ವಿಜ್ಞಾನಿಗಳ ಸಲಹೆ ಪಡೆದು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಬಿ.ಸಿ ನಾಗೇಶ್
ಬೆಂಗಳೂರು, ಸೆ. 06: ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಕರಡು ಪ್ರತಿ ಸಿದ್ದಪಡಿಸಿದ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಂದ ಹಿಡಿದು ಗ್ರಾಮಾಂತರ ಪ್ರದೇಶಗಳ ಶಾಲೆಗಳ ಶಿಕ್ಷಕರ ಅಭಿಪ್ರಾಯವನ್ನು ಕೂಡ ಪಡೆದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಂತದಲ್ಲಿ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಜಾರಿಗೆ ತರಲಾಗುವುದು ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
Recommended Video
ವಿದ್ಯಾಭಾರತಿ ಕರ್ನಾಟಕ ಮತ್ತು ಸಿಎಮ್ ಆರ್ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಸಿಎಮ್ ಆರ್ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ (ಸೆ.6) 'ಕರ್ನಾಟಕ ಶಾಲಾ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನ, ಅವಕಾಶಗಳು ಹಾಗೂ ಕಾರ್ಯತಂತ್ರಗಳು' ವಿಷಯದ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಸಚಿವರು ಮಾತನಾಡಿದರು.
ಹಲವು ವರ್ಷಗಳಿಂದ ಹಲವು ಸುತ್ತಿನಲ್ಲಿ ಅಭಿಪ್ರಾಯ, ಚರ್ಚೆ ನಡೆಸಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಸಿದ್ದಪಡಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಸಾರ ರಾಜ್ಯ ಮಟ್ಟದಲ್ಲಿ ಪಠ್ಯಕ್ರಮ ಸಿದ್ದಪಡಿಸಲು ಕರ್ನಾಟಕ ರಾಜ್ಯಕ್ಕೆ ಸೂಚನೆ ನೀಡಿರುವ ಕಾರಣ ಶಿಕ್ಷಣ ತಜ್ಞರು, ಶಿಕ್ಷಕರು, ವಿಷಯ ತಜ್ಞರು, ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ಎಲ್ಲರೂ ನೀಡುವ ಸಲಹೆ, ಸೂಚನೆಗಳನ್ನು ಸ್ವೀಕರಿಸುತ್ತೇವೆ. ಈ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಈ ಬಗ್ಗೆ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂಧು ಸಚಿವರು ತಿಳಿಸಿದರು.
'ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರವಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆಗಳನ್ನು ನಡೆಸಲಾಗುತ್ತಿದೆ. ಹಲವು ತಜ್ಞರ ಜೊತೆ ಚರ್ಚಿಸಲಾಗಿದೆ. ವಿಜ್ಞಾನಿ ಕಸ್ತೂರಿ ರಂಗನ್, ರಾಷ್ಟ್ರೀಯ ಶಿಕ್ಷಣ ನೀತಿ ಸಲಹಾ ಸಮಿತಿ ಸದಸ್ಯರು, ವಿಶ್ವವಿದ್ಯಾಲಯ ಅನುದಾನ ಆಯೋಗದ ಸದಸ್ಯರಾದ ಎಂ.ಕೆ ಶ್ರೀಧರ್ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವು ತಜ್ಞರು, ಇಲಾಖೆಯಲ್ಲಿ ಕೆಲಸ ಮಾಡಿದ ಹಾಲಿ ಮತ್ತು ನಿವೃತ್ತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅವರು ಇದೇ ವೇಳೆ ಹೇಳಿದರು.
'ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ಪಠ್ಯಕ್ರಮ ಸಿದ್ದಪಡಿಸಿದ ಬಳಿಕ ಹಾಲಿ ಇರುವ ಪಠ್ಯಕ್ರಮದೊಂದಿಗೆ ತುಲನೆ ಮಾಡಲಾಗುತ್ತದೆ. ಈ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಗುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಗೆ ರೂಪ ನೀಡಲು ಶೀಘ್ರದಲ್ಲೇ ಒಂದು ಟಾಸ್ಕ್ ಫೋರ್ಸ್ ಕೂಡ ರಚಿಸಲಾಗುತ್ತದೆ. ಟಾಸ್ಕ್ ಫೋರ್ಸ್ ಮೂಲಕ ಶಿಕ್ಷಣ ನೀತಿ ಜಾರಿಗೆ ವೇಗ ನೀಡಲಾಗುತ್ತದೆ' ಎಂದು ಸಚಿವರು ನುಡಿದರು.
'ಪ್ರಾಥಮಿಕ ಮತ್ತು ಪ್ರೌಢ ವಿಭಾಗಕ್ಕೆ ಕೌನ್ಸಿಲ್ ರಚಿಸಬೇಕು ಎಂಬ ಪ್ರಸ್ತಾವನೆ ಬಂದಿದೆ. ಸರಕಾರದಿಂದ ನಿಯಮಾನುಸಾರ ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಕೌನ್ಸಿಲ್ ರಚಿಸಲಾಗುತ್ತದೆ. ನಂತರ ಎಲ್ಲರ ಸಲಹೆಗಳ ಅನುಸಾರ ಪಠ್ಯಕ್ರಮದ ಕುರಿತು ತೀರ್ಮಾನಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಶಿಕ್ಷಣದಲ್ಲಿ ಸುಧಾರಣೆ, ಮೌಲ್ಯಾಧಾರಿತ ಶಿಕ್ಷಣ ನೀಡುವ ಶಿಕ್ಷಣ ನೀತಿ ಜಾರಿಗೆ ತರಲು ಪ್ರಯತ್ನಿಸುತ್ತೇವೆ' ಕೋವಿಡ್ ಇರುವ ಕಾರಣದಿಂದ ಉನ್ನತ ಶಿಕ್ಷಣ ಹಂತದಲ್ಲಿ ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡುವ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ಸಿಎಂಆರ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕೆ.ಸಿ ರಾಮಮೂರ್ತಿ, ರಾಷ್ಟ್ರೀಯ ಶಿಕ್ಷಣ ನೀತಿ ಸಲಹಾ ಸಮಿತಿ ಸದಸ್ಯರು ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ ಸದಸ್ಯರಾದ ಪ್ರೊ. ಎಂ. ಕೆ. ಶ್ರೀಧರ್, ವಿಶ್ವಭಾರತಿ ರಾಷ್ಟ್ರೀಯ ಅಧ್ಯಕ್ಷರಾದ ದೂಸಿ ರಾಮಕೃಷ್ಣ ರಾವ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.