ವಿದ್ಯಾರ್ಥಿಗಳೇ ಗಮನಿಸಿ: ಪದವಿ, ಡಿಪ್ಲೊಮಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ ಉನ್ನತ ಶಿಕ್ಷಣ ಇಲಾಖೆ!
ಬೆಂಗಳೂರು, ಜು. 17: ಕೊರೊನಾ ವೈರಸ್ ಶೈಕ್ಷಣಿಕ ಕ್ಷೇತ್ರದ ಮೇಲೆ ಅತಿ ಕೆಟ್ಟ ಪರಿಣಾಮ ಬೀರಿದೆ. ಆದರೆ ಉಳಿದೆಲ್ಲ ಕ್ಷೇತ್ರಗಳು ಕೊರೊನಾ ಜೊತೆಗೆ ಜೀವನ ಮಾಡುವುದನ್ನು ಕಲಿಯುತ್ತಿವೆ. ಹೀಗಾಗಿ ಶಿಕ್ಷಣ ಇಲಾಖೆ ಕೂಡ ಕೊರೊನಾ ಜೊತೆಗೆ ಬದುಕು ಎಂಬ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದೆ. ಮೊದಲಿಗೆ ಉನ್ನತ ಶಿಕ್ಷಣ ಇಲಾಖೆ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಮಾಡಲು ತೀರ್ಮಾನ ಮಾಡಿದೆ.
ಡಿಪ್ಲೊಮಾ ಸೆಮಿಸ್ಟರ್ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಮಾಡುವುದು, ಜೊತೆಗೆ ಪದವಿ ಪರೀಕ್ಷೆಗಳನ್ನೂ ಕೂಡ ಮಾಡಲು ಉನ್ನತ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಜೊತೆಗೆ ಕಾಲೇಜುಗಳನ್ನು ತೆರೆಯಲು ಕೂಡ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಸೂಚನೆ ನೀಡಿದ್ದಾರೆ. ಡಿಪ್ಲೊಮಾ ಪರೀಕ್ಷೆಗಳಿಗೆ ವೇಪಟ್ಟಿಯನ್ನೂ ಪ್ರಕಟಿಸಿದ್ದಾರೆ. ಹೀಗಾಗಿ ಇನ್ನು ಕೆಲ ದಿನಗಳಲ್ಲಿ ಕಾಲೇಜು ಮಟ್ಟದ ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಆರಂಭಗೊಳ್ಳಲಿದೆ.
ಬಾಕಿಯಿರುವ ಡಿಪ್ಲೊಮಾ, ಪದವಿ ಪರೀಕ್ಷೆಗಳ ವೇಳಾಪಟ್ಟಿ ಹಾಗೂ ಕಾಲೇಜು ಆರಂಭದ ಕುರಿತು ಸಂಪೂರ್ಣ ಮಾಹಿತಿ ಮುಂದಿದೆ.

ಬಾಕಿ ಪರೀಕ್ಷೆ ನಡೆಸಲು ಸೂಚನೆ
ಪದವಿ ಮತ್ತು ಡಿಪ್ಲೊಮಾ ಸೆಮಿಸ್ಟರ್ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್ ಮತ್ತು ಅಕ್ಟೋಬರ್ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಎಲ್ಲ ವಿಶ್ವವಿದ್ಯಾಲಯ ಹಾಗೂ ಪಾಲಿಟೆಕ್ನಿಕ್ಗಳಿಗೆ ಸೂಚನೆ ನೀಡಿದ್ದಾರೆ.
ಬಾಕಿ ಪರೀಕ್ಷೆಗಳನ್ನು ಮಾಡಿ ಮುಗಿಸಲು ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಮಂಡಳಿ ಸದಸ್ಯರ ಜತೆ ಮಾತುಕತೆ ನಡೆಸಿದ ನಂತರ ಮಾಹಿತಿ ನೀಡಿದ್ದಾರೆ. ಡಿಪ್ಲೊಮಾ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ.

ಡಿಪ್ಲೊಮಾ ಪರೀಕ್ಷೆ ವೇಳಾಪಟ್ಟಿ ಪ್ರಕಟ
"ಡಿಪ್ಲೊಮಾ ಬೆಸ ಅಂದರೆ 1, 3 ಹಾಗೂ 5ನೇ ಸೆಮಿಸ್ಟರ್ಗಳ ಡಿಪ್ಲೊಮಾ ಪ್ರಾಯೋಗಿಕ ಪರೀಕ್ಷೆಗಳು ಜುಲೈ 26ರಿಂದ 28 ನಡೆಯಲಿವೆ. ಮತ್ತು ಇವೇ ಸೆಮಿಸ್ಟರ್ಗಳ ಉಳಿದ ವಿಷಯಗಳ ಥಿಯರಿ ಪರೀಕ್ಷೆಗಳು ಮತ್ತಿತರೆ ಸೆಮಿಸ್ಟರ್ಗಳ ಪರೀಕ್ಷೆಗಳು ಅಗಸ್ಟ್ 2ರಿಂದ 21ರವರೆಗೆ ನಡೆಸು ಸೂಚಿಸಲಾಗಿದೆ" ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.
"ಜೊತೆಗೆ ಸಮ ಸೆಮಿಸ್ಟರ್ಗಳಾದ 2, 4 & 6ರ ಡಿಪ್ಲೊಮಾ ಪ್ರಾಯೋಗಿಕ ಪರೀಕ್ಷೆಗಳನ್ನು ನವೆಂಬರ್ 2ರಿಂದ 12ರವರೆಗೆ ಹಾಗೂ ಇವೇ ಸೆಮಿಸ್ಟರ್ಗಳ ಥಿಯರಿ ಪರೀಕ್ಷೆಗಳನ್ನು ನವೆಂಬರ್ 17ರಿಂದ ಡಿಸೆಂಬರ್ 6ರವರೆಗೆ ನಡೆಸಲಾಗುವುದು" ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದಾರೆ.

