ಯತ್ನಾಳ್, ನಿರಾಣಿ ಹೇಳಿಕೆಗೆ ಮೋದಿ ಉತ್ತರ ಕೊಟ್ಟರೆ ಒಳ್ಳೆಯದು: ಡಿಕೆ ಶಿವಕುಮಾರ್ ಕಿಡಿ
ಧಾರವಾಡ,ಜನವರಿ19: ಬಸವನಗೌಡ ಪಾಟೀಲ್ ಯತ್ನಾಲ್ ಹಾಗೂ ಸಚಿವ ಮುರುಗೇಶ್ ನಿರಾಣಿ ನಡುವೆ ಪಿಂಪ್ ವಿಚಾರವಾಗಿ ಆರೋಪ-ಪ್ರತ್ಯಾರೋಪವನ್ನ ನಡೆಸುತ್ತಿದ್ದು, ರಾಜ್ಯಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರು ಇದಕ್ಕೆ ಉತ್ತರ ಕೊಟ್ಟರೇ ಒಳ್ಳೆಯದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಗುರುವಾರ ಧಾರವಾಡದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ನಾಲ್ಕು ವರ್ಷಗಳಲ್ಲಿ ಬರೀ ಭರವಸೆಗಳನ್ನೇ ನೀಡಿದೆ. ಇದು ಬಿ - ರಿಪೋರ್ಟ್ ಮತ್ತು ಭರವಸೆಗಳ ಸರ್ಕಾರವಾಗಿದೆ ಎಂದು ಡಿಕೆ ಶಿವಕುಮಾರ್ ಟೀಕಿಸಿದರು. ಈ ಸರ್ಕಾರದಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಸಾಕಷ್ಟು ಭ್ರಷ್ಟಾಚಾರ, ಹಗರಣಗಳು ನಡೆದಿವೆ. ಪಿಎಸ್ಐ ನೇಮಕಾತಿ, ಲೋಕೋಪಯೋಗಿ ಇಲಾಖೆ ಸೇರಿ ಪ್ರತಿಯೊಂದು ಕಾಮಗಾರಿಯಲ್ಲಿ ಕಮಿಷನ್ ದಂಧೆ ನಡೆಸುತ್ತಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಪತ್ರಕ್ಕೆ ಉತ್ತರಿಸಿಲ್ಲ. ಬೆಲೆ ಏರಿಕೆ ಏಕೆ ಇಳಿಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಇನ್ನೂ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ಬಂದಿದೆ ಎಂದು ರಾಜ್ಯಕ್ಕೆ ಮೇಲಿಂದ ಮೇಲೆ ಬರುತ್ತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಾಂಡವವಾಡುತ್ತಿವೆ. ಲಂಬಾಣಿ ಜನಕ್ಕೆ ಹಕ್ಕುಪತ್ರ ನೀಡಲು ಮೋದಿ ಬಂದಿದ್ದಾರೆ. ಇದರಲ್ಲಿ ಏನೂ ವಿಶೇಷವಿಲ್ಲ. ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಲ್ಪಸಂಖ್ಯಾತರ ಬಗ್ಗೆ ಕನಿಕರ ಬಂದಿದೆ. ಹುಬ್ಬಳ್ಳಿ, ಬೆಂಗಳೂರು, ಶಿವಮೊಗ್ಗ, ಮಂಗಳೂರಿನಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸಿದವರು, ಅವರ ಮೇಲೆ ಹಾಕಬಾರದ ಕೇಸ್ ಹಾಕಿ ಅಮಾಯಕರನ್ನು ಜೈಲಿಗೆ ಹಾಕಿದವರು ಇವರು. ಬೇರೆಯವರಿಗೆ ತೊಂದರೆ ಕೊಟ್ಟು ಜೈಲಿಗೆ ಅಟ್ಟುವುದೇ ಅವರ ದೊಡ್ಡ ಸಾಧನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ಬಂದಾಗ ಮೋದಿ, ಅಮಿತ್ ಶಾ ಗೆ ಕರ್ನಾಟಕ ಎಂಬ ರಾಜ್ಯವಿದೆ ಎಂದು ನೆನಪಾಗುವುದು: ಸಿದ್ದರಾಮಯ್ಯ
ಚುನಾವಣೆ ಹತ್ತಿರ ಬಂದಾಗ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಕರ್ನಾಟಕ ಎಂಬುದೊಂದು ರಾಜ್ಯವಿದೆ ಎಂದು ನೆನಪಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಅಮಿತ್ಶಾ ಅವರು ಕರ್ನಾಟಕಕ್ಕೆ ಪ್ರತಿ ಸಾರಿ ಬಂದಾಗಲೂ ಕನ್ನಡಿಗರಿಗೆ ಅಘಾತ ಮಾಡಿಯೆ ಬರುತ್ತಿದ್ದಾರೆ. ಈ ಬಾರಿ ಬೆಂಗಳೂರಿನಲ್ಲಿದ್ದ ಯುಜಿಸಿ ಕಛೇರಿಯನ್ನು ಸ್ಥಳಾಂತರ ಮಾಡಿ ಕನ್ನಡಿಗರ ಮತ್ತೊಂದು ಹಕ್ಕು ಕಸಿದಿದ್ದಾರೆ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅತಿವೃಷ್ಟಿ, ಪ್ರವಾಹವು ರಾಜ್ಯದ ರೈತರನ್ನು ಕಾಡುತ್ತಿದೆ. ಇದರಿಂದ 1 ಲಕ್ಷ ಹೆಕ್ಟೇರ್ಗಳಿಗೂ ಹೆಚ್ಚಿನ ಪ್ರದೇಶದಲ್ಲಿ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದೆ. ಅಂದರೆ 3 ವರ್ಷಗಳಲ್ಲಿ 2.5 ಲಕ್ಷ ಎಕರೆಗಳಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. 2.5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹಾನಿಯಾದ ಬೆಳೆಗೆ ಮತ್ತು ಮನೆಗಳಿಗೆ ರಾಜ್ಯ ಸರ್ಕಾರ ಸಮರ್ಪಕವಾಗಿ ಪರಿಹಾರ ಕೊಟ್ಟಿಲ್ಲ. ಅಷ್ಟು ಭೀಕರ ಮಳೆ ಹಾನಿಯಾದಾಗಲೂ ಪ್ರಧಾನಮಂತ್ರಿ ಮೋದಿಗಾಗಲಿ, ಅಮಿತ್ ಶಾ ಅವರಿಗಾಗಲಿ ಹೋಗಲಿ ಉಳಿದ ಯಾವುದೆ ಸಚಿವರಿಗಾಗಲಿ ಕರ್ನಾಟಕ ರಾಜ್ಯವೆಂಬುದೊಂದಿದೆ ಎಂಬ ನೆನಪು ಬಂದಿತ್ತೆ? ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications