DK Shivakumar: ಕರಗ ಆಚರಣೆಗೆ ಸರ್ಕಾರದಿಂದ ಅನುದಾನ, ಯಾರದೋ ಕೈಗೆ ಹಣ ನೀಡಲು ಆಗಲ್ಲ: ಡಿ ಕೆ ಶಿವಕುಮಾರ್
ಬೆಂಗಳೂರು, ಏಪ್ರಿಲ್ 14: ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿವಹಿಸಿದ್ದೇವೆ. ಅವರು ಯಾರಿಗೆ ಹಣ ನೀಡಬೇಕೋ ಅವರಿಗೆ ಹಣ ನೀಡುತ್ತಾರೆ. ಬಜೆಟ್ ಅಲ್ಲಿಯೇ ಹಣ ಮೀಲಿಟ್ಟಿದ್ದೇವೆ. ಕರಗ ಉತ್ಸವ ಚೆನ್ನಾಗಿ ನಡೆಯಲು ಜಿಲ್ಲಾಧಿಕಾರಿಗಳು, ಪೊಲೀಸರು ಶ್ರಮವಹಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ಭಾವೈಕ್ಯತೆಯ ದೊಡ್ಡ ಸಂಕೇತ. ಕರಗ ಆಚರಣೆ ವೇಳೆ ದರ್ಗಾಕ್ಕೂ ಭೇಟಿ ನೀಡಲಾಗುತ್ತದೆ. ಧರ್ಮ, ದೇವಾಸ್ಥಾನದ ಹೆಸರಿನಲ್ಲಿ ರಾಜಕಾರಣ ಮಾಡುವುದು ನೀಚತನ. ಇದನ್ನು ಯಾರೂ ಸಹ ಮಾಡಬಾರದು ಎಂದರು.
ಜಾತಿಗಣತಿ ಬಗ್ಗೆ ಶಾಮನೂರು ಶಿವಶಂಕರಪ್ಪ ಅವರ ಟೀಕೆ ಹಾಗೂ ವರದಿಯ ಅಧ್ಯಯನಕ್ಕೆ ವೀರಶೈವ ಮಹಾಸಭಾ ತಜ್ಞರ ಸಮಿತಿ ನೇಮಕ ಮಾಡಿರುವ ಕುರಿತು ಮಾಧ್ಯಮಗಳ ಜೊತೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಮುಖ್ಯಮಂತ್ರಿಗಳು ಜಾತಿಗಣತಿ ವರದಿಯ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳಿಗೂ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕಿಂತ ಮುಕ್ತವಾಗಿ ಇನ್ನೇನು ಮಾಡಲು ಸಾಧ್ಯ ಎಂದರು. ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವು ಏಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರವಾಗಿ ಅವರುಗಳು ತಮ್ಮ ನಿಲುವುಗಳನ್ನು ಪ್ರತಿಪಾದನೆ ಮಾಡಲಿ ಎಂದು ಹೇಳಿದರು.

ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಮಾಜ ಸೇವೆ ಮಾಡುವವರನ್ನು ಹೆಚ್ಚು ಗುರುತಿಸುತ್ತದೆ. ಹೀಗಾಗಿ ನಮ್ಮ ಸಮಾಜದಲ್ಲಿ ರಾಮನ ತಂದೆ ದಶರಥ ಮಹಾರಾಜನಿಂಗಿಂತ, ರಾಮನ ಭಂಟ ಹನುಮಂತನ ದೇವಾಲಯಗಳು ಹೆಚ್ಚಾಗಿವೆ. ಅದೇ ರೀತಿ ನೀವು ಕಾಂಗ್ರೆಸ್ ಪಕ್ಷಕ್ಕೆ ಆಧಾರಸ್ತಂಭ. ಇದನ್ನು ಸೇವಾದಳದ ಎಲ್ಲಾ ಕಾರ್ಯಕರ್ತರು ತಲೆಯಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.
