ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಗೆಲುವಿಗೆ ಕಾರಣವಾದ 3 ಅಂಶಗಳು ಇವೇ!
ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಕರ್ನಾಟಕ ಸರ್ಕಾರಕ್ಕೆ ಹೊಸ ಹುರುಪನ್ನೇ ಕೊಟ್ಟಿದೆ. ಸಾಲು ಸಾಲು ಆರೋಪ.. ವಿವಾದಗಳ ನಡುವೆ ಕಾಂಗ್ರೆಸ್ನ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಸಂಕಷ್ಟ ಅನುಭವಿಸಿತ್ತು. ಕಾಂಗ್ರೆಸ್ನ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬಿದಿದ್ದರು. ಇಷ್ಟೆಲ್ಲ ಸವಾಲುಗಳ ನಡುವೆ ಕಾಂಗ್ರೆಸ್ ಅಭ್ಯರ್ಥಿಗಳು ದಾಖಲೆಯ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಹಾಯವಾದ ಇಂಟ್ರಸ್ಟಿಂಗ್ ಪಾಯಿಂಟ್ಸ್ ಇಲ್ಲಿದೆ.
ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಯಾರು ನಿರೀಕ್ಷೆ ಮಾಡದ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಕಾಂಗ್ರೆಸ್ಗೆ ಬಿಗ್ ಫೈಟ್ ಇತ್ತು. ಕಳೆದ ಮೂರು ತಿಂಗಳ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪಗಳು ಕೇಳಿ ಬಂದಿತ್ತು. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಎಫ್ಐಆರ್ ಸಹ ದಾಖಲಾಗಿತ್ತು. ಅಲ್ಲದೇ ವಕ್ಫ್ ಆಸ್ತಿ ವಿವಾದವು ಭಾರೀ ದೊಡ್ಡ ಹೊಡೆತವನನ್ನೇ ನೀಡಲಿದೆ ಎನ್ನಲಾಗಿತ್ತು. ಆದರೆ, ಆ ಲೆಕ್ಕಾಚಾರಗಳೆಲ್ಲವೂ ತಲೆಕೆಳಗಾಗಿದೆ.

ಕಾಂಗ್ರೆಸ್ನ ಅಭ್ಯರ್ಥಿಗಳು ಮೂರು ಕ್ಷೇತ್ರಗಳಲ್ಲಿ ಹೊಸ ದಾಖಲೆಯನ್ನೇ ಬರೆದಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎದುರಾಗಿದ್ದ ಅರ್ಧ ಸಂಕಷ್ಟ ದೂರವಾದಂತಾಗಿದೆ. ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನ ಅಭ್ಯರ್ಥಿಗಳು ಸೋತಿದ್ದರೆ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕದ ಜನ ಕೋಪಗೊಂಡಿದ್ದಾರೆ ಎನ್ನುವ ಮೆಸೇಜ್ ಹೋಗುತ್ತಿತ್ತು. ಆದರೆ, ಈಗ ತದ್ವಿರುದ್ಧವಾಗಿದೆ.
ಕಾಂಗ್ರೆಸ್ ಗೆಲ್ಲುವುದಕ್ಕೆ ಕಾರಣವೇನು ?
ಕರ್ನಾಟಕದ ಮೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸುವುದಕ್ಕೆ ಮುಖ್ಯ ಕಾರಣ ಈ ಬಾರಿ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಉಪ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದು. ಈ ಬಾರಿಯ ಮೂರು ವಿಧಾನಸಭೆ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ನ ನಾಯಕರು ಒಗ್ಗಟ್ಟಾಗಿದ್ದರು. ಮಂತ್ರಿಗಳನ್ನು ಜಿಲ್ಲಾವಾರು ನೇಮಿಸಿ ಅವರಿಗೆ ಸ್ಪೆಷಲ್ ಟಾಸ್ಕ್ ನೀಡಲಾಗಿತ್ತು.
