7th Pay Commission: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ: 7ನೇ ವೇತನ ಆಯೋಗ ಜಾರಿ ಕುರಿತು ಸಂಪುಟದಲ್ಲಿ ಆಗಿದ್ದೇನು?
ಬೆಂಗಳೂರು, ಜೂನ್ 21: ಬಹುದಿನಗಳ ಕಾಲ 7 ನೇ ವೇತನ ಆಯೋಗ ಜಾರಿ ಕನಸು ಕಂಡಿದ್ದ ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ಜಾರಿ ಕುರಿತು ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಸರ್ಕಾರಿ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡ ನೌಕರರಿಗೆ ಮತ್ತೆ ನಿರಾಸೆಯಾಗಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯದಲ್ಲಿ ಏಳನೇ ವೇತನ ಆಯೋಗದ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ.

ಇನ್ನೂ ಸಚಿವ ಸಂಪುಟ ಸಭೆಯಲ್ಲಿ ಹತ್ತು ಹಲವು ವಿಚಾರದ ಬಗ್ಗೆ ಚರ್ಚೆ ನಡೆದಿದ್ದು,ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು ನಡೆಸಿದ ಪತ್ರಿಕಾಗೋಷ್ಠಿಯ ಮೂಲಕ ಮಾಹಿತಿ ನೀಡಿದ್ದಾರೆ. ಭಾರತ್ ಚಿನ್ನದ ಗಣಿ ಸಂಸ್ಥೆಯ, ಕೆಜಿಎಫ್ ಕೋಲಾರ ಜಿಲ್ಲೆಯಲ್ಲಿ ನಿಷ್ಕ್ರಿಯಗೊಂಡಿರುವ ಗಣಿಗುತ್ತಿಗೆ ಪ್ರದೇಶದಲ್ಲಿನ 13 Tailing Dumps ಗಳ 1003.4 ಎಕರೆ ಪ್ರದೇಶದಲ್ಲಿ MMDR ಕಾಯ್ದೆಯ ಕಲಂ 17ರಲ್ಲಿ ಪ್ರದತ್ತವಾಗಿರುವ ವಿಶೇಷ ಅಧಿಕಾರವನ್ನು ಚಲಾಯಿಸಿ ಗಣಿಗುತ್ತಿಗೆ ಚಟುವಟಿಕೆಗಳನ್ನು ಮುಂದುವರೆಸಲು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಸಚಿವ ಸಂಪುಟ ಸಹಮತಿ ನೀಡಿದೆ.
5213.21 ಹೆಕ್ಟೇರ್ ಪ್ರದೇಶದಲ್ಲಿ ಈ ಚಟುವಟಿಕೆಗಳು ನಡೆಯಲಿವೆ. 75.24 ಕೋಟಿ 2022-23 ರವರೆಗೆ ಬಿಜಿಎಂಎಲ್ ರಾಜ್ಯಕ್ಕೆ ಬಾಕಿ ಮೊತ್ತವನ್ನು ಪಾವತಿಸಬೇಕಿದೆ 2330 ಎಕರೆ ಭೂಮಿಯನ್ನು ನಮ್ಮ ಸರ್ಕಾರಕ್ಕೆ ಕೈಗಾರಿಕಾ ವಸಾಹತುವನ್ನು ಸ್ಥಾಪಿಸಲು ನೀಡಬೇಕೆನ್ನುವ ಬೇಡಿಕೆ ಸರ್ಕಾರದ್ದು. ಇದರಿಂದ ಸಾವಿರಾರು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಸಚಿವರು ಮಾಹಿತಿ ಒದಗಿಸಿದರು.
ಜನವರಿ-26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಲು ಸೂಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ಹಾಗೂ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇರಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಉನ್ನತ ಶಿಕ್ಷಣ ಇಲಾಖೆಯ ವಿಶ್ವವಿದ್ಯಾಲಯಗಳಲ್ಲಿ ರಾಜ್ಯದಲ್ಲಿ ಪ್ರಧಾನ ಮಂತ್ರಿ ಉಚ್ಛತರ್ ಶಿಕ್ಷಾ ಅಭಿಯಾನ (PM- USHA) ಯೋಜನೆಯನ್ನು ಆಯಾಯ ವಿಶ್ವವಿದ್ಯಾಲಯಗಳ ವಿಸ್ತøತ ಯೋಜನಾ ವರದಿಯಲ್ಲಿ ಸೂಚಿಸಿರುವಂತೆ ಬೆಂಗಳೂರು ವಿಶ್ವವಿದ್ಯಾಲಯ (ಬೆಂಗಳೂರು), ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ (ಬೆಳಗಾವಿ), ಕರ್ನಾಟಕ ವಿಶ್ವವಿದ್ಯಾಲಯ (ಧಾರವಾಡ), ಮಂಗಳೂರು ವಿಶ್ವವಿದ್ಯಾಲಯ (ಮಂಗಳೂರು), ಕಲಬುರಗಿ ವಿಶ್ವವಿದ್ಯಾಲಯ (ಕಲಬುರಗಿ) ಹಾಗೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ (ಬೆಂಗಳೂರು) ಗಳಲ್ಲಿ ಕೇಂದ್ರದ ವಂತಿಕೆ ರೂ.167.86 ಮತ್ತು ರಾಜ್ಯದ ವಂತಿಕೆ ರೂ. 111.91 ಕೋಟಿ ಒಟ್ಟು ರೂ.279.77 ಕೋಟಿಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಸಂಸ್ಥೆಯಡಿ ಬರುವ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ನೂತನ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ರೂ.75.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಡಿ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1234 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಯೋಜನೆಯನ್ನು ರೂ.29.19 ಕೋಟಿ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು (ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರೂ.25.85 ಕೋಟಿ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರೂ.3.34 ಕೋಟಿ) ಸಚಿವ ಸಂಪುಟ ನಿರ್ಧರಿಸಿದೆ.
ರಾಜ್ಯದ 8 ಜಿಲ್ಲೆಗಳಲ್ಲಿನ 201 KRIES ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೋಟರಿ ಇಂಟರ್ನ್ಯಾಷನಲ್ ಬೆಂಗಳೂರು ಇವರ ಸಹಭಾಗಿತ್ವದೊಂದಿಗೆ ಒಟ್ಟು ವೆಚ್ಚ ರೂ.2.37 ಕೋಟಿಗಳಲ್ಲಿ ರೋಟರಿ ಇಂಟರ್ನ್ಯಾಷನಲ್ ಸಂಸ್ಥೆ ವತಿಯಿಂದ ರೂ.1.87 ಕೋಟಿಗಳನ್ನು ಮತ್ತು KRIES ಸಂಸ್ಥೆ ವತಿಯಿಂದ ರೂ.49.89 ಲಕ್ಷಗಳನ್ನು ಭರಿಸುವ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.












Click it and Unblock the Notifications