ಸಿದ್ದರಾಮಯ್ಯ ಅಧಿಕಾರ ಹೋದ್ರೆ ಜನ ಪ್ರಧಾನಿ ಮನೆಗೆ ನುಗ್ತಾರೆ; ಹೀಗಂದ ಶಾಸಕ ಯಾರು?
ಸಿಎಂ ಸಿದ್ದರಾಮಯ್ಯ ಅವರ ಪರ ಮಾತನಾಡುವ ಭರದಲ್ಲಿ ಬಾಂಗ್ಲಾದೇಶದ ಘಟನೆಗಳನ್ನು ಹೋಲಿಕೆ ಮಾಡುತ್ತಿರುವ ಟ್ರೆಂಡ್ ಸದ್ಯ ಕಾಂಗ್ರೆಸ್ನಲ್ಲಿ ಹೆಚ್ಚಾಗಿದೆ ಅಂತಾನೇ ಹೇಳಬಹುದು. ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ನಂತರ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಜಿ.ಎಸ್.ಪಾಟೀಲ್ ಕೂಡ ಬಾಂಗ್ಲಾದಲ್ಲಿ ಪ್ರಧಾನಿ ಆದ ಗತಿ ಇಲ್ಲಿಯ ಪ್ರಧಾನಿಗೂ ಆಗಲಿದೆ ಎನ್ನುವ ಮೂಲಕ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿದ್ದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು ಬಾಂಗ್ಲಾದೇಶದಲ್ಲಿ ಅಲ್ಲಿನ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಆದ ಗತಿಯೇ ಇಲ್ಲಿಯೂ ನಿಮಗೆ ಆಗಲಿದೆ ಎಂದು ರಾಜ್ಯಪಾಲರ ಬಗ್ಗೆ ಹೇಳಿಕೆ ನೀಡಿದ್ದರು. ಇದಕ್ಕೆ ರಾಜ್ಯ ರಾಜಕಾರಣದಲ್ಲಿ ಕೋಲಾಹಲವೇ ಸೃಷ್ಟಿಯಾಗಿತ್ತು.

ಇದೀಗ ರೋಣ ಶಾಸಕ ಜಿ.ಎಸ್.ಪಾಟೀಲ್ ಕೂಡ ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ, ಬಾಂಗ್ಲಾದೇಶದಲ್ಲಿ ಪ್ರಧಾನಿ ಮನೆಗೆ ಜನ ನುಗ್ಗಿದಂತೆ ನಮ್ಮ ಪ್ರಧಾನಿ ಮೋದಿ ಅವರ ಮನೆಗೂ ಜನ ನುಗ್ಗುವ ದಿನಗಳು ದೂರವೇನಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಖಂಡನೆ ವ್ಯಕ್ತಪಡಿಸಿದ್ದಾರೆ.
ʼರಾಜ್ಯಪಾಲರ ಮೇಲೆ ಬಾಂಗ್ಲಾದೇಶದ ಮಾದರಿಯಲ್ಲಿ ಕಲ್ಲು ತೂರಾಟ ಮಾಡಿ ದಾಳಿ ಮಾಡುತ್ತೇವೆ ಎಂದು ನಾಲಿಗೆ ಹರಿಬಿಟ್ಟಿದ್ದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಹೇಳಿಕೆ ಬೆನ್ನಲ್ಲೇ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಬಾಂಗ್ಲಾದೇಶದ ರೀತಿಯಲ್ಲಿ ಪ್ರಧಾನಿ ಮೋದಿ ಅವರ ಮೇಲೆ ದಾಳಿ ಮಾಡುತ್ತೇವೆ ಎಂದು ನಾಲಿಗೆ ಹರಿಬಿಟ್ಟಿರುವುದು ಸರಿಯಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼಚುನಾಯಿತ ಜನಪ್ರತಿನಿಧಿಗಳು, ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಜನಪ್ರತಿನಿಧಿಗಳು ಸಾಂವಿಧಾನಿಕ ಹುದ್ದೆಗಳಲ್ಲಿ ಕುಳಿತಿರುವವರ ವಿರುದ್ಧ ಈ ರೀತಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು ಎಷ್ಟು ಸರಿ? ಎಂದು ಅಶೋಕ್ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಕಾಂಗ್ರೆಸ್
ಪಕ್ಷಕ್ಕೆ ಬಾಂಗ್ಲಾದೇಶ, ಪಾಕಿಸ್ತಾನ ಮಾದರಿಯ ಆರಾಜಕತೆ, ಗಲಭೆ ಅಂದರೆ ಯಾಕಿಷ್ಟು ವ್ಯಾಮೋಹ? ಕರ್ನಾಟಕ ಶಾಂತಿಯಿಂದ ಇರುವುದನ್ನ, ಕನ್ನಡಿಗರು ನೆಮ್ಮದಿಯಿಂದ ಇರುವುದನ್ನ, ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲವೆ? ಎಂದು ಪ್ರಶ್ನಿಸಿರುವ ಅವರು ಅಧಿಕಾರ ಯಾರೊಬ್ಬರ ಸ್ವತ್ತಲ್ಲ, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ನೆಲದ ಕಾನೂನಿಗೆ ಎಲ್ಲರೂ ತಲೆಬಾಗಲೇ ಬೇಕು ಎಂದು ಹೇಳಿದ್ದಾರೆ.
ಈ ಮೊದಲು ರಾಜ್ಯಪಾಲರ ಬಗ್ಗೆ ಐವಾನ್ ಡಿಸೋಜಾ ಹೇಳಿಕೆ ನೀಡಿದ ನಂತರ ಅವರ ಮನೆಯ ಮೇಲೆ ಕಲ್ಲು ತೂರಾಟ ಕೂಡ ನಡೆದಿತ್ತು. ರಾಜ್ಯಪಾಲರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದಾರೆ ಎಂದು ಡಿಸೋಜಾ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಘಟಕ ದೂರು ಕೂಡ ನೀಡಿತ್ತು.












Click it and Unblock the Notifications