ವಿಪಕ್ಷ ನಾಯಕ ಆಯ್ಕೆ ವಿಳಂಬ; ಬಿಜೆಪಿಯ ದುರಂತದ ಕತೆ ಎಂದು ಲಕ್ಷ್ಮಣ್ ಸವದಿ ಹೇಳಿದ್ಯಾಕೆ?
ಬೆಳಗಾವಿ, ಜುಲೈ 31: ರಾಷ್ಟ್ರೀಯ ಪಕ್ಷ ಬಿಜೆಪಿಗೆ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತಿಲ್ಲ. ಇದು ಬಿಜೆಪಿಯ ದುರಂತದ ಕತೆ ಎಂದು ಅಥಣಿ ಶಾಸಕ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸೋಮವಾರ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿವೇಶನ ಮುಗಿದರೂ ಬಿಜೆಪಿಗೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಆಗಲಿಲ್ಲ. ಈ ಮೂಲಕ ಬಿಜೆಪಿ ಹೊಸ ಹೊಸ ಇತಿಹಾಸ ಬರೆಯುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷಕ್ಕೆ ಯಾರು ರಾಜ್ಯಾಧ್ಯಕ್ಷ ಆಗುತ್ತಾರೆ ಎನ್ನುವುದರ ಅವಶ್ಯಕತೆ ನಮಗಿಲ್ಲ. ಆದರೆ, ದುರ್ದೈವದ ಸಂಗತಿ ಎಂದರೆ, ರಾಷ್ಟ್ರೀಯ ಪಕ್ಷ ಬಿಜೆಪಿಗೆ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತಿಲ್ಲ. ಇದು ಬಿಜೆಪಿಯ ದುರಂತದ ಕತೆ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲದೆ ಚರ್ಚೆ ನಡೆದಿದ್ದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು. ಈ ಮೂಲಕ ಬಿಜೆಪಿ ಹೊಸ ಹೊಸ ಇತಿಹಾಸ ಬರೆಯುತ್ತಿದೆ ಎಂದು ಕಿಡಿಕಾರಿದ್ದಾರೆ.
ಹೊಸ ಸರಕಾರ ರಚನೆಯಾದ ಮೇಲೆ ಶಾಸಕರ ಬೇಕು ಬೇಡಗಳ ಬಗ್ಗೆ ಮುಖ್ಯಮಂತ್ರಿ ಆದವರು ಪ್ರತಿಕ್ರಿಯಿಸುವುದು ಸಾಮಾನ್ಯ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಕರೆದ ಹಿನ್ನೆಲೆಯಲ್ಲಿ ಮೊದಲೇ ನಿಗದಿ ಆಗಿದ್ದ ಶಾಸಕಾಂಗ ಪಕ್ಷದ ಸಭೆ ಮುಂದೆ ಹೋಗಿತ್ತಷ್ಟೆ. ಕಾಂಗ್ರೆಸ್ ನಲ್ಲಿ ಯಾವುದೇ ಅಸಮಾಧಾನ ಇಲ್ಲ. ವಿಪಕ್ಷಗಳು ಮಾಡುತ್ತಿರುವ ಆಪಾದನೆಗಳಲ್ಲೂ ಹುರುಳಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಲಕ್ಷ್ಮಣ ಸವದಿ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಮುಂಬರುವ ಲೋಕಸಭಾ ಚುನಾವಣಾ ಟಾಸ್ಕ್ ನೀಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಟಾಸ್ಕ್ ಅಲ್ಲ. ಪಕ್ಷ ನೀಡಿರುವ ಜವಾಬ್ದಾರಿ. ಸಮರ್ಥವಾಗಿ ನಿಭಾಯಿಸುತ್ತೇವೆ. ಆಗಸ್ಟ್ 2 ರಂದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕರೆದಿರುವ ಸಭೆಗೂ ಹೋಗುತ್ತೇವೆ. ಅಲ್ಲಿ ಕೊಡುವ ಜವಾಬ್ದಾರಿಗಳನ್ನೂ ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ತಿಳಿಸಿದರು.
ಇನ್ನೂ ಸಿ.ಟಿ.ರವಿ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿವೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗೇನಾದರೂ ಆದರೆ, ಅವರಿಗೆ ನಾನೂ ಶುಭ ಕೋರುತ್ತೇನೆ ಎಂದು ಲಕ್ಷ್ಮಣ್ ಸವದಿ ತಿಳಿಸಿದರು.












Click it and Unblock the Notifications