ಬಿಜೆಪಿ ಸರ್ಕಾರದಲ್ಲಿ ಅಧಿಕಾರ ಕಳೆದುಕೊಂಡ ಎರಡನೇ ವಿಕೆಟ್ ಕೆ.ಎಸ್. ಈಶ್ವರಪ್ಪ
ಬೆಂಗಳೂರು, ಏ.14: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಗುರುವಾರ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರದಲ್ಲಿ ಅಧಿಕಾರ ಕಳೆದುಕೊಂಡ ಎರಡನೇ ಸಚಿವರಾಗಿದ್ದಾರೆ.
ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಬಂದರೂ ಸಹ ಅಧಿಕಾರ ಉಳಿಸಿಕೊಳ್ಳಲು ತೀವ್ರ ಪ್ರಯತ್ನ ನಡೆಸಿದ್ದರು. ಆದರೆ, ಸಂತೋಷ್ ಕುಟುಂಬ ದಾಖಲಿಸಿರುವ ದೂರಿನಲ್ಲಿ ಈಶ್ವರಪ್ಪ ಅವರು ಎ1 ಆರೋಪಿ ಆಗಿರುವುದು ಮತ್ತು ಎರಡು ದಿನಗಳಲ್ಲಿ ಹೊಸಪೇಟೆಯಲ್ಲಿ ಆರಂಭವಾಗುವ ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ಆಗುವ ಮುಜುಗರವನ್ನು ತಪ್ಪಿಸುವುದಕ್ಕಾಗಿ ಈಶ್ವರಪ್ಪ ಅವರ ರಾಜೀನಾಮೆ ಪಡೆದುಕೊಳ್ಳಲು ನಿರ್ಧರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳುತ್ತಿದ್ದ ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಗುರುವಾರ ಸಂಜೆ ದಿಢೀರ್ ಮಾಧ್ಯಮಗೋಷ್ಠಿ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೆ, ಸಂತೋಷ್ ಆತ್ಮಹತ್ಯೆ ಪ್ರಕಣದಲ್ಲಿ ನನ್ನದು ಒಂದು ಪರ್ಸೆಂಟ್ ಸಹ ಪಾಲು ಇಲ್ಲ. ಒಂದು ವೇಳೆ ಹಾಗೇನಾದರೂ ನನ್ನ ಪಾತ್ರ ಇದ್ದರೆ ನನ್ನ ಮನೆದೇವರೇ ನನಗೆ ಶಿಕ್ಷೆ ನೀಡಲಿ ಎಂದು ಈಶ್ವರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದಲ್ಲಿ ಹೀಗೆ ಮಧ್ಯದಲ್ಲಿ ಅಧಿಕಾರ ಕಳೆದುಕೊಂಡವರಲ್ಲಿ ಈಶ್ವರಪ್ಪ ಎರಡನೇ ಸಚಿವರಾಗಿದ್ದಾರೆ. ಸದ್ಯ ಪ್ರಚಲಿತದಲ್ಲಿರುವ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯಲ್ಲಿ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಲಂಚ ಪ್ರಕರಣದಲ್ಲಿ ಎ1 ಆರೋಪಿ ಆಗುವ ಮೂಲಕ ಅಧಿಕಾರ ಕಳೆದುಕೊಂಡಿದ್ದು, ಬಿಜೆಪಿ ಮತ್ತು ಈಶ್ವರಪ್ಪ ಅವರಿಗೆ ಇದು ತೀವ್ರ ಮುಜುಗರದ ವಿಷಯವಾಗಿದೆ.
ಅಧಿಕಾರ ಕಳೆದುಕೊಂಡಿದ್ದ ರಮೇಶ್ ಜಾರಕಿಹೊಳಿ:
ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರೂ ಸಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು.
ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸದಿಂತೆ ಎಸ್ಐಟಿ ರಮೇಶ್ ಜಾರಕಿಹೊಳಿ ವಿರುದ್ಧ 'ಬಿ' ರಿಪೋರ್ಟ್ ಸಲ್ಲಿಸಿದೆ. ಆದರೆ, ಸುಪ್ರೀಂ ಕೋರ್ಟ್ 'ಬಿ' ರಿಪೋರ್ಟ್ಗೆ ತಡೆ ನೀಡಿದೆ. ಈ ಮಧ್ಯೆ ಜಾರಕಿಹೊಳಿ ಮತ್ತೆ ಸಂಪುಟಕ್ಕೆ ಸೇರ್ಪಡೆಯಾಗಲು ಹರಸಾಹಸ ಪಡುತ್ತಿದ್ದಾರೆ.