ದೇಶದ ಭದ್ರತೆ ಉದ್ದೇಶದಿಂದ ಸ್ಥಾಪನೆಯಾದ ವಿಭಾಗ ಸೇವಾದಳ. ನೆಹರೂ ಅವರ ಅವಧಿಯಲ್ಲಿ ಪ್ರಾರಂಭವಾಗಿ ಈಗ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿವರೆಗೆ ನಡೆದುಕೊಂಡು ಬಂದಿದೆ. ಸೇವಾದಳ ಕಾಂಗ್ರೆಸ್ ಪಕ್ಷದ ಕಡೆಯ ಅಂಗ, ನಮ್ಮನ್ನು ಗುರುತಿಸುವುದಿಲ್ಲ ಎಂಬ ಆಲೋಚನೆಯನ್ನು ನಿಮ್ಮ ತಲೆಯಿಂದ ಕಿತ್ತೊಗೆಯಬೇಕು. ನಿಮ್ಮಲ್ಲಿ ನಾಯಕತ್ವದ ಗುಣ ಇದೆ ಎಂದು ನೆಹರೂ ಹಾಗೂ ಇಂದಿರಾ ಗಾಂಧಿ ಅವರೇ ಸೇವಾದಳದ ಅಧ್ಯಕ್ಷ ಸ್ಥಾನ ವಹಿಸಿದ್ದರು ಎಂದರು.
ಸೇವಾದಳದವರು ಹಾಕುವ ಗಾಂಧಿ ಟೋಪಿಯನ್ನು ಎಲ್ಲಾ ನಾಯಕರು ಹಾಕುತ್ತಾರೆ. ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ನಾಯಕರೂ ಇದನ್ನು ಧರಿಸಿದ್ದರು. ಬೇರೆ ನಾಯಕರ ಜತೆಗೆ ನೀವು ಸರಿಸಮಾನರು. ಬಿ.ಕೆ. ಹರಿಪ್ರಸಾದ್ ಅವರು ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಸಂಸತ್ ಸದಸ್ಯರಾಗಿದ್ದಾರೆ. ಇನ್ನು ಅನೇಕರು ಸೇವಾದಳದಲ್ಲಿ ಕೆಲಸ ಮಾಡಿದ್ದಾರೆ. ಅವರು ಶಾಸಕರು, ಮಂತ್ರಿಗಳಾಗಿ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ ಎಂದು ತಿಳಿಸಿದರು.
ನಾವು ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಸೇವೆ ಮಾಡಬೇಕು. ನನ್ನಿಂದ ಏನೂ ಸಾಧ್ಯವಿಲ್ಲ ಎಂಬ ಆಲೋಚನೆ ಮಾಡಬಾರದು. ನೀವು ಶಾಸಕರು, ಮಂತ್ರಿ, ಮುಖ್ಯಮಂತ್ರಿ ಆಗಬಹುದು. ನೀವು ನಿಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಒಳ್ಳೆಯ ಕಾಲ ಬರುತ್ತಿದೆ. ಬ್ಲಾಕ್ ಅಧ್ಯಕ್ಷರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಅವರು ಹಾಗೂ ರಾಹುಲ್ ಗಾಂಧಿ ಅವರು ಜಿಲ್ಲಾ ಕಾಂಗ್ರೆಸ್ ಗೆ ಹೊಸ ಸ್ವರೂಪ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದರು.
ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಆಯ್ಕೆ ಸಮಿತಿಯು ಸೇವಾದಳ ಸೇರಿದಂತೆ ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್ ಅಭಿಪ್ರಾಯ ಸ್ವೀಕರಿಸುವ ಕೆಲಸ ಮಾಡಲಿದೆ. ನಿಮ್ಮ ಸೇವೆಯನ್ನು ನಾವು ಗಮನದಲ್ಲಿಟ್ಟುಕೊಂಡಿದ್ದೇವೆ. ಸೇವಾದಲದಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸಬೇಕು. ಭಾರತ ಜೋಡೋ ಸಂದರ್ಭದಲ್ಲಿ ನಾವು ಅನೇಕ ಜಾಗಗಳನ್ನು ಗುರುತಿಸಿದ್ದು, ಶಾಶ್ವತ ಕಾಂಗ್ರೆಸ್ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು. ಮಂಗಳೂರಿನಲ್ಲೂ ಜಾಗ ನೋಡಿದ್ದೇವೆ. ಇದರ ಜವಾಬ್ದಾರಿಯನ್ನು ಸೇವಾದಳದವರಿಗೂ ವಹಿಸಲಾಗುವುದು ಎಂದರು.
