ವಿಧಾನ ಪರಿಷತ್ ಸದಸ್ಯರಾಗಿ ತಿಪ್ಪಣ್ಣ ಕಮಕನೂರು ನೇಮಕ
ಬೆಂಗಳೂರು, ಮೇ 29 : ವಿಧಾನ ಪರಿಷತ್ ಸದಸ್ಯರಾಗಿ ತಿಪ್ಪಣ್ಣ ಕಮಕನೂರು ಅವರು ನಾಮ ನಿರ್ದೇಶನಗೊಂಡಿದ್ದಾರೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಶಿಫಾರಸಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.
ಬುಧವಾರ ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ ನೇಮಕವಾಗಿರುವ ತಿಪ್ಪಣ್ಣ ಕಮಕನೂರು ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದರು.
2018ರ ಡಿಸೆಂಬರ್ನಲ್ಲಿ ನಡೆದ ಲೋಕಸಭಾ ಉಪ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ವಿ.ಎಸ್.ಉಗ್ರಪ್ಪ ಗೆಲುವು ಸಾಧಿಸಿದ್ದರು. ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ಸಂಸದರಾಗಿ ಆಯ್ಕೆಯಾದ ಬಳಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ವಿ.ಎಸ್.ಉಗ್ರಪ್ಪ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ತಿಪ್ಪಣ್ಣ ಕಮಕನೂರು ಅವರನ್ನು ನೇಮಕ ಮಾಡಿ ಸರ್ಕಾರ ರಾಜ್ಯಪಾಲರಿಗೆ ಶಿಫಾರಸು ಕಳುಹಿಸಿತ್ತು. ಶಿಫಾರಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಕಲಬುರಗಿ ಮೂಲದ ತಿಪ್ಪಣ್ಣ ಕಮಕನೂರು ಅವರು ಕೋಲಿ ಸಮಾಜಕ್ಕೆ ಸೇರಿದವರು. ಕೋಲಿ ಸಮಾಜದ ರಾಜ್ಯ ಗೌರವಾಧ್ಯಕ್ಷರು. ಗುಲ್ಬರ್ಗಾ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಲು ಅನುಭವಿಸಿದ ಬಳಿಕ ಅದೇ ಜಿಲ್ಲೆಗೆ ವಿಧಾನ ಪರಿಷತ್ ಸ್ಥಾನ ನೀಡಲಾಗಿದೆ.
ತಿಪ್ಪಣ್ಣ ಕಮಕನೂರು ಅವರ ವಿಧಾನ ಪರಿಷತ್ ಸದಸ್ಯತ್ವದ ಅವಧಿ 2020 ಜೂನ್ 23ರ ತನಕ ಇರಲಿದೆ.












Click it and Unblock the Notifications