ಟಿಪ್ಪು ಜಯಂತಿ: ಸೂಕ್ಷ್ಮ ಪ್ರದೇಶಗಳಲ್ಲಿ ಮೆರವಣಿಗೆಗೆ ಅವಕಾಶವಿಲ್ಲ
ಟಿಪ್ಪು ಜಯಂತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳ ತುರ್ತು ಸಭೆಯನ್ನು ಕರೆದಿದ್ದು, ನ 10ರಂದು ಸೂಕ್ಷ್ಮ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಮೆರವಣಿಗೆಗೆ ಅವಕಾಶ ನೀಡಬಾರದೆಂದು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಬೆಂಗಳೂರು, ನ 6: ಟಿಪ್ಪು ಜಯಂತಿ ಸಂಬಂಧ ನವೆಂಬರ್ 8ರಂದು ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳ ತುರ್ತು ಸಭೆಯನ್ನು ಕರೆದಿದ್ದರು.
ಭಾನುವಾರ (ನ 6, ಸಂಜೆ 4.30) ಕರೆದಿದ್ದ ಸಭೆಯಲ್ಲಿ, ಸೂಕ್ಷ್ಮ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಮೆರವಣಿಗೆಗೆ ಅವಕಾಶ ನೀಡಬಾರದೆಂದು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. (#BanTippuJayanthi ಟ್ವಿಟ್ಟರ್ ನಲ್ಲಿ ಫುಲ್ ಟ್ರೆಂಡಿಂಗ್)
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಟಿಪ್ಪು ಜಯಂತಿ ಆಚರಣೆ ಶಾಂತಿಯುತವಾಗಿ ನಡೆಯಬೇಕು. ಕಿಡಿಗೇಡಿಗಳ ಬಗ್ಗೆ ಎಚ್ಚರವಿರಲಿ, ಸೂಕ್ಷ್ಮ ಪ್ರದೇಶಗಳಲ್ಲಿ ಮೆರವಣಿಗೆಗೆ ಅವಕಾಶ ಕಲ್ಪಿಸೋದು ಬೇಡ ಎಂದು ಪೊಲೀಸರಿಗೆ ಸೂಚಿಸಿದ್ದಾರೆ.
ನ 10ರಂದು ರಾಜಧಾನಿಯಲ್ಲಿ ಟಿಪ್ಪು ಜಯಂತಿ ಆಚರಣೆಯ ಸಂಬಂಧ, ಸಿಎಂ ಕರೆದಿದ್ದ ಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್, ಡಿಜಿಪಿ ಓಂ ಪ್ರಕಾಶ್, ಗುಪ್ತಚರ ಇಲಾಖೆಯ ಎಸ್ಪಿ, ಕೆಎಸ್ಆರ್ಪಿ ಐಜಿ ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆಯ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರಿನಲ್ಲಿ ಗುರುವಾರ (ನ 10) ಆಯೋಜಿಸಲಾಗಿರುವ ಟಿಪ್ಪು ಜಯಂತಿ ಆಚರಣೆಯನ್ನು ರವೀಂದ್ರ ಕಲಾಕ್ಷೇತ್ರದ ಬದಲು ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಟಿಪ್ಪು ಜಯಂತಿ ಕಾರ್ಯಕ್ರಮ ಆಚರಣೆಯ ಬಗ್ಗೆ ಪರ/ವಿರೋಧ ಚರ್ಚೆ ಮತ್ತು ಹೇಳಿಕೆಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ, ಬೆಂಗಳೂರಿನ ಈ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ.












Click it and Unblock the Notifications