ಕಾಸಿಗಾಗಿ ಪೋಸ್ಟಿಂಗ್ ದಂಧೆ ಎಂದ ಹೆಚ್ಡಿಕೆ; ಪೋಸ್ಟಿಂಗ್ ನಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದ ರಾಮಲಿಂಗರೆಡ್ಡಿ
ಬೆಂಗಳೂರು, ಜೂನ್ 28: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರಾಕರಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ನಾವು ಹಿಂದಿನ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ನಾವು ಆರೋಪ ಮಾಡಿ, ನಾವು ಭ್ರಷ್ಟಾಚಾರ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದ ಅವರು, ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪ ಸುಳ್ಳು. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಮಾತ್ರ ಮಣೆ ಹಾಕುತ್ತೇವೆ ಎಂದ ಅವರು, ವರ್ಗಾವಣೆ ದಂಧೆ ಆರೋಪ ತಳ್ಳಿ ಹಾಕಿದ್ದಾರೆ.

ಈ ವೇಳೆ ಈ ತಿಂಗಳ ವೇತನಕ್ಕೆ ಸಾರಿಗೆ ನಿಗಮದಲ್ಲಿ ಹಣಕಾಸು ಕೊರತೆ ವಿಚಾರವಾಗಿ ಮಾತನಾಡಿ, ಸರ್ಕಾರದಿಂದ ನಮಗೆ ಮಹಿಳಾ ಪ್ರಯಾಣಿಕರು ಎಷ್ಟು ಸಂಖ್ಯೆಯಲ್ಲಿ ಪ್ರಯಾಣ ಮಾಡಿದ್ದಾರೆಅದರ ವೆಚ್ಚ ಮಾಹಿತಿ ನೀಡಿಲಿದೆ. ಈ ನಿಟ್ಟಿನಲ್ಲಿ ವೇತನ ಸಮಸ್ಯೆ ಆಗುವುದಿಲ್ಲ. ಊಹೆ ಮಾಡಿಕೊಂಡು ಹೇಳಿದ್ದಕ್ಕೆ ಉತ್ತರ ಕೊಡಲು ಆಗಲ್ಲ ಎಂದರು.
ಪೋಸ್ಟಿಂಗ್ ಹಾಕಲು ದುಡ್ಡು; ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?
ಪಂಚಗ್ಯಾರಂಟಿಗಳ ಕಾಂಗ್ರೆಸ್ ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ.
ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ?? ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್ ಕಂಟ್ರೋಲ್ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ.
ಈ ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.












Click it and Unblock the Notifications