನಾಂಗಗಳ ಅಭಿವೃದ್ಧಿಗೆ 9 ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಯೋಜನೆಗಳಿದ್ದು, ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಅನುಷ್ಠಾನ ಮಾಡಬೇಕು ಎಂದು ಸೂಚನೆ ನೀಡಿದರು.












Click it and Unblock the Notifications