ಸಿಎಂ ಕುರ್ಚಿಗಾಗಿ ಭರ್ಜರಿ ಪೈಪೋಟಿ: ಬಿ ವೈ ವಿಜಯೇಂದ್ರ ಬಿಚ್ಚಿಟ್ಟ ಸತ್ಯವೇನು?
ಬೆಂಗಳೂರು, ಫೆಬ್ರವರಿ 19: ಸಿಎಂ ಕುರ್ಚಿಗಾಗಿ ಭರ್ಜರಿ ಪೈಪೋಟಿ ನಡೆದಿದೆ. ಸಿದ್ದರಾಮಯ್ಯನವರು ಪೂರ್ಣಾವಧಿ ಸಿಎಂ ಎಂದು ಹಲವರು ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರೆಲ್ಲ ಸಿದ್ದರಾಮಯ್ಯನವರ ಪರ ಇದ್ದಾರೆ ಎಂಬ ಭ್ರಮೆಯಿಂದ ಹೊರಕ್ಕೆ ಬರಬೇಕಿದೆ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು. ಅವರೆಲ್ಲರೂ ಸಿಎಂ ಹುದ್ದೆಯ ಆಕಾಂಕ್ಷಿಗಳು. ಒಂದೆಡೆ ಕಾಂಗ್ರೆಸ್ ಹೈಕಮಾಂಡ್ ಸುಪ್ರೀಂ ಎನ್ನುತ್ತಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಬೆಂಬಲಿಗರು ಹೈಕಮಾಂಡಿಗೇ ಎಚ್ಚರಿಕೆ ನೀಡಿದ್ದಾರೆ. ತಮ್ಮ ಮಾತು ಕೇಳದಿದ್ದರೆ ನಮ್ಮ ದಾರಿ ನಮಗೆ ಎಂಬ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿಸಿದರು. ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆ ಬಂದಾಗ ಗ್ಯಾರಂಟಿ ಹಣ ನೀಡುತ್ತಾರೆ. ಉಪ ಚುನಾವಣೆ ಬಂದಾಗಲೂ ಗ್ಯಾರಂಟಿ ಅನುಷ್ಠಾನಕ್ಕೆ ಬರುತ್ತದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಬಂದಾಗ ಹಣ ಕೊಡುವ ಸಾಧ್ಯತೆ ಇದೆ ಎಂದು ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ರಾಜ್ಯದ ಜನರನ್ನು ಭಿಕ್ಷುಕರು ಎಂದು ನೀವು ಅಂದುಕೊಂಡಿದ್ದೀರಾ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಭೀಕರ ಬರಗಾಲದ ಸೂಚನೆಗಳು ಈಗಾಗಲೇ ಕಾಣುತ್ತಿವೆ. ಮುಖ್ಯಮಂತ್ರಿಗಳು, ಸರಕಾರ ಎಚ್ಚೆತ್ತುಕೊಳ್ಳಲಿ. ನಿದ್ರೆಯಲ್ಲಿರುವ ಸರಕಾರವು ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆ ಹರಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು. ರಾಜ್ಯದಲ್ಲಿ ಕ್ರೋಡೀಕೃತ ಹಣ ಉಪಯೋಗ ಆಗುತ್ತಿದೆಯೇ ದುರುಪಯೋಗ ಆಗುತ್ತಿದೆಯೇ? ಎಂದು ಪ್ರಶ್ನಿಸಿದರು. ಗ್ಯಾರಂಟಿಗಳ ಬಗ್ಗೆ ನಮ್ಮ ವಿರೋಧವಿಲ್ಲ; ಅದರ ಅನುಷ್ಠಾನ ಆಗಲೇಬೇಕು ಎಂದು ಒತ್ತಾಯಿಸಿದರು. ಯುವನಿಧಿ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ತಿಳಿಸಿದರು.
ಪರಿಶಿಷ್ಟ ಜಾತಿ, ಪಂಗಡದ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ. ಇದರ ವಿರುದ್ಧ ಆ ಸಮಾಜದ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನಮಗೆ ಅನ್ಯಾಯ ಮಾಡದಿರಿ ಎಂದು ತಾಕೀತು ಮಾಡಿ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳು ಸುಳ್ಳಿನ ಸರದಾರ. ಸರಕಾರದ ಯೋಗ್ಯತೆಗೆ ಬೆಂಗಳೂರಿನ ಒಂದು ಗುಂಡಿ ಮುಚ್ಚಲು ಸಾಧ್ಯವಾಗುತ್ತಿಲ್ಲ; ಭೂಗತ ಟನೆಲ್ ಬಗ್ಗೆ ಮಾತನಾಡುತ್ತೀರಿ ಎಂದು ಟೀಕಿಸಿದರು. ಶಾಸಕರಿಗೆ ಅಭಿವೃದ್ಧಿ ಅನುದಾನ ನೀಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಒಂದೆಡೆ ಮುಖ್ಯಮಂತ್ರಿಗಳು ನಾಡು ಸುಭಿಕ್ಷವಾಗಿದೆ. ರಾಜ್ಯದ ಜನರು ಸಂತೋಷದಲ್ಲಿದ್ದಾರೆ. ರೈತರು, ಬಡವರು ನೆಮ್ಮದಿಯಿಂದ ಇದ್ದಾರೆ. ಗ್ಯಾರಂಟಿಗಳ ಅನುಷ್ಠಾನದ ಪರಿಣಾಮವಾಗಿ ಎಲ್ಲ ವರ್ಗದ ಜನರು ಸಂತಸದಿಂದಿದ್ದಾರೆ ಎಂಬ ಭ್ರಮೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಇದ್ದಾರೆ ಎಂಬುದು ಚರ್ಚಾ ವಿಷಯವಾಗಿದೆ ಎಂದರು.
ರಾಜ್ಯದ ಹಣಕಾಸಿನ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ. ಇನ್ನೊಂದೆಡೆ ಗೃಹಲಕ್ಷ್ಮಿ ಯೋಜನೆ 2 ಸಾವಿರ ರೂ. ಐದಾರು ತಿಂಗಳಿಂದ ಸಿಗುತ್ತಿಲ್ಲ. 5 ಕೆಜಿ ಅಕ್ಕಿಯ ಹಣವನ್ನೂ ಕೊಡುತ್ತಿಲ್ಲ ಎಂದು ಗಮನಕ್ಕೆ ತಂದರು. ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 7ರಂದು 16ನೇ ಬಜೆಟ್ ಮಂಡಿಸುತ್ತಿದ್ದಾರೆ. ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿ ಅಥವಾ ದಾಖಲೆಯನ್ನು ಸಿದ್ದರಾಮಯ್ಯನವರು ನಿರ್ಮಾಣ ಮಾಡಲಿದ್ದಾರೆ ಎಂದರು.












Click it and Unblock the Notifications