'ಶೀಘ್ರದಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ'
ಹುಬ್ಬಳ್ಳಿ, ಅಕ್ಟೋಬರ್ 04: ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ ಸನ್ನಿಹಿತವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.
ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿರುವ ಭ್ರಷ್ಟ ಸರ್ಕಾರವನ್ನು ತೊಲಗಿಸಲು ನಮ್ಮ ಹೋರಾಟ ಮುಂದುವರಿಯಲಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲೂ ಹೋರಾಟ ನಡೆಸುತ್ತೇವೆ. ಸರ್ಕಾರದ ತಪ್ಪುಗಳನ್ನು ಜನರಿಗೆ ತಿಳಿಸುವುದು ವಿರೋಧ ಪಕ್ಷದ ಕರ್ತವ್ಯವಾಗಿದೆ. ಆ ಕೆಲಸ ನಿರಂತರವಾಗಿ ಇರಲಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಇಡೀ ದೇಶಕ್ಕೆ ಗೊತ್ತಾಗಿದೆ ಎಂದು ಟೀಕಿಸಿದರು.

ಇನ್ನು 12 ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ 1 ಕೋಟಿ ಗುರಿ ಮುಟ್ಟಬೇಕಿದೆ. ಈ ಸಂಬಂಧ ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪಿ, ರಾಜೀವ ಅವರೊಂದಿಗೆ ಹುಬ್ಬಳ್ಳಿಯಲ್ಲಿ ನಾಲ್ಕು ಜಿಲ್ಲೆಗಳ ಸಭೆ ನಡೆಸಿದ್ದೇವೆ. ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಬೇರೆ ಪಕ್ಷಗಳಿಗೆ ಕುಟುಂಬವೇ ಜೀವಾಳ. ಮುಂದೆ ಬರುವ ಚುನಾವಣೆಯಲ್ಲಿ ಬಿಜೆಪಿಗೆ ಗೆಲ್ಲುವ ಅವಕಾಶವಿದೆ. ಆ ದೃಷ್ಟಿಯಿಂದ ಸದಸ್ಯತ್ವ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರು.












Click it and Unblock the Notifications