ಪತಿಯನ್ನೇ ಕೊಲೆ ಮಾಡಿದ ಆರೋಪದ ಮಹಿಳೆಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
ಬೆಂಗಳೂರು ಮೇ 26: ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದಾದ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಸದಾ ಜಾಮೀನು ನಿರಾಕರಿಸಬೇಕೆಂಬ ಕಾನೂನಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಅಲ್ಲದೆ, ಗಂಭೀರ ಅಪರಾಧ ಕೃತ್ಯವೆಸಗಿದ ಹಿನ್ನೆಲೆ ಹೊಂದದವರ ವಿರುದ್ಧದ ಪ್ರಕರಣಗಳನ್ನು ಭಿನ್ನವಾಗಿ ಪರಿಗಣಿಸಬೇಕಾಗುತ್ತದೆ ಎಂದೂ ಅಭಿಪ್ರಾಯಪಟ್ಟಿದೆ. ಜೊತೆಗೆ ಪತಿಯನ್ನೇ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ಮಹಿಳೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನ ಹಾರೋಕ್ಯಾತನಹಳ್ಳಿಯ ಮಹಿಳೆ ನೇತ್ರಾ, ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದಾದ ಅಪರಾಧ ಕೃತ್ಯವೆಸಗಿದ್ದಾರೆಂಬ ಕಾರಣಕ್ಕೆ ಜಾಮೀನು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಆರೋಪಿ ಮಹಿಳೆಯು 2 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಒಬ್ಬರ ಶ್ಯೂರಿಟಿ ಒದಗಿಸಬೇಕು. ಸಾಕ್ಷ್ಯ ನಾಶಪಡಿಸಲು ಯತ್ನಿಸಬಾರದು, ಪೂರ್ವಾನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
ನ್ಯಾಯಪೀಠದ ಏನು ಹೇಳಿದೆ?
"ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಸೆಕ್ಷನ್ 437 ಪ್ರಕಾರ ಆರೋಪಿ ಮರಣ ದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದಾದ ಅಪರಾಧದಲ್ಲಿ ಪಾಲ್ಗೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದರೆ ಜಾಮೀನು ನೀಡಬಾರದು. ಆದರೆ, ಆರೋಪಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರೆ, ಮಹಿಳೆಯಾಗಿದ್ದರೆ ಹಾಗೂ ಅಸ್ವಸ್ಥ ಅಥವಾ ಅನಾರೋಗ್ಯಕ್ಕೆ ತುತ್ತಾಗಿದ್ದರೆ ಜಾಮೀನು ಮೇಲೆ ಬಿಡುಗಡೆ ಮಾಡಲು ಕಾನೂನಿನಲ್ಲಿಯೇ ಅವಕಾಶವಿದೆ'' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಈ ಪ್ರಕರಣದಲ್ಲಿ ಪರಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾದ ಪತಿಯನ್ನು ಕೊಲೆ ಮಾಡಿದ ನಂತರ ಆರೋಪಿ ಮಹಿಳೆಯೇ ಪೊಲೀಸರ ಮುಂದೆ ಶರಣಾಗಿದ್ದಾರೆ. ಅವರಿಗೆ ಬೇರಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ. ಈಗಾಗಲೇ ಪೊಲೀಸರು ತನಿಖೆಯ ಪೂರ್ಣಗೊಳಿಸಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಹಾಗಾಗಿ ಅರ್ಜಿದಾರರು ಜಾಮೀನು ಪಡೆಯಲು ಅರ್ಹರು ಎಂದು ಹೈಕೋರ್ಟ್ ಹೇಳಿದೆ.
ಪ್ರಕರಣದ ವಿವರ:
Recommended Video
2021ರ ನ.7ರಂದು ಮಾದನಾಯಕನಹಳ್ಳಿ ಪೊಲೀಸ್ಗೆ ಠಾಣೆಗೆ ದೂರು ನೀಡಿದ್ದ ನೇತ್ರಾ ಮಾವ, ನನ್ನ ಮಗ ಪಾಲಾರ್ ಸ್ವಾಮಿಯನ್ನು ನ.6ರಂದು ಸೊಸೆ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ದೂರು ಆಧರಿಸಿ ನೇತ್ರಾ ಅವರನ್ನು ಬಂಧಿಸಿದ್ದ ಪೊಲೀಸರು, ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮಧ್ಯೆ ನೇತ್ರಾ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಆದರೆ, ಆರೋಪಿಯ ವಿರುದ್ಧ ಜೀವಾವಧಿ ಅಥವಾ ಮರಣದಂಡನೆ ವಿಧಿಸಬಹದಾದ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪ ಇರುವ ಕಾರಣಕ್ಕೆ ಜಾಮೀನು ನೀಡಲಾಗದು ಎಂದು ವಿಚಾರಣಾ ನ್ಯಾಯಾಲಯ ಆದೇಶಿಸಿತ್ತು. ಹಾಗಾಗಿ ಆ ಆದೇಶ ಪ್ರಶ್ನಿಸಿ ನೇತ್ರಾ ಹೈಕೋರ್ಟ್ ಮೊರೆ ಹೋಗಿದ್ದರು.