ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ
ಬೆಂಗಳೂರು, ಆಗಸ್ಟ್ 21: ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ಸದಾಶಿವನಗರದ ನಿವಾಸದ ಬಳಿ ಬಿಜೆಪಿಯ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು? ಎಂದು ಕುಟುಕಿದರು.

ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ
ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವ ಕೆಲಸ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹೇಳಿದರು.
ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ. ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಟೀಕೆ ಮಾಡುತ್ತಿದ್ದವು. ಆಗ ನಾವೇನು ಮಾತನಾಡಲಿಲ್ಲ. ನಾವು ಕೆಲಸ ಮಾಡಿ ಸಾಧಿಸಿದ್ದೇವೆ. ಟೀಕೆಗಳು ಸಾಯುತ್ತವೆ. ಅದಕ್ಕೆ ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ ಎಂದು ಹೇಳಿದರು.
ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷಾತ ವರದಿಯನ್ನು ನೀಡಲಿದ್ದಾರೆ ಎಂದು ತಿಳಿಸಿದರು. ಆಲಮಟ್ಟಿ ತುಂಬಿ ತುಳುಕುತ್ತಿದೆ. ಮಂಡ್ಯ ಸೇರಿದಂತೆ ಇತರೆ ಗ್ರಾಮಾಂತರ ಭಾಗಗಳಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಉತ್ತಮ ಮಳೆಯಾಗಿ ತುಂಬವ ನಿರೀಕ್ಷೆ ಇದೆ ಎಂದು ಹೇಳಿದರು.
ಮಹಾತ್ಮ ಗಾಂಧಿ ಅವರು ಕುಳಿತ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಳಿತಿದ್ದಾರೆ
ಕಲ್ಯಾಣ ಕರ್ನಾಟಕ ಭಾಗದ ಜನರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಐವತ್ತು ವರ್ಷಗಳ ಕಾಲ ಬೆಳೆಸಿದ್ದೀರಿ. ಈ ಭಾಗದ ಜನರಿಗೆ 371 ಜೆ ಜಾರಿಗೆ ತಂದು ಹಿಂದುಳಿದಿದ್ದ ಈ ಪ್ರದೇಶದ ಜನರನ್ನು ವಿಶೇಷ ಸ್ಥಾನದಲ್ಲಿ ಕೂರಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧಿ, ಇಂದಿರಾಗಾಂಧಿ, ಸೋನಿಯಾ ಗಾಂಧಿ ಅವರು ಕುಳಿತಿದ್ದ ಜಾಗದಲ್ಲಿ ಎಐಸಿಸಿ ಅಧ್ಯಕ್ಷರಾಗಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಇದೇ ಈ ಭೂಮಿಯ ಶಕ್ತಿ ಎಂದು ಹೇಳಿದರು.
ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದಾರೆ. ಮಹಾತ್ಮ ಗಾಂಧಿ ಅವರ, ನೆಹರು ಅವರ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರು ನೀಡಿದ ಕೊಡುಗೆಗಳ ಇತಿಹಾಸ ಮರೆಯಬಾರದು. ಈ ನೆಲಕ್ಕೆ 371 ಜೆ ನೀಡಿದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟವನ್ನು ಜನ ಮರೆಯದೆ ಸ್ಮರಿಸಬೇಕು" ಎಂದು ಹೇಳಿದರು.
ಗೃಹಜ್ಯೋತಿ ಉದ್ಘಾಟನೆ ಮಾಡಲು ಕಲಬುರ್ಗಿಗೆ ಬಂದಿದ್ದೆವು. ಇದನ್ನು ಆಗ ಬಿಜೆಪಿಯವರು ಟೀಕೆ ಮಾಡಿದರು. ಅವರ ಸರ್ಕಾರ ಇದ್ದಾಗ ಏಕೆ ಇಂತಹ ಕಾರ್ಯಕ್ರಮ ನೀಡಲಿಲ್ಲ. ಗ್ಯಾರಂಟಿ ಯೋಜನೆಯಲ್ಲಿ ಜಾತಿ, ಧರ್ಮ, ಪಕ್ಷಬೇಧವಿಲ್ಲದೆ ನೀಡಿದ್ದೇವೆ. ಬದುಕಿನ ಮೇಲೆ ರಾಜಕಾರಣ ಮಾಡಿದ್ದೇವೆ. ದೇವರು ಇರಬೇಕು ಆದರೆ ಮೊದಲು ಹೊಟ್ಟೆ ತುಂಬಬೇಕು. ಈ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ತಿಳಿಸಿದರು.












Click it and Unblock the Notifications