ದಲಿತರಿಗೆ ಮಹಾಮೋಸ; ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಬಾರದು: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು, ಆಗಸ್ಟ್01: ದಲಿತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರು ಮತ್ತು ಸಮಾಜ ಕಲ್ಯಾಣ ಸಚಿವರು ಮಾಡುತ್ತಿರುವ ಮಹಾಮೋಸ ಮಾಡುತ್ತಿದ್ದಾರೆ. ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಬಾರದು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಯ 11 ಸಾವಿರ ಕೋಟಿ ರೂಪಾಯಿಯನ್ನು ಬಳಸುತ್ತಿರುವುದಾಗಿ ರಾಜ್ಯದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದು ದಲಿತ ಸಮುದಾಯಕ್ಕೆ ಮಾಡುತ್ತಿರುವ ಮಹಾಮೋಸ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳ ನೆಪ ಹೇಳಿ ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ಮುಂದಾದರೆ ಅದರ ವಿರುದ್ಧ ರಾಜ್ಯಾದ್ಯಂತ ತೀವ್ರ ರೀತಿಯ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ದಲಿತರಿಗೆ ಈ ಕಾಂಗ್ರೆಸ್ ಸರಕಾರವು ಅತಿ ಹೆಚ್ಚು ಹಣ ನೀಡಿ, ತೆರಿಗೆ ಹಣವನ್ನು ದಲಿತರಿಗೆ ಖರ್ಚು ಮಾಡುತ್ತಿದೆ ಎಂಬಂತೆ ಬೇರೆ ಬೇರೆ ಜಾತಿಯ ಸಾಮಾನ್ಯ ಜನರು ದಲಿತರ ಕುರಿತು ಸಿಟ್ಟಾಗುವಂತೆ ನಡೆದುಕೊಂಡಿತ್ತು. ಆದರೆ, ಸಿದ್ದರಾಮಯ್ಯನವರು ಮೆಟ್ರೊ, ಕೆರೆಗಳ ಹೂಳೆತ್ತಲು ಮತ್ತು ರಸ್ತೆ ಅಭಿವೃದ್ಧಿಗೆ ಪಿಡಬ್ಲ್ಯೂಡಿಗೆ ಸುಮಾರು 19 ಸಾವಿರ ಕೋಟಿಯಿಂದ 20 ಸಾವಿರ ಕೋಟಿ ಹಣವನ್ನು ಕೊಟ್ಟಿದ್ದರು. ಈ ಮೂಲಕ ದಲಿತರಿಗೆ ಸಿದ್ದರಾಮಯ್ಯರ ಸರಕಾರ ವಂಚನೆ ಮಾಡಿತ್ತು ಎಂದು ಹೇಳಿದರು.
2014ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ. ವಿಶೇಷ ಯೋಜನೆಯನ್ನು ಜಾರಿಗೊಳಿಸಿದ್ದರು. ಇಡೀ ದಲಿತ ಸಮುದಾಯವು ಕಾಂಗ್ರೆಸ್ ಸರಕಾರವು ಒಂದು ಉತ್ತಮ ಯೋಜನೆಯನ್ನು ಕೊಟ್ಟಿದೆ ಎಂದು ಖುಷಿ ಪಟ್ಟಿತ್ತು. ಆದರೆ, ಸಿದ್ದರಾಮಯ್ಯನವರು ಇಲ್ಲಿಯೂ ಕೂಡ ದಲಿತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿ ದಲಿತರ ಹೆಸರಿನಲ್ಲಿ ಅವರ ಅಭಿವೃದ್ಧಿಗೆ 26 ಸಾವಿರ ಕೋಟಿ ರೂಪಾಯಿಯನ್ನು ನೀಡಿದ್ದೇನೆ ಎಂದು ಹೇಳಿ ಅದರ ಅಡಿಯಲ್ಲಿ 7 ಡಿ ಕಾನೂನನ್ನೂ ಜೊತೆಯಲ್ಲೇ ಜಾರಿ ಮಾಡಿದ್ದರು.
ಈ ಹಣ ಖರ್ಚಾಗದಿದ್ದರೆ ಬೇರೆ ಇಲಾಖೆಗಳಿಗೆ ಖರ್ಚು ಮಾಡಬಹುದೆಂಬ ಅವಕಾಶವನ್ನು ಇದು ನೀಡಿತ್ತು. ಆ ನಂತರ ಬಿಜೆಪಿ ಸರಕಾರವನ್ನು ಕೂಡ ಅವರು ಹಲವು ಸಂದರ್ಭದಲ್ಲಿ ದಲಿತರಿಗೆ ನಾನು ವಿಶೇಷ ಯೋಜನೆ ಕೊಟ್ಟು ಬಹಳ ಸಹಾಯ ಮಾಡಿದ್ದೇನೆ. ಆದರೆ, ಬಿಜೆಪಿ ಅವರಿಗೆ ಸರಿಯಾಗಿ ಹಣ ಕೊಡುತ್ತಿಲ್ಲ ಎಂದು ಆಪಾದನೆಯನ್ನೂ ಮಾಡುತ್ತಿದ್ದರು. ನಾವು ಕಾನೂನುಬದ್ಧವಾಗಿ ಕೊಡಬಹುದಾದ ಎಲ್ಲ ಹಣವನ್ನು ದಲಿತರಿಗೆ ಸರಿಯಾಗಿ ನೀಡಿದ್ದೇವೆ. ಅದು ದಲಿತರಿಗೇ ಸೇರುವಂತೆ ನೋಡಿಕೊಂಡಿದ್ದೇವೆ ಎಂದರು.
ಗ್ಯಾರಂಟಿಗಳಿಗೂ ನಮಗೂ ಯಾವುದೇ ಸಂಬಂಧ ಇಲ್ಲ. ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ. ಹಣವನ್ನು ಸರಕಾರ ಯಾವುದೇ ಕಾರಣಕ್ಕೂ ಬೇರೆ ಉದ್ದೇಶಕ್ಕೆ ಬಳಸಕೂಡದು. ಈ ಹಣವನ್ನು ದಲಿತರ ಅಭಿವೃದ್ಧಿ ಹೊರತುಪಡಿಸಿ ಬೇರೆ ಉದ್ದೇಶಕ್ಕೆ ಬಳಸಿದರೆ ಕಾಂಗ್ರೆಸ್ ದಲಿತರಿಗೆ ಮಾಡುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ರಾಜ್ಯಾದ್ಯಂತ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
ಬಸವರಾಜ ಬೊಮ್ಮಾಯಿಯವರ ಸರಕಾರದ ಕಳೆದ ಬಜೆಟ್ನಲ್ಲಿ 30 ಸಾವಿರ ಕೋಟಿ ಮೊತ್ತವನ್ನು ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಗೆ ಮೀಸಲಿಟ್ಟಿದ್ದೆವು. ಇದನ್ನು ಕೂಡ ಟ್ವೀಟ್ ಮಾಡಿ ಸಿದ್ದರಾಮಯ್ಯನವರು ಅಣಕಿಸಿದ್ದರು. ಕೇವಲ 30 ಸಾವಿರ ಕೋಟಿ ನೀಡಿದ್ದಾರೆ. ಅವರಿಗೆ ಶೇ 24.5 ಹಣ ಮೀಸಲಿಟ್ಟರೆ 45 ಸಾವಿರ ಕೋಟಿ ಕೊಡಬೇಕಿತ್ತು. ಇವರು ದಲಿತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದರು.












Click it and Unblock the Notifications