ಕಾಂಗ್ರೆಸ್ ಶಾಸಕರ ಪಕ್ಷಾಂತರ ಬೆನ್ನಲ್ಲೇ ತರೀಕೆರೆ ಜೆಡಿಎಸ್ ನಲ್ಲಿ ಬಂಡಾಯ
ಚಿಕ್ಕಮಗಳೂರು, ಏಪ್ರಿಲ್ 19: ತರೀಕೆರೆಯ ರಾಜಕೀಯ ಮುಗಿಯುವಂತೆ ಕಾಣಿಸುತ್ತಿಲ್ಲ. ಹಾಲಿ ಶಾಸಕ ಶಾಸಕ ಜಿ. ಎಚ್. ಶ್ರೀನಿವಾಸ್ ಕಾಂಗ್ರೆಸ್ ಟಿಕೆಟ್ ಪಡೆಯಲು ವಿಫಲವಾದ ಹಿನ್ನಲೆಯಲ್ಲಿ ಬಂಡಾಯವೆದ್ದಿದ್ದರು. ಅವರು ಬುಧವಾರ ಜೆಡಿಎಸ್ ಸೇರಿ, ಆ ಪಕ್ಷದ ಟಿಕೆಟ್ ಪಡೆದಿದ್ದರು.
ಈ ಬೆಳವಣಿಗೆ ಬೆನ್ನಲ್ಲೇ ತರೀಕೆರೆಯ ಜಾತ್ಯಾತೀತ ಜನತಾದಳದ ನಾಯಕರು ಬಂಡಾಯವೆದ್ದಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಜೆಡಿಎಸ್ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ಜೆಡಿಎಸ್ ನ ಟಿ.ಎಚ್.ಶಿವಶಂಕರಪ್ಪ ಅವರು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದೀಗ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿಅವರ ಬೆಂಬಲಿಗರೆಲ್ಲಾ ರಾಜೀನಾಮೆ ನೀಡಿದ್ದು, ಪಕ್ಷೇತರರಾಗಿ ತರೀಕೆರೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ತರೀಕೆರೆಯಲ್ಲಿ 2013ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಜಿ.ಎಚ್. ಶ್ರೀನಿವಾಸ ಗೆಲುವು ಸಾಧಿಸಿದ್ದರು. 35,817 ಮತಗಳನ್ನು ಪಡೆದಿದ್ದ ಅವರು 899 ಮತಗಳ ಅಲ್ಪ ಅಂತರದಿಂದ ಪ್ರಯಾಸದ ಜಯ ದಾಖಲಿಸಿದ್ದರು.
ಶ್ರೀನಿವಾಸ್ ಅವರಿಗೆ ಭಾರೀ ಪೈಪೋಟಿ ನೀಡಿದ್ದ ಕೆಜೆಪಿ ಅಭ್ಯರ್ಥಿ ಡಿ.ಎಸ್. ಸುರೇಶ್ 34,918 ಮತಗಳನ್ನು ಪಡೆದಿದ್ದರು. ಇಲ್ಲಿ ಇದೇ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸ್ವತಂತ್ರ ಅಭ್ಯರ್ಥಿ ಎಚ್.ಎಂ.ಗೋಪಿಕೃಷ್ಣ 34,554 ಮತಗಳನ್ನು ಪಡೆದು ಇಬ್ಬರಿಗೂ ಭಾರೀ ಪೈಪೋಟಿ ನೀಡಿದ್ದರು.
ಇದೇ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಎಸ್.ಎಂ. ನಾಗರಾಜು ಅವರಿಗೆ ಟಿಕೆಟ್ ನೀಡಿದೆ. ಬಹುಶಃ ಈ ಬಾರಿ ಶ್ರೀನಿವಾಸ ಸೋಲಬಹುದು ಎಂಬ ಭಯದಲ್ಲಿ ಕಾಂಗ್ರೆಸ್ ಟಿಕೆಟ್ ಬದಲಾಯಿಸಿರುವ ಸಾಧ್ಯತೆ ಇದೆ.
ಎಸ್.ಎಂ. ನಾಗರಾಜು ಇಲ್ಲಿ 1994ರಲ್ಲಿ ಸ್ವತಂತ್ರವಾಗಿ ನಿಂತು ಜಯ ಸಾಧಿಸಿ ಶಾಸಕರಾಗಿದ್ದರು. ಮುಂದೆ ಅವರು ಜೆಡಿಯುಗೆ ಪಕ್ಷಾಂತರ ಮಾಡಿದ್ದರು. ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ. ಇದರಿಂದ ಬಂಡಾಯವೆದ್ದು ಶ್ರೀನಿವಾಸ್ ಇದೀಗ ಜೆಡಿಎಸ್ ಮನೆ ಸೇರಿದ್ದಾರೆ.
ಇದರಿಂದ ಜೆಡಿಎಸ್ ನವರು ಅತಂತ್ರವಾಗಿದ್ದು ಪಕ್ಷೇತರರಾಗಿ ಸ್ಪರ್ಧೆಗೆ ಇಳಿದಿದ್ದಾರೆ.












Click it and Unblock the Notifications