ನಾಗಮಂಗಲದಲ್ಲಿ ಗಣಪತಿ ಭಕ್ತರ ಮೇಲೆ ದಾಳಿ; ʼಘಟನೆಯ ಹಿಂದೆ ಕಾಣದ ಕೈ ಗಳ ಕೈವಾಡʼ
ಬೆಂಗಳೂರು, ಸೆಪ್ಟೆಂಬರ್ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಒಂದು ಸಮುದಾಯದ ಪುಂಡರು ನಡೆಸಿದ ದಾಳಿಯನ್ನು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಖಂಡಿಸುತ್ತೇನೆ .ಈ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡದೇ ಮತಾಂಧ ಶಕ್ತಿಗಳನ್ನು ಹತ್ತಿಕ್ಕಬೇಕು.ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ಕಿಡಿಕಾರಿದ್ದಾರೆ.

ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ನಂತರ ಈ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆ ಎಂದು ತಿಳಿಸಿದರು.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡದೇ ಮತಾಂಧ ಶಕ್ತಿಗಳನ್ನು ಹತ್ತಿಕ್ಕಬೇಕು.
— Nikhil Kumar (@Nikhil_Kumar_k) September 12, 2024
ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ…
ಗಣೇಶ ವಿಸರ್ಜನೆ ವೇಳೆ ಮತಾಂಧರು ದೂರ್ತತನ ಪ್ರದರ್ಶಿಸಿದ್ದಾರೆ. ಗಣಪತಿ ಭಕ್ತರ ಮೇಲೆ ದುರುದ್ದೇಶಪೂರ್ವಕವಾಗಿ ದಾಳಿ ನಡೆಸಿದ್ದಾರೆ. ಈ ಘಟನೆಗೆ ಕೋಮು ದಳ್ಳುರಿ ಹೊತ್ತಿಸಿ ಜನರು, ಪೊಲೀಸರ ಮೇಲೆ ಪೂರ್ವಯೋಜಿತವಾಗಿ ದೌರ್ಜನ್ಯ ನಡೆಸಿರುವುದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದರು.
ಕಲ್ಲುಗಳ ಸುರಿಮಳೆಗರೆದ ಪುಂಡರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರನ್ನು ಪ್ರಚೋದಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಇರುವುದರಿಂದ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ರಾಜಕೀಯ ಸ್ವಾರ್ಥಕ್ಕಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೇಶವಿರೋಧಿ ಶಕ್ತಿಗಳನ್ನು ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡುತ್ತಿರುವುದರ ಪರಿಣಾಮ ಇದು. ಹಿಂದೂಗಳ ಮೇಲಿನ ಈ ದಾಳಿಗೆ ಪ್ರತಿಯಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಒಂದು ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಘಟನೆ ನಡೆದಿದೆ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ: ಸಿದ್ದರಾಮಯ್ಯ ಏನಂದ್ರು?
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.












Click it and Unblock the Notifications