'ಸಿದ್ದರಾಮಯ್ಯ, ಪರಮೇಶ್ವರ ನಡುವೆ ಭಿನ್ನಾಭಿಪ್ರಾಯವಿಲ್ಲ'
ಬೆಂಗಳೂರು, ಡಿಸೆಂಬರ್ 05 : 'ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ' ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, 'ದೆಹಲಿಯಿಂದ ಎಲ್ಲರೂ ಒಟ್ಟಿಗೆ ಬಂದಿದ್ದೇವೆ. ಇಬ್ಬರು ನಾಯಕರ ನಡುವೆ ಯಾವುದೇ ಮನಸ್ತಾಪವಿಲ್ಲ. ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಇರುತ್ತವೆ. ಪಕ್ಷ ಎಂದ ಮೇಲೆ ಇವೆಲ್ಲ ಸಾಮಾನ್ಯ' ಎಂದರು.

'ಸಿದ್ದರಾಮಯ್ಯ ಅವರು ನಡೆಸುವ ಜನಾರ್ಶೀವಾದ ಯಾತ್ರೆಯಲ್ಲಿ ಪರಮೇಶ್ವರ ಅವರು ಪಾಲ್ಗೊಳ್ಳುವುದಿಲ್ಲ. ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಮಾತ್ರ ಅವರು ಪಾಲ್ಗೊಳ್ಳಲಿದ್ದಾರೆ' ಎಂದು ವೇಣುಗೋಪಾಲ್ ತಿಳಿಸಿದರು.
'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಿ ಅಶಾಂತಿ ಉಂಟು ಮಾಡುವುದೇ ಬಿಜೆಪಿಯ ಉದ್ದೇಶ. ಇದಕ್ಕೆ ರಾಷ್ಟ್ರೀಯ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ. ಬಿಜೆಪಿ ನಾಯಕರು ರಾಜ್ಯದಲ್ಲಿ ಅಭಿವೃದ್ಧಿಯ ವಿಚಾರದಲ್ಲಿ ಮಾತನಾಡಲು ಸಾಧ್ಯವಿಲ್ಲ. ಆದ್ದರಿಂದ ಇಂತಹ ತಂತ್ರಗಳನ್ನು ಮಾತ್ರ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.
ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಯಾರಿ, ಪ್ರಚಾರದ ತಂತ್ರ ಮುಂತಾದವುಗಳ ಬಗ್ಗೆ ಕೆಪಿಸಿಸಿ ಪದಾಧಿಕಾರಿ ಜೊತೆ ಚರ್ಚಿಸಲು ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ. ಬುಧವಾರವೂ ಅವರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.












Click it and Unblock the Notifications