ಬಿಜೆಪಿಯಲ್ಲಿ ಭುಗಿಲೆದ್ದ ಕಿತ್ತಾಟ; ಕಮಲ ಕೋಟೆಯ ಗುಂಪುಗಾರಿಗೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಬೆಳಗಾವಿ, ಡಿಸೆಂಬರ್ 11: ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ. ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು-ಮೂರು ಗುಂಪುಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ ಅವರು, ಇವತ್ತಿನವರೆಗೆಯೂ ಬರಗಾಲದ ಚರ್ಚೆಯಾಯಿತು. ಇಂದು ಅದಕ್ಕೆ ಉತ್ತರ ನೀಡುತ್ತೇವೆ. ಈಗಾಗಲೇ ಪ್ರಸ್ತಾಪವಾಗಿರುವ ಬಗ್ಗೆ ಉತ್ತರ ನೀಡುತ್ತೇವೆ ಎಂದರು.

ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ. ಪಂಚಾಮಸಾಲಿ ನಾಯಕರ ಮನವಿಗೆ ಸ್ಪಂದಿಸಿಲ್ಲ ಎಂದು ಸ್ವಾಮೀಜಿಗಳು 13 ರಂದು ವಿಧಾನಸಭೆ ಅಧಿವೇಶನ ಮುಗಿದ ನಂತರ ಅವರೊಂದಿಗೆ ಚರ್ಚೆ ಮಾಡಲಾಗುತ್ತವೆ ಎಂದು ತಿಳಿಸಲಾಗಿದೆ ಎಂದರು. ಬೆಳಗಾವಿಯಲ್ಲಿ ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ ಎಂದರು.
ಸುವರ್ಣ ಸೌಧದಲ್ಲಿರುವ ಸಾರ್ವರ್ಕರ್ ಫೋಟೋ ತೆಗೆಯುವ ಬಗ್ಗೆ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಬಿಜೆಪಿ ಮತ್ತು ಜೆಡಿಎಸ್ ನೀರಿನಿಂದ ತೆಗೆದ ಮೀನಿನಂತೆ ವಿಲಿ ವಿಲಿ ಎಂದು ಒದ್ದಾಡುತ್ತಿದ್ದು, ಭ್ರಮಾಲೋಕದಲ್ಲಿದ್ದಾರೆ ಎಂದ ಅವರು, ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿರುವ ಬಗ್ಗೆ ಮಾತನಾಡಿ ಯಾರು ತಪ್ಪಿತಸ್ಥರೊ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.












Click it and Unblock the Notifications