ಮತ್ತೆ ಲಾಕ್ಡೌನ್ ಜಾರಿ ಮಾಡುವ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಹೇಳಿಕೆ!
ಬೆಂಗಳೂರು, ನ. 30: ಇಡೀ ಜಗತ್ತಿಗೆ ಕೊರೊನಾ ವೈರಸ್ ಮೂರನೇ ಅಲೆಯ ಆತಂಕ ಕಾಡುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದ ಕೊರೊನಾ ವೈರಸ್ ಹೊಸ ತಳಿ ಓಮಿಕ್ರಾನ್ ಆತಂಕ ಕೂಡ ಶುರುವಾಗಿದೆ. ಈ ವರೆಗೆ ಓಮಿಕ್ರಾನ್ ರೂಪಾಂತರಿ ವೈರಸ್ ಪ್ರಕರಣ ಭಾರತದಲ್ಲಿ ಪತ್ತೆಯಾಗಿಲ್ಲ. ಆದರೂ ಕೋವಿಡ್ ರೂಪಾಂತರಿ ವೈರಸ್ ಆತಂಕ ಮಾತ್ರ ಕಡಿಮೆಯಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡಲಾಗುವುದು ಎಂಬ ಊಹಾಪೋಹಗಳು ಎದುರಾಗಿವೆ.
Recommended Video
ರೂಪಾಂತರಿ ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಮಾಡಲಾಗುತ್ತಿದೆಯಾ? ಎಂಬುದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ. ಅವರು ಏನು ಹೇಳಿದ್ದಾರೆ ಎಂಬುದು ಮುಂದಿದೆ.
"ರಾಜ್ಯದಲ್ಲಿ ಲಾಕ್ಡೌನ್ ಜಾರಿ ಇಲ್ಲ. ಈ ಕುರಿತಂತೆ ಯಾವುದೇ ಊಹಾಪೋಹಗಳಿಗೆ ಜನ ಕಿವಿಗೊಡಬಾರದು. ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.

"ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ,' ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ವೈರಸ್ ಪರೀಕ್ಷೆ ಹೆಚ್ಚಳ: "ಕೋವಿಡ್ ಹೊಸ ತಳಿ ಒಮಿಕ್ರಾನ್ ಕುರಿತು ನಿಗಾ ಇರಿಸಲಾಗಿದೆ. ಈಗಿರುವ ಡೆಲ್ಟಾ ತಳಿಯಿಂದ ಅಲ್ಲಲ್ಲಿ ಕ್ಲಸ್ಟರ್ ಆಗಿದೆ. ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ವೈಜ್ಞಾನಿಕವಾಗಿ ಕೈಗೊಳ್ಳಬೇಕಿರುವ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ತನಿಖೆಗೆ ಎನ್.ಸಿ.ಬಿ.ಎಸ್ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಲಾಗಿದೆ. ಜೊತೆಗೆ ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ" ಎಂದು ನಾಡಿನ ಜನರಿಗೆ ಸಿಎಂ ಬೊಮ್ಮಾಯಿ ಅಭಯ ನೀಡಿದ್ದಾರೆ.
"ಕ್ಲಸ್ಟರ್ಗಳ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರಿಗೆ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ. ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್ ಕಸ್ಟರ್ಗಳಲ್ಲಿಯೂ ತಪಾಸಣೆಯನ್ನು ತೀವ್ರ ಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಕೂಡ ಹೆಚ್ಚಿಸಲು ಸೂಚನೆ ನೀಡಲಾಗಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ಸಂಜೆ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ರಾಜ್ಯಗಳ ಜೊತೆಗೆ ನಡೆಸುವ ಪರಿಶೀಲನಾ ಸಭೆ ನಡೆಸುತ್ತಿದ್ದೇವೆ. ಸಭೆಯ ನಂತರ ಪರಿಸ್ಥಿತಿ ಅವಲೋಕಿಸಿ ಕ್ರಮ ವಹಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.












Click it and Unblock the Notifications