ನಾವು ಈಗ ಬುದ್ಧಿ ಕಲಿತು ನಮ್ಮ ಆಧಾರಸ್ತಂಭಗಳನ್ನು ಹೇಗೆ ಬೆಳಸಬೇಕು ಎಂದು ಆಲೋಚಿಸುತ್ತಿದ್ದೇವೆ. ಮುಂದಿನದಿನಗಳಲ್ಲಿ ಪ್ರತಿ ವಿಚಾರದಲ್ಲೂ ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಸಂಗ್ರಹಹಿಸಲು, ಅವರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳಲು ಮುಂದಾಗಿದ್ದಾರೆ. ಅವರೇ ರಾಜ್ಯಕ್ಕೆ ಬಂದು ಜಿಲ್ಲಾಧ್ಯಕ್ಷರ ಜತೆ ನೇರವಾಗಿ ಚರ್ಚೆ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಸೇವಾದಳದವರು ಒಂದು ತಂಡ ರಚನೆ ಮಾಡಿ ಪ್ರತಿ ಜಿಲ್ಲೆಗೆ ಹೋಗಿ ಅಲ್ಲಿ ಸೇವಾದಳ ಹೊರತಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಪಕ್ಷದ ಧ್ವಜಾರೋಹಣ, ರಾಷ್ಟ್ರಗೀತೆ, ವಂದೇ ಮಾತರಂ ಗೀತೆ ಗಾಯನ ಸೇರಿದಂತೆ ಇತರೆ ಅಂಶಗಳ ತರಬೇತಿ ನೀಡಬೇಕು ಎಂದು ಸೇವಾದಳದ ಅಧ್ಯಕ್ಷರಾದ ರಾಮಚಂದ್ರಪ್ಪ ಅವರಿಗೆ ಸೂಚಿಸುತ್ತೇನೆ. ಈ ರೀತಿ ಮಾಡಿದಾಗ ಬೇರೆ ಕಾರ್ಯಕರ್ತರು ಸೇವಾದಳದ ಜತೆ ಬೆರೆಯುತ್ತಾರೆ ಎಂದು ಡಿ ಕೆ ಶಿವಕುಮಾರ್ ಅವರು ಸಲಹೆ ನೀಡಿದರು.
ನೀವು ಮಾನಸಿಕವಾಗಿ ಗಟ್ಟಿಯಾಗಿರಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸೇವಾದಳದವರಿಗೆ ಎಷ್ಟು ಸಾಧ್ಯವೋ ಅಷ್ಟು ಅಧಿಕಾರ ನೀಡಲಾಗುವುದು. ಕೆಲವು ನಾಯಕರು ನಿಮ್ಮನ್ನು ಅಗೌರವವಾಗಿ ನಡೆಸಿಕೊಳ್ಳುವುದನ್ನು ನೋಡಿದ್ದೇವೆ. ಸೂಕ್ತ ಕಾಲದಲ್ಲಿ ಅವರಿಗೆ ಸೂಕ್ತ ಸಂದೇಶ ರವಾನಿಸಲಾಗುವುದು. ಸೇವಾದಳದಲ್ಲೂ ಬೂತ್ ಮಟ್ಟದಲ್ಲಿ ಪ್ರತಿನಿಧಿಗಳನ್ನು ಹೊಂದಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ನಮ್ಮ ಸರ್ಕಾರ ಪ್ರತಿ ಬಡ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳ ಮೂಲಕ ವರ್ಷಕ್ಕೆ 52 ಸಾವಿರ ಕೋಟಿ ಒದಗಿಸಲಾಗಿದೆ. ಯಾರು ಏನೇ ಕೂಗಾಡಲಿ ರಾಜ್ಯದಲ್ಲಿ ಮತ್ತೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.












Click it and Unblock the Notifications