ದೊಡ್ಡದಾಗುತ್ತಿದೆ ಸಿಎಂ ಆಕಾಂಕ್ಷಿಗಳ ಪಟ್ಟಿ: ಮುಂಚೂಣಿಯಲ್ಲಿ ಯಾರಿದ್ದಾರೆ?
ಬೆಂಗಳೂರು, ಸೆಪ್ಟೆಂಬರ್ 06: ರಾಜ್ಯದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದ ಸಂದರ್ಭದಲ್ಲಿ ಬಂದು ನಿಂತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿ ವೈ ವಿಜಯೇಂದ್ರ ಅವರು, ಕಾಂಗ್ರೆಸ್ ಸರಕಾರದ ಬೆದರಿಕೆಗಳು, ಬೆದರಿಕೆ ತಂತ್ರಗಳು, ಕುತಂತ್ರ ಇದ್ಯಾವುದಕ್ಕೂ ಕೂಡ ಭಯ ಪಡುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಳೆದ ಕೆಲವು ದಿನಗಳಿಂದ ಹೋರಾಟ ಮಾಡುತ್ತ ಬಂದಿದೆ. ಮುಖ್ಯಮಂತ್ರಿಗಳ ಪರಿಸ್ಥಿತಿ, ಸಚಿವರ ಪರಿಸ್ಥಿತಿ ಸಹಜವಾಗಿಯೇ ನಮಗೆ ಅರ್ಥವಾಗುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದಿದ್ದು, ಅದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿಯೇ ಪಿತೂರಿ ನಡೆದಿದೆ. ಸಂದರ್ಭ ಬಂದಾಗ ಅದಕ್ಕೆ ಸೂಕ್ತ ಉತ್ತರ ಕೊಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಎತ್ತಿನಹೊಳೆ ಯೋಜನೆ: ಕಳೆದ ಹಲವಾರು ದಶಕಗಳಿಂದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಭಾಗಕ್ಕೆ ನೀರು ಕೊಡುವ ಯೋಜನೆ ಇದಾಗಿದೆ. ಇದರ ಆರಂಭದಲ್ಲಿ ಸುಮಾರು 8,500 ಕೋಟಿ ಯೋಜನಾ ವೆಚ್ಚ ಇದ್ದುದು ಈಗ ಅದು 20-22,500 ಕೋಟಿಗೆ ಏರಿದೆ. ಈ ಯೋಜನೆಗೆ ಚಾಲನೆ ನೀಡಿದ್ದು ಸಂತೋಷ; ಆದರೆ, ಅದರ ಮೂಲ ಉದ್ದೇಶ ಈಡೇರಲಿದೆಯೇ ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ ಎಂದು ತಿಳಿಸಿದರು.
ಸಿಎಂ, ಡಿಸಿಎಂ ಕ್ರೆಡಿಟ್ ವಾರ್
ಸಿಎಂ, ಡಿಸಿಎಂ ಕ್ರೆಡಿಟ್ ವಾರ್ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ಹೋಗುವ ಮುಂಚಿತವಾಗಿಯೇ ನಿನ್ನೆ ದಿನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪೂಜೆ ಪುನಸ್ಕಾರ ಮಾಡಿದ್ದನ್ನು ಗಮನಿಸಿದ್ದೇನೆ. ಮುಖ್ಯಮಂತ್ರಿ ಸ್ಥಾನ ಅಲುಗಾಡುವ ಸಂದರ್ಭ ಇದಾಗಿದೆ. ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ. ಡಿ.ಕೆ. ಶಿವಕುಮಾರ್ ಕೂಡ ಆ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಇರುವವರು ಎಂದು ವಿಶ್ಲೇಷಿಸಿದರು. ಕ್ರೆಡಿಟ್ ತೆಗೆದುಕೊಳ್ಳುವುದು ದೊಡ್ಡ ವಿಚಾರವಲ್ಲ. ಎತ್ತಿನಹೊಳೆ ಯೋಜನೆ ಆ ಭಾಗದ ಜನರಿಗೆ ಅನುಕೂಲ ಆಗಬೇಕು. ಅದರಲ್ಲಿ ಪ್ರಾಮಾಣಿಕತೆ ತೋರಿಸಿದರೆ ಸಾಕು ಎಂದರು.
ಇದೇ 2ರಂದು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ದೆಹಲಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲೂ ಸದಸ್ಯತ್ವ ಅಭಿಯಾನವು ದೊಡ್ಡ ಮಟ್ಟದಲ್ಲಿ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಗೌರಿ ಗಣೇಶ ಹಬ್ಬದ ಈ ಸಂದರ್ಭದಲ್ಲಿ ನಮ್ಮೆಲ್ಲರ ಹಿರಿಯರಾದ ರಾಮಚಂದ್ರೇಗೌಡರ ಸದಸ್ಯತ್ವ ನೋಂದಣಿ ಮಾಡಿದ್ದೇವೆ. ರಾಮಚಂದ್ರೇಗೌಡರು ಬಿ.ಎಸ್.ಯಡಿಯೂರಪ್ಪ ಅವರ ಜೊತೆಜೊತೆಗೆ ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿದವರು; ಬಿಜೆಪಿಗೆ ಭದ್ರ ಬುನಾದಿ ಹಾಕಿದವರಲ್ಲಿ ರಾಮಚಂದ್ರೇಗೌಡರು ಕೂಡ ಒಬ್ಬರು. ಅವರ ಆಶೀರ್ವಾದ ಪಡೆದು ಸದಸ್ಯತ್ವ ನೋಂದಣಿ ಮಾಡಿದ್ದೇವೆ ಎಂದು ಹೇಳಿದರು.
ವೃತ್ತಗಳಲ್ಲಿ ಕುಳಿತು ಬಿಜೆಪಿ ಸದಸ್ಯತ್ವ ನೋಂದಣಿ ನಡೆಸಿದ್ದನ್ನು ನೆನಪಿಸಿಕೊಂಡ ರಾಮಚಂದ್ರೇಗೌಡರು, ಈಗ ಆಧುನಿಕ ರೀತಿಯಲ್ಲಿ ಮೊಬೈಲ್ ಮೂಲಕ ಸದಸ್ಯತ್ವ ನೋಂದಾಯಿಸುವ ಕಾರ್ಯ ನಡೆದಿದೆ. ಇದೊಂದು ಒಳ್ಳೆಯ ಸೂಚನೆ ಎಂದು ತಿಳಿಸಿದರು. ಮೋದಿಜೀ ಅವರು ಮತ್ತೊಮ್ಮೆ ಅಂದರೆ ನಾಲ್ಕನೇ ಬಾರಿಗೆ ಪ್ರಧಾನಿ ಆಗಲಿ ಎಂದು ಹಾರೈಸಿದರು.












Click it and Unblock the Notifications