287 ಕಿ.ಮೀ. ವರ್ತುಲ ರೈಲ್ವೆ ಡಿಪಿಆರ್ ಸಿದ್ಧ: ಮಹತ್ವದ ಮಾಹಿತಿ ನೀಡಿದ ವಿ ಸೋಮಣ್ಣ
ಬೆಂಗಳೂರು, ಫೆಬ್ರವರಿ 15: ಬೆಂಗಳೂರು ನಗರವು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಇಲ್ಲಿನ ಸುಗಮ ಸಂಚಾರ ವ್ಯವಸ್ಥೆಗೆ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೀಳಲಿಗೆ ಮುಂತಾದ ಸುತ್ತಮುತ್ತಲಿನ ಪಟ್ಟಣಗಳನ್ನು ಸಂಪರ್ಕಿಸುವ 287 ಕಿ.ಮೀ. ಉದ್ದದ ವರ್ತುಲ ರೈಲು ಯೋಜನೆಗೆ ಡಿಪಿಆರ್ ಅಂತಿಮ ಹಂತದಲ್ಲಿದೆ. ದೇವನಹಳ್ಳಿಯಲ್ಲಿ ಮೆಗಾ ರೈಲ್ವೆ ಟರ್ಮಿನಲ್ ಕೂಡ ಅಸ್ತಿತ್ವಕ್ಕೆ ಬರಲಿದೆ. ಒಟ್ಟಾರೆ ರಾಜ್ಯದಲ್ಲಿ ರೈಲ್ವೆ ಜಾಲವನ್ನು ಕ್ಷಿಪ್ರಗತಿಯಲ್ಲಿ ವಿಸ್ತರಿಸಲಾಗುತ್ತಿದ್ದು, ಈ ವರ್ಷ 7 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಕೊಡಲಾಗಿದೆ. 2030ರ ವೇಳೆಗೆ ರೈಲು ಮಾರ್ಗಗಳ ಸಂಪೂರ್ಣ ವಿದ್ಯುದೀಕರಣ ಆಗಲಿದೆ ಎಂದು ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ತಿಳಿಸಿದರು.
ರಾಜ್ಯದಲ್ಲಿ ಕೇಂದ್ರದ ಸಹಯೋಗದೊಂದಿಗೆ ಪ್ರಗತಿಯಲ್ಲಿರುವ ರೈಲ್ವೆ ಯೋಜನೆಗಳಿಗೆ 12 ಸಾವಿರ ಕೋಟಿ ರೂ. ಒದಗಿಸಲಾಗಿದೆ. ಬೆಂಗಳೂರು ಸಬರ್ಬನ್ ರೈಲ್ವೆ ಯೋಜನೆಯು 2027ರ ಕೊನೆಯ ಹೊತ್ತಿಗೆ ಮುಗಿಯುವ ನಿಚ್ಚಳ ಲಕ್ಷಣಗಳು ಕಾಣುತ್ತಿವೆ. ಜಿಲ್ಲಾ ಕೇಂದ್ರಗಳ ಹೊರವಲಯದಲ್ಲಿ ಭೂಮಿ, ವಿದ್ಯುತ್ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸಿದರೆ ಕೈಗಾರಿಕಾ ಬೆಳವಣಿಗೆ ಮೂರು ಪಟ್ಟು ಹೆಚ್ಚಾಗಲಿದೆ. ಉದ್ಯಮಿಗಳು ಕೋಲಾರ, ತುಮಕೂರು, ಚಾಮರಾಜನಗರ, ಮೈಸೂರು, ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕಗಳ ಕಡೆಗೂ ಹೋಗಿ, ಬಂಡವಾಳ ಹೂಡಬೇಕು. ರಾಜ್ಯ ಮತ್ತು ಕೇಂದ್ರಗಳು ರೂಪಿಸಿರುವ ಕೈಗಾರಿಕಾ ನೀತಿಗಳು ಇದಕ್ಕೆ ಪೂರಕವಾಗಿಯೇ ಇವೆ ಎಂದು ಅವರು ವಿವರಿಸಿದರು.

ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಮಾತನಾಡಿ, ಬಹುಧ್ರುವೀಕರಣದ ಜಗತ್ತಿನಲ್ಲಿ ವಿಶ್ವಸಂಸ್ಥೆ ಕೂಡಾ ಮೂಲ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ. ಅಸಮಾನತೆ, ತಾರತಮ್ಯಗಳು ಅಲ್ಲೂ ಇದ್ದು, ಅದನ್ನು ಅರ್ಥ ಮಾಡಿಕೊಂಡರಷ್ಟೇ ಪರ್ಯಾಯ ಜಾಗತಿಕ ವ್ಯವಸ್ಥೆಯ ಬಗ್ಗೆ ಚಿಂತಿಸಬಹುದು. ಕೋವಿಡ್ ಸಂಕಷ್ಟ ಪರಿಸ್ಥಿತಿ ಜಾಗತಿಕ ಪೂರೈಕೆ ಸರಣಿಯ ಸ್ವರೂಪ ಬದಲಾಗಿದ್ದನ್ನು ಜಗತ್ತಿಗೆ ತೋರಿಸಿಕೊಟ್ಟಿತು. ಕೋವಿಡ್ ನಂತರದ ಜಾಗತಿಕ ನಾಯಕರು ಗಡಿಯಾಚಿನ ವಿಶ್ವದಲ್ಲಿ ಪ್ರಬಲರಾಗುವ ಬದಲಿಗೆ ತಮ್ಮ ಗಡಿರೇಖೆಯೊಳಗೆ ಅಂದರೆ ಆಂತರಿಕವಾಗಿ ಬಲಿಷ್ಠರಾಗಲು ಯತ್ನಿಸುತ್ತಿದ್ದಾರೆ ಎಂದು ತರೂರ್ ವಿವರಿಸಿದರು.
