ಸೌಮ್ಯ ರೆಡ್ಡಿ ಸೋಲಿಸಿದ ಅಧಿಕಾರಿಗಳು ರಾಮಲಿಂಗಾರೆಡ್ಡಿ ಬಳಿ ಕ್ಷಮೆ ಕೇಳಿದ್ದಾರೆ : ಅಚ್ಚರಿ ರಹಸ್ಯ ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು, ಏಪ್ರಿಲ್ 01: ಸೌಮ್ಯ ರೆಡ್ಡಿ ಸೋತಿಲ್ಲ, ಅಧಿಕಾರಿಗಳಿಂದ ಅವರು ಸೋಲಬೇಕಾಯಿತು. ಒತ್ತಡಕ್ಕೆ ಒಳಗಾಗಿ ನಾವು ಸೌಮ್ಯರೆಡ್ಡಿ ಅವರನ್ನು ಸೋಲಿಸಬೇಕಾಯಿತು ಎಂದು ಅಕ್ರಮದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ರಾಮಲಿಂಗಾರೆಡ್ಡಿ ಅವರ ಬಳಿ ಬಂದು ಕ್ಷಮಾಪಣೆ ಕೇಳಿದರು ಎನ್ನುವ ಸಂಗತಿ ತಿಳಿಯಿತು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ನಾಮಪತ್ರ ಸಲ್ಲಿಕೆಗೂ ಮುಂಚಿತವಾಗಿ ಜಯನಗರದಲ್ಲಿ ನಡೆದ ಮೆರವಣಿಗೆ ವೇಳೆ ಮಾತನಾಡಿದ ಡಿ ಕೆ ಶಿವಕುಮಾರ್, ಸೌಮ್ಯ ರೆಡ್ಡಿ ನಮ್ಮ ಮನೆ ಮಗಳು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲಿ ಮನವಿ ಮಾಡಿದರು.

"ಐಶ್ವರ್ಯ ಬೇರೆಯಲ್ಲ, ಸೌಮ್ಯ ರೆಡ್ಡಿ ಬೇರೆಯಲ್ಲ. ಸೌಮ್ಯ ನನ್ನ ಮನೆ ಮಗಳು, ಅತ್ಯಂತ ಕ್ರಿಯಾಶೀಲ ಹೆಣ್ಣುಮಗಳು. ಬೊಮ್ಮನಹಳ್ಳಿ, ಬಸವನಗುಡಿ ಸೇರಿದಂತೆ ಈ ಕ್ಷೇತ್ರದ ಎಲ್ಲಾ ಕಡೆಯೂ ಹೆಚ್ಚು ಮತಗಳು ಸೌಮ್ಯ ಅವರಿಗೆ ಬರುತ್ತವೆ. ಇಡೀ ರಾಜ್ಯದಲ್ಲಿ ಯಾವ ಮೋದಿ ಅಲೆಯೂ ಇಲ್ಲ, ಬಿಜೆಪಿ ಅಲೆಯೂ ಇಲ್ಲ. ಇರುವುದು ಒಂದೇ ಗಾಳಿ, ಅದು ಕಾಂಗ್ರೆಸ್, ಗ್ಯಾರಂಟಿ ಗಾಳಿ".
ನಾನು ಮತ್ತು ಸಿದ್ದರಾಮಯ್ಯ ಅವರು ಗ್ಯಾರಂಟಿ ಚೆಕ್ಕಿಗೆ ಸಹಿ ಹಾಕಿ, ಅನುಷ್ಠಾನಕ್ಕೆ ತಂದಿದ್ದೇವೆ. ಕಾಂಗ್ರೆಸ್ ಜನರ ಸಹಕಾರದಿಂದ 136 ಸ್ಥಾನಗಳನ್ನು ಗೆದ್ದು, ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ದೇಶದ ಯಾವ ರಾಜ್ಯಗಳು ಮಾಡದ ಕೆಲಸವನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಜನರ ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತದೆ. ಜನರ ಕಲ್ಯಾಣಕ್ಕೆ ಎಂದು 52 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿದ್ದೇವೆ. ಆದರೆ ಕೇಂದ್ರ ಸರ್ಕಾರ ಕರ್ನಾಟಕದ ಪಾಲಿನ ಹಣ ಕೊಡಲಿಲ್ಲ. ಇದರಿಂದ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಂಟ, ರೆಡ್ಡಿ, ಸೇರಿ ಒಟ್ಟು ಎಂಟು ಮಂದಿ ಒಕ್ಕಲಿಗರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ʼಒಕ್ಕಲಿಗರನ್ನು ಸಿಎಂ ಮಾಡಲಿಲ್ಲವಲ್ಲʼ ಎನ್ನುವ ಟೀಕೆಗೆ ನಾವು ಈ ರೀತಿ ಉತ್ತರಿಸಿದ್ದೇವೆ. ಇದರ ಜತೆಗೆ ಆರು ಮಹಿಳೆಯರಿಗೆ ಟಿಕೆಟ್ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.












Click it and Unblock the Notifications