ರಾಜ್ಯಾದ್ಯಂತ ಕೆಂಪೇಗೌಡ, ರಾಣಿ ಚೆನ್ನಮ್ಮ ಜಯಂತಿ: ಏನಿದರ ಗುಟ್ಟು?
ಖುದ್ದು ಸಿದ್ದರಾಮಯ್ಯ ಅವರೇ ಟ್ವಿಟರ್ ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ. ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರೊಂದಿಗೆ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರು, ಏಪ್ರಿಲ್ 12: ಇದೇ ತಿಂಗಳ ಏಪ್ರಿಲ್ 17ರಂದು ಕೆಂಪೇಗೌಡ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಇದರ ಜತೆಗೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನೂ ಆಚರಿಸಲು ರಾಜ್ಯ ಸರ್ಕಾರ ಉದ್ದೇಶಿಸಿರುವುದಾಗಿ ಹೇಳಲಾಗಿದೆ. ರಾಣಿ ಚೆನ್ನಮ್ಮ ಜಯಂತಿಯನ್ನು ಮುಂದಿನ ವರ್ಷದಿಂದ ಆಚರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಆದರೆ, ಕೆಂಪೇಗೌಡ ಜಯಂತಿಯನ್ನು ಇದೇ ವರ್ಷ ರಾಜ್ಯಾದ್ಯಂತ ಆಚರಿಸುವುದಾಗಿ ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಇದ್ದಕ್ಕಿದ್ದಂತೆ ಅವರಈ ನಡೆ ಅನುಸರಿಸಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ. ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರೊಂದಿಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದೂ ಹೇಳಲಾಗಿದೆ.
ಬೆಂಗಳೂರು ಮಹಾನಗರವನ್ನು ಕಟ್ಟಿದ ಈ ಮಹಾ ಪುರುಷನ ಜಯಂತಿಯನ್ನು ಕೇವಲ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕೆಂಪೇಗೌಡ ಜಯಂತಿಯನ್ನು ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದೇ ಎಲ್ಲರ ಕುತೂಹಲದ ವಿಚಾರವಾಗಿದೆ.
ಯಾವಾಗಲೂ, ಅಹಿಂದ, ಮುಸ್ಲಿಮರ ಪರವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದ ಕಾಂಗ್ರೆಸ್ ಸರ್ಕಾರ, ಹೀಗೆ ದಿಢೀರನೆ ಒಕ್ಕಲಿಗರ ಸಮುದಾಯದ ಆದರ್ಶ ಪುರುಷ ಎನಿಸಿರುವ ಕೆಂಪೇಗೌಡರ ಜನ್ಮದಿನಾಚರಣೆಯತ್ತ ನಿರ್ಧಾರ ಕೈಗೊಂಡಿರುವುದು ಅಚ್ಚರಿಯೆನಿಸಿದೆ.
ಆದರೆ, ರಾಜಕೀಯ ತಜ್ಞರಿಗೆ ಇದು ಅಚ್ಚರಿಯ ವಿಚಾರವಲ್ಲ. ರಾಜ್ಯ ರಾಜಕೀಯದಲ್ಲಿ ಒಕ್ಕಲಿಗರ ಪ್ರಾಬಲ್ಯವೇ ಅಧಿಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು, ರಾಜ್ಯದ ಮುಂದಿನ ವಿಧಾನಸಭೆ ಚುನಾವಣೆ ಮುಂದಿನ ವರ್ಷ ನಡೆಯಲಿರುವುದರಿಂದ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಒಕ್ಕಲಿಗರ ಕೃಪಾಕಟಾಕ್ಷ ಅತ್ಯಗತ್ಯವಾಗಿ ಬೇಕಿದೆ.
ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಏ.17ರಂದು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲಾಗುವುದು. ಜಿಲ್ಲಾ ಮಟ್ಟದಲ್ಲೂ ದಿನಾಚರಣೆ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು.
— CM of Karnataka (@CMofKarnataka) April 11, 2017
ಹಾಗಾಗಿಯೇ, ಒಕ್ಕಲಿಗರ ಮನವೊಲಿಕೆಗಾಗಿ ಅದರಲ್ಲೂ ಕಾವೇರಿ ಪಾತ್ರದಲ್ಲಿರುವ ಒಕ್ಕಲಿಗರನ್ನು ಸೆಳೆಯುವ ದೃಷ್ಟಿಯಿಂದ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕೀಯದಲ್ಲಿ ಕೇಳಿಬರುತ್ತಿವೆ.