ಪ್ರಜಾತಂತ್ರ ವ್ಯವಸ್ಥೆ ಉತ್ತಮಗೊಳ್ಳುವ ನಿಟ್ಟಿನಲ್ಲಿ ಮತದಾರರು ಸುಶಿಕ್ಷಿತರಾಗುವುದು ಅತಿ ಮುಖ್ಯ. ಜನರಿಗೆ ಉತ್ತಮ ಶಿಕ್ಷಣ ನೀಡಿ, ಸಬಲೀಕರಣಗೊಳಿಸಿದಲ್ಲಿ, ದಕ್ಷ ಸರ್ಕಾರ ರಚನೆ ಖಾತರಿಯಾಗಲಿದೆ. ನಮ್ಮ ಸಮಾಜದ ತಳವರ್ಗದ ಜನರಲ್ಲಿ ಖರೀದಿ ಸಾಮರ್ಥ್ಯ ಅತಿ ಕಡಿಮೆ ಇದೆ. ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 80 ಕೋಟಿ ಜನರಿಗೆ ಉಚಿತ ಆಹಾರಧಾನ್ಯ ಒದಗಿಸುತ್ತಿದೆ. ಅಂದರೆ, ಇದರರ್ಥ ಇಷ್ಟು ಭಾರಿ ಸಂಖ್ಯೆಯ ಜನರಲ್ಲಿ ಖರೀದಿ ಸಾಮರ್ಥ್ಯ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟರು.
ಜಗತ್ತಿನಲ್ಲೇ ಭಾರತ ಅತಿಹೆಚ್ಚು ನಿರುದ್ಯೋಗಿಗಳನ್ನು ಹೊಂದಿದ್ದು, ಯುವಜನರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ. ಏನನ್ನು ಚಿಂತಿಸಬೇಕು ಎಂಬುದರ ಬದಲಿಗೆ ಹೇಗೆ ಚಿಂತಿಸಬೇಕು ಎಂಬುದನ್ನು ವಿದ್ಯಾರ್ಥಿಗಳಲ್ಲಿ ಕಲಿಸಬೇಕಿದೆ. ಯುವಜನರನ್ನು ಕೌಶಲ್ಯಪೂರ್ಣರನ್ನಾಗಿಸಿ, ಉದ್ಯೋಗ ದೊರಕಿಸಬೇಕಿದೆ ಎಂದರು.
ಕೃತಕ ಬುದ್ಧಿಮತ್ತೆ ಸೇರಿದಂತೆ ತಂತ್ರಜ್ಞಾನದ ಬಳಕೆಯಿಂದ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಭಾರಿ ಬದಲಾವಣೆಯಾಗಲಿದ್ದು, ವಿದ್ಯಾರ್ಥಿಗಳು ಮತ್ತು ಯುವಜನರನ್ನು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಸಜ್ಜುಗೊಳಿಸುವ ಅಗತ್ಯವಿದೆ. ಪ್ರಸ್ತುತ ಜಾಗತಿಕ ಉದ್ಯೋಗ ವಲಯದಲ್ಲಿರುವ ಶೇಕಡ 30ರಷ್ಟು ಉದ್ಯೋಗಗಳು ಇನ್ನು ಐದು ವರ್ಷಗಳಲ್ಲಿ ಕಣ್ಮರೆಯಾಗಲಿವೆ ಎಂದು ಹೇಳಿದರು. ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಎ. ಪಪಾಂಡ್ರೂ, ಉತ್ತಮ, ಆದರ್ಶ ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ ನಾಗರಿಕರ ಮೇಲೆ ವಿಶ್ವಾಸ ಇಡಬೇಕು; ಶಿಕ್ಷಣ ಮತ್ತು ಪ್ರಜಾತಂತ್ರ ಜತೆಜತೆಯಾಗಿ ಮುನ್ನಡೆಯಬೇಕು ಎಂದರು.
ಉತ್ತಮ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಉತ್ತರದಾಯತ್ವ ಮತ್ತು ಪಾರದರ್ಶಕತೆ ಅತಿ ಮುಖ್ಯ. ಇವುಗಳ ಕೊರತೆಯಿಂದಾಗಿಯೇ ಗ್ರೀಸ್ ಆರ್ಥಿಕ ಸಂಕಷ್ಟ ಎದುರಿಸಬೇಕಾಯಿತು. ಗ್ರೀಸ್ ನಲ್ಲಿ ಜನರ ಹಣ ಸಾರ್ವಜನಿಕರ ಹಿತಾಸಕ್ತಿಗೆ ವಿನಿಯೋಗವಾಗಲಿಲ್ಲ. ರಾಜಕಾರಣಿಗಳ ಗಮನ ಕೇವಲ ಅಧಿಕಾರ ಹಿಡಿಯುವುದರತ್ತಲೇ ಇತ್ತು. ಹೀಗಾದಾಗ ಸಂಕಷ್ಟ ತಲೆದೋರುವುದು ಸಹಜ ಎಂದರು.












Click it and Unblock the Notifications