ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಹೇಳಿಕೆ!
ಬೆಂಗಳೂರು, ಸೆ. 09: ತಮ್ಮ ದೆಹಲಿ ಪ್ರವಾಸ ಅತ್ಯಂತ ಫಲಪ್ರದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಅವರು, ಎಸ್ಟಿಆರ್ಆರ್ ರಿಂಗ್ ರೋಡ್, ದಾಬಸ್ ಪೇಟೆಯಿಂದ ಮೈಸೂರು ರಸ್ತೆ ನಿರ್ಮಾಣ ಎರಡ್ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು. ಕಾಮಗಾರಿಯನ್ನು ಪುನರ್ ಆರಂಭಿಸಿ ಶೀಘ್ರ ಮುಗಿಸಲು ಕೇಂದ್ರ ಲೋಕೋಪಯೋಗಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ಮಾಡಿದ್ದೇವೆ. ಅದಕ್ಕೆ ಕೇಂದ್ರ ಸಚಿವ ಗಡ್ಕರಿ ಸ್ಪಂಧಿಸಿದ್ದು, ಐದಾರು ತಿಂಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದ ನಾಲ್ಕೈದು ಹೆದ್ದಾರಿಗಳನ್ನು ನಿರ್ಮಾಣ ಮಾಡಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಜೊತೆಯೂ ಚರ್ಚೆ ಮಾಡಿದ್ದು, ಗ್ರಾಮೀಣ ಭಾಗದಲ್ಲಿ ಇಂಟರ್ನೆಟ್ ಸಂಪರ್ಕಕ್ಕೆ ವಿಶೇಷ ಯೋಜನೆ ಮಾಡುವ ಬಗ್ಗೆಯೂ ಚರ್ಚೆಯಾಗಿದೆ. ಗ್ರಾಮೀಣ ಭಾಗವನ್ನು ಡಿಜಿಟೈಜೇಷನ್ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗಿದೆ. ಅದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜೊತೆಗೂಡಿ ಮುಂದುವರೆಯಲಿವೆ ಎಂದು ಬೊಮ್ಮಾಯಿ ವಿವರಿಸಿದ್ದಾರೆ.
ಬೆಂಗಳೂರು ಮತ್ತು ಕೋಲಾರದ ನಡುವೆ ಹಾರ್ಡ್ ವೇರ್ ಪಾರ್ಕ್ ಮಾಡುವ ಬಗ್ಗೆಯೂ ಚರ್ಚೆಯಾಗಿದೆ. ಸ್ಕಿಲ್ ಯೂನಿವರ್ಸಿಟಿ ಮಾಡಬೇಕು ಎಂಬ ಉದ್ದೇಶ ಇಟ್ಟುಕೊಂಡಿದ್ದಾರೆ. ಅದನ್ನು ನಾವು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದೇವೆ. ಸಬ್ ಅರ್ಬನ್ ರೈಲ್ವೇ ಸೇರಿದಂತೆ, ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗಿಲ್ಲ. ಪಕ್ಷ ಸಂಘಟನೆ ಬಗ್ಗೆ ಗಮನ ಕೊಡಲು ಸೂಚನೆ ನೀಡಿದ್ದಾರೆ ಎಂದು ಸಂಪುಟ ವಿಸ್ತರಣೆ ಬಗ್ಗೆ ಬೊಮ್ಮಾಯಿ ತಿಳಿಸಿದ್ದಾರೆ.
Recommended Video
ಇದೇ ಸಂದರ್ಭದಲ್ಲಿ ಕಲಬುರಗಿಯಲ್ಲಿ ಮೇಯರ್ ಸ್ಥಾನಕ್ಕೆ ಜೆಡಿಎಸ್ ಪಟ್ಟು ಹಿಡಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಆ ಬಗ್ಗೆ ಪ್ರಾರಂಭಿಕ ಹಂತದ ಚರ್ಚೆ ಮಾತ್ರ ಆಗಿದೆ. ಆದರೆ ಒಂದಂತೂ ವಿಶ್ವಾಸ ಇಟ್ಟುಕೊಳ್ಳಿ. ಕಲಬುರಗಿಯಲ್ಲಿ ಮೇಯರ್ ಸ್ಥಾನ ಮಾತ್ರ ಬಿಜೆಪಿಯವರೇ ಆಗುತ್ತಾರೆ ಎಂದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ನಿಫಾ ವೈರಸ್ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯದಲ್ಲಿಯೂ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಿದಲಾಗಿದೆ. ಕೇರಳಾದಿಂದ ನಮಗೆ ಯಾವ ಸಮಸ್ಯೆ ಆಗಬಹುದು? ಅದನ್ನು ಹೇಗೆ ತಡೆಯಬಹುದು? ಎಂಬ ಬಗ್ಗೆ ಚರ್ಚಿಸಿದ್ದೇನೆ. ಇಂದು ಸಂಜೆ ಮತ್ತೆ ವರದಿ ತರಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಗುಟ್ಟು ಬಿಟ್ಟು ಕೊಡದ ಬಿಜೆಪಿ ಹೈಕಮಾಂಡ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಪ್ರವಾಸ ಮಂತ್ರಿ ಹುದ್ದೆ ಆಕಾಂಕ್ಷಿಗಳಲ್ಲಿ ಆಸೆ ಗರಿಗೆದರುವಂತೆ ಮಾಡಿತ್ತು. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಿದ್ದರೂ, ಉಳಿದಿರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿದು ಬಂದಿದೆ. ಇದು ಸಚಿವಾಕಾಂಕ್ಷಿಗಳಿಗೆ ನಿರಾಸೆಯನ್ನುಂಟು ಮಾಡಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರಲು ಹಲವು ಹಿರಿಯ ಶಾಸಕರು ಪ್ರಯತ್ನ ನಡೆಸಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಯಾವುದೇ ಚರ್ಚೆ ಅಥವಾ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ. ಇನ್ನು ಕೆಲ ದಿನಗಳ ಕಾಲ ಮಂತ್ರಿ ಸ್ಥಾನಗಳನ್ನುಭರ್ತಿ ಮಾಡದಿರಲು ಹೈಕಮಾಂಡ್ ತೀರ್ಮಾನ ಮಾಡಿದೆ ಎಂಬ ಮಾಹಿತಿಯಿದೆ. ಯಾವ ಕಾರಣಕ್ಕಾಗಿ ಸಂಪುಟ ವಿಸ್ತರಣೆ ಮುಂದೂಡಲಾಗುತ್ತಿದೆ ಎಂಬ ಗುಟ್ಟನ್ನು ಬಿಜೆಪಿ ಹೈಕಮಾಂಡ್ ಬಿಟ್ಟುಕೊಡುತ್ತಿಲ್ಲ.












Click it and Unblock the Notifications