ಸರ್ಕಾರಕ್ಕೆ ‘ಪ್ರತಿರೋಧ ಸಮಾವೇಶ’ ಸಲ್ಲಿಸಿದ ಹಕ್ಕೊತ್ತಾಯಗಳಿವು
ಬೆಂಗಳೂರು, ಸೆಪ್ಟೆಂಬರ್ 12: ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಇಂದು ನಗರದ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ನಡೆದ 'ಪ್ರತಿರೋಧ ಸಮಾವೇಶ'ದಲ್ಲಿ ಸರಕಾರಕ್ಕೆ ಮೂರು ಹಕ್ಕೊತ್ತಾಯಗಳನ್ನು ಮಂಡಿಸಲಾಗಿದೆ.
ಬೆಂಗಳೂರಿನಲ್ಲಿ ಮೊಳಗಿದ 'ನಾನು ಗೌರಿ, ನಾವೆಲ್ಲಾ ಗೌರಿ' ಘೋಷಣೆ
ಎಸ್ಐಟಿ ತನಿಖೆಯನ್ನು ತೀವ್ರಗೊಳಿಸಬೇಕು, ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ವಿಚಾರವಾದಿಗಳ ಸರಣಿ ಕೊಲೆಗಳನ್ನು ಈ ತನಿಖೆ ವೇಳೆ ಪರಿಗಣಿಸಬೇಕು, ಸಂಘ ಪರಿವಾರ ಮತ್ತು ಬಿಜೆಪಿಯ ಅಮಾನವೀಯ ನಡವಳಿಕೆಗಳನ್ನು ಮಟ್ಟಹಾಕಬೇಕು ಎಂದು ಕರ್ನಾಟಕ ಸರಕಾರಕ್ಕೆ 'ಗೌರಿ ಲಂಕೇಶ್ ಹತ್ಯೆ ವಿರೋಧಿ ವೇದಿಕೆ' ಹಕ್ಕೊತ್ತಾಯ ಮಂಡಿಸಿದೆ.
In Pics: ನಾನೂ ಗೌರಿ ಎಂದು ಬಂದರು ಸಾವಿರಾರು ಮಂದಿ
ಎಸ್ಐಟಿ ತನಿಖೆ ತೀವ್ರಗೊಳಿಸಿ
ಗೌರಿ ಲಂಕೇಶರ ಹತ್ಯೆಯ ತನಿಖೆಯನ್ನು ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ಮುಖಾಂತರ ತೀವ್ರಗೊಳಿಸಿ, ಕಾಲ ನಿಗದಿತವಾಗಿ ಮುಗಿಸಿ ಹಂತಕರನ್ನು ಹಾಗೂ ಅವರ ಹಿಂದೆ ಇರುವ ಶಕ್ತಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕು.
ವಿಚಾರವಾದಿಗಳ ಸರಣಿ ಕೊಲೆಗಳನ್ನು ತನಿಖೆ ವೇಳೆ ಪರಿಗಣಿಸಿ
ಗೌರಿ ಲಂಕೇಶರು ಕಳೆದ ಒಂದೂವರೆ ದಶಕಗಳಿಂದ ಕೆಲವು ಸಂವಿಧಾನ ವಿರೋಧಿ ಹಾಗೂ ಮಾನವತೆಯ ವಿರೋಧಿಗಳನ್ನು ಖಂಡಿಸುತ್ತಾ ಚಿಂತನೆ ಮತ್ತು ಹೋರಾಟವನ್ನು ನಡೆಸಿದ್ದರು. ಅವರು ಮಾತ್ರವಲ್ಲದೆ, ಈ ದೇಶದಲ್ಲಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ವಿಚಾರವಾದಿಗಳ ಸರಣಿ ಕೊಲೆಗಳು ಇನ್ನೂ ಹಲವೆಡೆ ನಡೆಯುತ್ತಿದೆ. ಹಾಗಾಗಿ ಈ ಆಯಾಮವನ್ನು ವಿಶೇಷವಾಗಿ ಪರಿಗಣಿಸಿ ತನಿಖೆಯನ್ನು ಚುರುಕುಗೊಳಿಸಬೇಕೆಂದು ಈ ಸಮಾವೇಶವು ಒತ್ತಾಯಿಸುತ್ತದೆ.
ಹತ್ಯೆ ಸಂಭ್ರಮಿಸುವ ಮನಸ್ಥಿತಿಗಳನ್ನು ಮಟ್ಟಹಾಕಿ
ಆರೆಸ್ಸೆಸ್, ಹಿಂದೂ ಜಾಗರಣ ವೇದಿಕೆ, ವಿಎಚ್ ಪಿ, ಭಜರಂಗದಳ, ಶ್ರೀರಾಮಸೇನೆ, ಸನಾತನ ಸಂಸ್ಥೆ ಇತ್ಯಾದಿ ಆರೆಸ್ಸೆಸ್ ಅಂಗಸಂಸ್ಥೆಗಳ ಸದಸ್ಯರು/ಬೆಂಬಲಿಗರು ಈ ಹತ್ಯೆಯನ್ನು ಸಂಭ್ರಮಿಸಿದ ದುರಂತವು ಈ ನಾಡಿನಲ್ಲಿ ನಡೆದುದಕ್ಕೆ ನಾವೆಲ್ಲಾ ಸಾಕ್ಷಿಗಳಾಗಿದ್ದೇವೆ. ಹಾಗೆಯೇ ಬಿಜೆಪಿ ನಾಯಕರು ಹತ್ಯೆಗೆ ಪರೋಕ್ಷ ಸಮರ್ಥನೆ ನೀಡಿ ಮಾತಾಡಿದ್ದನ್ನೂ ಈ ನಾಡು ನೋಡಿದೆ.
ಯಾವುದೇ ಧರ್ಮದ ಭೋದನೆಗಳಿಗೂ ವಿರುದ್ಧವಾದ ಇಂತಹ ಅಮಾನವೀಯ ನಡವಳಿಕೆಗಳನ್ನು ಸಮಾವೇಶವು ಖಂಡಿಸುತ್ತದೆ. ಈ ಬಗೆಯ ಮನಸ್ಥಿತಿಯನ್ನು ಇಲ್ಲವಾಗಿಸಲು ಪ್ರಯತ್ನ ಪಡುವುದು ನಾಗರಿಕ ಸಮಾಜದ ಸರ್ಕಾರಗಳ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ.
ಮುಖ್ಯಮಂತ್ರಿಗಳಿಗೆ ಸಲ್ಲಿಕೆ
ಈ ಹಕ್ಕೊತ್ತಾಯಗಳನ್ನು ನೆರೆದಿದ್ದ ಸಾವಿರಾರು ಜನರ ಮುಂದೆ ಮಂಡಿಸಲಾಯಿತು. ಈ ಹಕ್ಕೊತ್ತಾಯಗಳನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಲಾಗುತ್ತದೆ.