ಸಿದ್ದರಾಮಯ್ಯರಿಗೆ ಕೋವಿಡ್; ಇವರೆಲ್ಲರಿಗೂ ಢವ ಢವ!
ಬೆಂಗಳೂರು, ಆ. 04: ಕೋವಿಡ್-19 ಸೋಂಕು ದೃಢಪಟ್ಟಿದ್ದರಿಂದ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಸ್ಪತ್ರೆ ಸೇರಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ದಾಖಲಾಗಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಹಲವು ಸಚಿವರು, ಅಧಿಕಾರಿಗಳು ಸೇರಿದಂತೆ ಹಲವರು ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಇದೀಗ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಂಪರ್ಕಕ್ಕೆ ಬಂದವರು ಕೂಡ ಕ್ವಾರಂಟೈನ್ಗೆ ಒಳಗಾಗಬೇಕಾಗಿದೆ .
Recommended Video
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೂ ಕೂಡ ಸತತವಾಗಿ ಸಾರ್ವಜನಿಕ ಸಂಪರ್ಕದಲ್ಲಿದ್ದರು. ಜೊತೆಗೆ ಕಾಂಗ್ರೆಸ್ ಪಕ್ಷದ ಸಭೆ, ಸರ್ಕಾರದ ವಿರುದ್ಧ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಹೀಗಾಗಿ ಅವರೊಂದಿಗೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದಾರೆ. ಈಗ ಅವೆರೆಲ್ಲರೂ ತಾವೇ ಮುಂದಾಗಿ ಕ್ವಾರಂಟೈನ್ಗೆ ಒಳಗಾಗುತ್ತಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ ತಗುಲಿದೆ ಕೊರೊನಾ
ಪ್ರಮುಖವಾಗಿ ಕಳೆದ ಎಂಟು ದಿನಗಳ ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ಕಾಂಗ್ರೆಸ್ನ ಬಹುತೇಕ ನಾಯಕರು ವೇದಿಕೆ ಹಂಚಿಕೊಂಡಿದ್ದಾರೆ. ಕಳೆದ ಜುಲೈ 27 ರಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕರ ಸಭೆ ಕರೆದಿದ್ದರು. ಆ ಸಭೆಯಲ್ಲಿ ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಸಲೀಂ ಅಹ್ಮದ್, ಕೆ.ಎಚ್. ಮುನಿಯಪ್ಪ, ಈಶ್ವರ್ ಖಂಡ್ರೆ, ರಮೇಶ್ ಕುಮಾರ್, ಎಂಎಲ್ಸಿ ನಾರಾಯಣಸ್ವಾಮಿ, ಅಜಯ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈಗ ಆ ಎಲ್ಲ ನಾಯಕರಲ್ಲಿ ಆತಂಕ ಶುರುವಾಗಿದೆ.
ಸಿದ್ದರಾಮಯ್ಯಗೆ ಕೊರೊನಾ: ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು
ಮುಂಜಾಗ್ರತಾ ಕ್ರಮವಾಗಿ ಆ ಎಲ್ಲ ನಾಯಕರು ಈಗ ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕಾಗಿದೆ. ಜೊತೆಗೆ ಎಲ್ಲರೂ ಸ್ವಯಂ ಪ್ರೇರಿತವಾಗಿ ಐಸೋಲೇಟ್ ಆಗಬೇಕು. ಆದರೆ ಆ ಸಭೆ ಎಂಟು ದಿನಗಳ ಹಿಂದೆ ನಡೆದಿರುವುದರಿಂದ ಹಾಗೂ ಸಿದ್ದರಾಮಯ್ಯ ಅವರಲ್ಲಿ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬರದೇ ಇದ್ದುದರಿಂದ ಅವರಿಂದ ಬೇರೆಯವರಿಗೆ ಸೋಂಕು ಹರಡಿರುವ ಸಾಧ್ಯತೆ ಇಲ್ಲ. ಆದರೆ ಸಭೆಯಲ್ಲಿ ಭಾಗವಹಿಸಿದ್ದವರಿಂದಲೇ ಸಿದ್ದರಾಮಯ್ಯ ಅವರಿಗೆ ಸೋಂಕು ಬಂದಿರುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಹೀಗಾಗಿ ಹಲವು ನಾಯಕರೂ ಈಗಾಗಲೇ ಸ್ವಯಂ ಐಸೊಲೇಶನ್ಗೆ ಒಳಗಾಗಿದ್ದಾರೆ.
ಮಾಜಿ ಸಂಸದೀಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಅವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ ಎಂಬ ಮಾಹಿತಿಯಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಲಬುರಗಿ ಜಿಲ್ಲಾ ಪ್ರವಾಸದಲ್ಲಿದ್ದಾರೆ.