ಕೊರೊನಾ ಮಾರ್ಗಸೂಚಿ ಕಡ್ಡಾಯ
ಎಲ್ಲ ಪರೀಕ್ಷೆಗಳಲ್ಲೂ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ. ದೈಹಿಕ ಅಂತರ, ಮಾಸ್ಕ್ ಧರಿಸುವುದನ್ನು ತಪ್ಪಿಸುವಂತಿಲ್ಲ. ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಪಾಸಿಟೀವ್ ಬಂದಿದ್ದರೆ ಅಂಥರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಸೂಚಿಸಿದ್ದಾರೆ.
"ಬಹುತೇಕ ಎಲ್ಲ ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಗಿಸಿವೆ. ಕೋವಿಡ್ ಲಾಕ್ಡೌನ್ ಕಾರಣದಿಂದ ಕರ್ನಾಟಕ ವಿವಿ, ಕಲಬುರಗಿ ವಿವಿ ಹಾಗೂ ಬೆಂಗಳೂರು ವಿವಿ ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ಅವುಗಳನ್ನು ಅಕ್ಟೋಬರ್ ತಿಂಗಳ ಒಳಗೆ ನಡೆಸಲು ಸೂಚಿಸಲಾಗಿದೆ" ಎಂದು ಇದೇ ಸಂದರ್ಭದಲ್ಲಿ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಇನ್ನೆರಡು ದಿನದಲ್ಲಿ ನಿರ್ಧಾರ
ಉನ್ನತ ಶಿಕ್ಷಣ ವಿಭಾಗದ ಕಾಲೇಜುಗಳನ್ನು ಆರಂಭಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಇನ್ನೆರಡು ದಿನಗಳಲ್ಲಿ ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವ ನಿರ್ಧಾರಕ್ಕೆ ಬರಲಾಗಿದೆ.
"ಈಗಾಗಲೇ ಶೇಕಡಾ 65ರಷ್ಟು ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳ ಸರಕಾರಿ ತೆಗೆದುಕೊಂಡರೆ ಶೇಕಡಾಚ75ರಷ್ಟು ವಿದ್ಯಾರ್ಥಿಗಳು ವ್ಯಾಕ್ಸಿನ್ ಪಡೆದಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಶೀಘ್ರವೇ ನೀಡಲಾಗುವುದು. ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಲಸಿಕೀಕರಣ ಭರದಿಂದ ಸಾಗುತ್ತಿದೆ" ಎಂದು ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.
Recommended Video

ಲಸಿಕೆ ಪಡೆಯುವುದು ಕಡ್ಡಾಯವಲ್ಲ!
"ಕಾಲೇಜುಗಳಲ್ಲಿ ನೇರ ತರಗತಿಗಳಿಗೆ ಹಾಜರಾಗುವುದು ಕಡ್ಡಾಯ ಅಲ್ಲ. ಜೊತೆಗೆ ಇಷ್ಟ ಇದ್ದವರು ಲಸಿಕೆ ಪಡೆದು ಬರಬಹುದು, ಇಲ್ಲದವರು ಆನ್ಲೈನ್ ಕ್ಲಾಸ್ನಲ್ಲಿ ಪಾಠ ಕೇಳಬಹುದು. ಆದರೆ, ಹಾಜರಿ ಮಾತ್ರ ಕಡ್ಡಾಯವಾಗಿರುತ್ತದೆ. ಕಳೆದ ಮೇ ತಿಂಗಳಿನಿಂದಲೇ ಆನ್ಲೈನ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಜತೆಗೆ, ಸಂಪರ್ಕ ತರಗತಿಗಳೂ ನಡೆಯುತ್ತಿವೆ. ಅಗಸ್ಟ್ 15ರಿಂದ ಬರುವ ವಿದ್ಯಾರ್ಥಿಗಳಿಗೂ ಸಂಪರ್ಕ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲಾಗುವುದು" ಎಂದು ಇದೇಸ ಸಂದರ್ಭದಲ್ಲಿ ಡಾ. ಅಶ್ವಥ್ ನಾರಾಯಣ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಉನ್ನತ ಶಿಕ್ಷಣ ಮಂಡಳಿ ಉಪಾಧ್ಯಕ್ಷ ಪ್ರೊ. ತಿಮ್ಮೇಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್ ಮುಂತಾದವರು ಭಾಗಿಯಾಗಿದ್ದರು.











Click it and Unblock the Notifications