ಒಬ್ಬರಿಗೆ ಒಂದೇ ಟಿಕೆಟ್, ಸಿದ್ದುಗೆ ಡಿ. ಕೆ. ಶಿವಕುಮಾರ್ ಟಾಂಗ್
ಬೆಂಗಳೂರು, ನವೆಂಬರ್ 25: ಮುಂದಿನ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಕಳೆದ ಬಾರಿಯಂತೆ ಎರಡು ಕಡೆ ಸ್ಪರ್ಧೆ ಮಾಡಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ಮಾಡಿರುವುದು, ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂದರು.
ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದರು.

ಅರ್ಜಿ ಸಲ್ಲಿಕೆ ನಂತರ ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ನಿಮ್ಮ ಮನೆಗೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ಎಂದು ಹೇಳಿದರು.
ಜನರು ದಂಗೆ ಏಳುತ್ತಿದ್ದಾರೆ: ಇನ್ನೂ ಈ ವೇಳೆ ಸಂಸದ ಡಿ. ಕೆ. ಸುರೇಶ್ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ವಿರುದ್ಧ ಜನರು ದಂಗೆ ಏಳುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ದಿವಾಳಿಯಾಗಿದೆ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಬಹಳಷ್ಟು ಜನ ಇದ್ದಾರೆ. ಇದರ ಅರ್ಥ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ಇದೆ ಎಂದು ಆಯ್ತು. ಬಸವರಾಜ ಬೊಮ್ಮಾಯಿ ಕ್ಷೇತ್ರದಲ್ಲಿಯೇ 51 ಜನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದಾರೆ ಎಂದು ತಿರುಗೇಟು ನೀಡಿದರು.
ಸಿಎಂ ಬಸವರಾಜ ಬೊಮ್ಮಾಯಿ ಆಡಳಿತ ವಿರುದ್ಧ ಜನರು ದಂಗೆ ಏಳುತ್ತಿದ್ದಾರೆ. ಚುನಾವಣೆಗೆ ನಾವು ಎಲ್ಲಾ ಹಂತದಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಟಿಕೆಟ್ ಆಕಾಂಕ್ಷಿಗಳು ,ಶಾಸಕರು,ಪಕ್ಷದ ನಾಯಕರು ಪಕ್ಷದ ಸಭೆಗೆ ಬರುತ್ತಾರೆ ಎಂದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರ ಅಕ್ರಮ ಮಾಡಿದೆ. ಇಂದಿನ ಸಭೆಯಲ್ಲಿ ಈ ವೋಟರ್ ಐಡಿ ಅಕ್ರಮ ಪ್ರಕರಣದ ಬಗ್ಗೆಯೂ ಚರ್ಚೆ ಆಗುತ್ತದೆ. ಈ ವೋಟರ್ ಐಡಿ ಹಗರಣದ ಕುರಿತು ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಅನ್ನುವುದರ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದರು.












Click it and Unblock the Notifications