ನಾಯಕತ್ವಕ್ಕಾಗಿ ಎರಡು ಬಣಗಳ ಜಗ್ಗಾಟ: ರಾಜಾಹುಲಿ ಬಿ ಎಸ್ ಯಡಿಯೂರಪ್ಪ ಹೇಳಿದ್ದೇನು?
ಬೆಂಗಳೂರು, ನವೆಂಬರ್ 02: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ನಡುವೆ ನಾಯಕತ್ವಕ್ಕಾಗಿ ಬಣಗಳ ಜಗ್ಗಾಟ ನಡೆಯುತ್ತಿದೆ. ಅದು ಈಗ ತಾರಕಕ್ಕೇರಿದೆ. ವರ್ಗಾವಣೆ ದಂಧೆ ಮುಂದುವರೆದಿದೆ. ಉಪ ಮುಖ್ಯಮಂತ್ರಿ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾವೇರಿ ಜಲ ನ್ಯಾಯಮಂಡಳಿ ಮುಂದೆ ನೀರಿನ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಲು ವಿಫಲವಾಗಿದೆ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಇದರಿಂದ ಕುಡಿಯುವ ನೀರಿನ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಹೇಳಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಸರಕಾರ ಮುಂದೆ ಹೋಗುತ್ತಿಲ್ಲ. ಚಕ್ರದಲ್ಲಿ ಗಾಳಿ ಇಲ್ಲದೆ ಮುಂದೆ ಹೋಗದ ವಾಹನದಂತಾಗಿದೆ ಸರಕಾರದ ಪರಿಸ್ಥಿತಿ. ಅಪಾರ ಭರವಸೆ ನೀಡಿದ ನಂತರ ಅಧಿಕಾರಕ್ಕೆ ಬಂದ ಈ ಸರಕಾರವು ತಮ್ಮ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ. ಸಿದ್ದರಾಮಯ್ಯನವರು ಎರಡನೇ ಅವಧಿಯಲ್ಲಿ ಪಕ್ಷದ ಮೇಲೆ ಹಿಡಿತ ಇಲ್ಲದ, ಸರಕಾರದ ಮೇಲೆ ನಿಯಂತ್ರಣ ಇಲ್ಲದ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ.
ಮಳೆಯ ಕೊರತೆಯ ಅರಿವಿದ್ದರೂ ಮುಂಜಾಗ್ರತೆ ಕೈಗೊಂಡಿಲ್ಲ. ವಿದ್ಯುತ್ ಕೊರತೆಯಿಂದ ನಿರಂತರ ವಿದ್ಯುತ್ ನೀಡುವಲ್ಲಿ ಸರಕಾರ ವಿಫಲವಾಗಿದೆ. ಬರ ಪರಿಸ್ಥಿತಿ ಭೀಕರವಾಗಿದ್ದು, ಸಮರೋಪಾದಿಯಲ್ಲಿ ಅದನ್ನು ನಿರ್ವಹಿಸದೆ ಕೇಂದ್ರ ಸರಕಾರವನ್ನು ಮೂದಲಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಆಡಳಿತ ಪಕ್ಷವಾಗಿ ಜನರ ಸಮಸ್ಯೆಗೆ ಸ್ಪಂದಿಸುವುದನ್ನು ಮರೆತು ವಿರೋಧ ಪಕ್ಷಗಳ ಮೇಲೆ ದಾಳಿ ಮಾಡುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ. ತಮ್ಮ ವೈಫಲ್ಯವನ್ನು ಮುಚ್ಚಲು ಕೇಂದ್ರ ಸರಕಾರವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹುನ್ನಾರ ನಡೆಸಿದ್ದಾರೆ.