2024ನೇ ಸಾಲಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಸಚಿವರ ಮಕ್ಕಳಿಗೆ ಟಿಕೆಟ್ ನೀಡಲಾಗಿತ್ತು. ಅದರಲ್ಲಿ ಕೆಲವರು ಗೆದ್ದರೆ, ಇನ್ನೂ ಕೆಲವರು ಸೋತಿದ್ದರು. ಹೀಗಾಗಿ, ಆಗಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ನಾಯಕರಿಗೆ ಎಚ್ಚರಿಕೆಯನ್ನು ನೀಡಿತ್ತು. ರಾಜ್ಯಕ್ಕೆ ಭೇಟಿ ನೀಡಿದ್ದ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪುಲ್ ಕ್ಲಾಸ್ ತೆಗೆದುಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದರು. ಹೀಗಾಗಿ, ಈಗ ನೀಡುರುವ ಟಾಸ್ಕ್ ಅನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.
ಕೈಹಿಡಿದ ಗ್ಯಾರಂಟಿ ಯೋಜನೆಗಳು: ರಾಜ್ಯದ ಮೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳ ಕೈ ಹಿಡಿದಿದ್ದು, ಇದಕ್ಕೆ ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳೇ ಕಾರಣ ಎಂದೇ ಹೇಳಲಾಗುತ್ತಿದೆ. ಬಿಜೆಪಿ ನಾಯಕರ ಆಕ್ರೋಶ ಹಾಗೂ ಹೋರಾಟಗಳು, ಪ್ರತಿಭಟನೆಯಗಳ ನಡುವೆಯೂ ರಾಜ್ಯದ ಮತದಾರರನ್ನು ಸೆಳೆಯುವಲ್ಲಿ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಒಗ್ಗಟ್ಟಿನ ಪ್ರಚಾರ: ರಾಜ್ಯದಲ್ಲಿನ ಕಾಂಗ್ರೆಸ್ನ ಪ್ರಭಾವಿ ನಾಯಕರು ಹಾಗೂ ಸಚಿವರು ಈ ಬಾರಿ ಮೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡು ಪ್ರಚಾರ ಮಾಡಿದರು. ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡಿದ್ದರು. ನಾಯಕರಲ್ಲಿ ಭಿನ್ನಾಭಿಪ್ರಾಯಗಳು ಇದ್ದರೂ, ಅದನ್ನು ಚುನಾವಣಾ ಪ್ರಚಾರಗಳಲ್ಲಿ ಇಲ್ಲವೇ ಚುನಾವಣೆ ಅಖಾಡದಲ್ಲಿ ಎಲ್ಲೂ ಪ್ರದರ್ಶಿಸಿರಲಿಲ್ಲ. ಇದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ವರದಾನವಾಯಿತು.
ಅಭ್ಯರ್ಥಿಗಳ ವರ್ಚಸ್ಸು ಹಾಗೂ ಬೆಂಬಲಿಗರು: ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದ ಅಭ್ಯರ್ಥಿಗಳ ವೈಯಕ್ತಿಕ ವರ್ಚಸ್ಸು ಹಾಗೂ ಅವರ ಬೆಂಬಲಿಗರ ನೆರವು ಮಹತ್ವದ ಪರಿಣಾಮ ಬೀರಿದೆ. ಸಂಡೂರಿನಲ್ಲಿ ಇ ತುಕಾರಂ ಅವರ ಬೆಂಬಲಿಗರು, ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಅವರ ಬೆಂಬಲಿಗರು ಹಾಗೂ ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಖಾನ್ ಅವರ ಬೆಂಬಲಿಗರು ಕಾಂಗ್ರೆಸ್ ಕೈಹಿಡಿದಿದ್ದಾರೆ. ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಅಮೋಘ ಬೆಂಬಲ ಇದೆ. ಇನ್ನು ಯಾಸಿರ್ ಅಹ್ಮದ್ ಖಾನ್ ಅವರಿಗೆ ಸಿಂಪತಿ ಹಾಗೂ ಮುಸ್ಲಿಂ ಸಮುದಾಯದ ಮತದಾರರು ಬೆಂಬಲಿಸಿದ್ದಾರೆ ಎನ್ನಲಾಗಿದೆ.
ಅಲ್ಲದೇ ಆಡಳಿತ ಪಕ್ಷದ ಶಾಸಕರೇ ಕ್ಷೇತ್ರದಲ್ಲಿ ಇದ್ದರೆ, ಅಭಿವೃದ್ಧಿ ಹಾಗೂ ಅನುದಾನ ಸುಲಭವಾಗಿ ಸಿಗಲಿದೆ ಎನ್ನುವ ಲೆಕ್ಕಾಚಾರವೂ ಇದೆ.












Click it and Unblock the Notifications