ಅಸಂಬದ್ಧ, ಅಸತ್ಯ ಮತ್ತು ಅರ್ಧ ಸತ್ಯ ವಿಷಯಗಳನ್ನು ಪ್ರಸ್ತಾಪಿಸಿ ತಮ್ಮ ವೈಫಲ್ಯಗಳಿಗೆ ಪರದೆ ಹಾಕುವ ಕುತಂತ್ರವನ್ನು ಸಿಎಂ ಮಾಡುತ್ತಿದ್ದಾರೆ. ಕೇಂದ್ರ ಸರಕಾರವು ಬರ ಪರಿಹಾರಕ್ಕೆ ಹಣ ನೀಡುವುದು ನಿಶ್ಚಿತ. ಈ ಹಿಂದೆ ಕೂಡ ಬರಪೀಡಿತ ಅವಧಿಯಲ್ಲಿ ರಾಜ್ಯ ಸರಕಾರ ಕೇಂದ್ರದ ಪರಿಹಾರ ಹಣಕ್ಕೆ ಕಾಯದೆ ಬರಪರಿಹಾರ ಕಾಮಗಾರಿ ನಡೆಸಲಾಗುತ್ತಿತ್ತು. ಈಗ ಸಂಪನ್ಮೂಲಗಳ ಒತ್ತಡದಲ್ಲಿರುವ ಸಿದ್ದರಾಮಯ್ಯನವರು ಎಲ್ಲದಕ್ಕೂ ಕೇಂದ್ರದ ಕಡೆ ನೋಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಗ್ರಾಮೀಣ ರಸ್ತೆ ನಿರ್ಮಾಣಕ್ಕೆ 3,573 ಕೋಟಿ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡಿನಲ್ಲಿ 11.75 ಲಕ್ಷ ರೈತರಿಗೆ 20 ಸಾವಿರ ಕೋಟಿ ನೀಡಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ 59 ಲಕ್ಷ ರೈತರಿಗೆ ನೇರವಾಗಿ ವರ್ಷಕ್ಕೆ 6 ಸಾವಿರವನ್ನು ನೀಡುತ್ತಿದ್ದಾರೆ. ರಾಜ್ಯ ಸರಕಾರ ಮೊದಲು ನಾನು ಇದ್ದಾಗ 4 ಸಾವಿರ ಹೆಚ್ಚುವರಿಯಾಗಿ ನೀಡುತ್ತಿದ್ದು, ಸಿದ್ದರಾಮಯ್ಯರ ಸರಕಾರ ಅದನ್ನೂ ಸ್ಥಗಿತಗೊಳಿಸಿದ್ದಾರೆ ಎಂದು ಆಕ್ಷೇಪಿಸಿದರು.
ರಸಗೊಬ್ಬರ ಸಹಾಯಧನ ಈತನಕ 19,567 ಕೋಟಿ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ 5,451 ಕೋಟಿ ನೀಡಲಾಗಿದೆ. ಭದ್ರಾ ಯೋಜನೆಗೆ 5300 ಕೋಟಿಯ ಅನುಮೋದನೆ ಲಭಿಸಿದೆ. ರಾಜ್ಯದ ರೈಲು ಮಾರ್ಗಗಳ ವಿದ್ಯುದೀಕರಣಕ್ಕೆ ಕೇಂದ್ರ ಸರಕಾರವು 1,722 ಕೋಟಿ ವೆಚ್ಚ ಮಾಡಿದೆ. ರಾಜ್ಯದ ರೈಲು ಯೋಜನೆಗಳಿಗೆ 2013ರಲ್ಲಿ 800 ಕೋಟಿ ನೀಡಿದರೆ, ಈಗ 3,700 ಕೋಟಿ ನೀಡಲಾಗುತ್ತಿದೆ. ಬೆಂಗಳೂರಿನ ಯಶವಂತಪುರ ಮತ್ತು ದಂಡು ರೈಲುನಿಲ್ದಾಣ ಅಭಿವೃದ್ಧಿಗೆ ಕೇಂದ್ರ ಸರಕಾರವು 380 ಕೋಟಿ, 525 ಕೋಟಿ ವ್ಯಯಿಸುತ್ತಿದೆ. ಬೆಂಗಳೂರು ಉಪನಗರ ರೈಲು ಯೋಜನೆಗೆ ಅನುಮೋದನೆ ನೀಡಿ 450 ಕೋಟಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಮೆಟ್ರೊ ರೈಲು ಯೋಜನೆಗೆ ಮೂರನೇ ಮತ್ತು ನಾಲ್ಕನೇ ಮಾರ್ಗಕ್ಕೆ ಹಣ ನೀಡಲಾಗುತ್ತಿದೆ ಎಂದು ತಿಳಿಸಿದರು.
ಧಾರವಾಡ ಐಐಟಿ ಪ್ರಾರಂಭವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯಾವುದೇ ತಾರತಮ್ಯ ಮಾಡದೆ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಬೆಳಿಗ್ಗೆ ಎದ್ದರೆ ರಾಜಕೀಯ ಕಾರಣಕ್ಕಾಗಿ ನರೇಂದ್ರ ಮೋದಿಯವರನ್ನು ಟೀಕೆ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದರು.












Click it and Unblock the Notifications