ಇಂದು ಟಿಪ್ಪು ಜಯಂತಿ: ಪ್ರತಿಭಟನೆ, ನಿಷೇಧಾಜ್ಞೆ, ಕೊಡಗು ಬಂದ್
Recommended Video
ಬೆಂಗಳೂರು, ನವೆಂಬರ್ 10: ವಿಪಕ್ಷ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಇಂದು (ನ.10) ರಾಜ್ಯದಾದ್ಯಂತ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದೆ.
ಕೊಡಗು, ಮಂಗಳೂರು, ಮಂಡ್ಯ, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಸ್ವಾತಂತ್ರ್ಯ ಯೋಧ ಟಿಪ್ಪು ಸುಲ್ತಾನ್ -ಜಯಂತಿ, ಆಚರಣೆ ಅಗತ್ಯವೇನು?
ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಕೊಡಗಿನಲ್ಲಿ ಬಂದ್ಗೆ ಕರೆ ನೀಡಲಾಗಿದ್ದು, ಇದಕ್ಕೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.
ಭಾನುವಾರ ಬೆಳಿಗೆ 6 ಗಂಟೆವರೆಗೂ ಸಾರ್ವಜನಿಕರು ಗುಂಪುಗೂಡುವುದು, ಪ್ರತಿಭಟನೆ, ಮೆರವಣಿಗೆಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ. ಮದ್ಯ ಮಾರಾಟಕ್ಕೂ ನಿಷೇಧ ವಿಧಿಸಲಾಗಿದೆ.
ಟಿಪ್ಪು ಹೆಸರು ಹೇಳಿದರೆ ಮಂಗಳೂರಿನ ಕ್ರೈಸ್ತರ ರಕ್ತ ಕುದಿಯುವುದೇಕೆ?
ದಕ್ಷಿಣ ವಲಯ ಐಜಿಪಿ ಕೆ.ವಿ. ಶರತ್ಚಂದ್ರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 50ಕ್ಕೂ ಹೆಚ್ಚು ಕಡೆ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಗೆ ಪ್ರವೇಶಿಸುವ ಪ್ರತಿ ವಾಹನಗಳನ್ನೂ ಪರಿಶೀಲಿಸಿ ಬಿಡಲಾಗುತ್ತಿದೆ.
ವಿವಿಧೆಡೆ ನಿಷೇಧಾಜ್ಞೆ
ಶಿವಮೊಗ್ಗದಲ್ಲಿಯೂ ಭಾನುವಾರ ಬೆಳಗಿನವರೆಗೂ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಕೆಎ ದಯಾನಂದ್ ಆದೇಶಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಚಿತ್ರದುರ್ಗದಲ್ಲಿ ಏಳು ಕಡೆ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ವಾಹನಗಳನ್ನು ತಪಾಸಣೆ ನಡೆಸಿ ಒಳಬಿಡಲಾಗುತ್ತಿದೆ.
ಮಂಡ್ಯದಲ್ಲಿ ಹೈ ಅಲರ್ಟ್
ಮಂಡ್ಯದಲ್ಲಿಯೂ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಟಿಪ್ಪು ಸಮಾಧಿ ಸ್ಥಳದ ಬಳಿ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಶ್ರೀರಂಗಪಟ್ಟಣದಲ್ಲಿ ಶುಕ್ರವಾರದಿಂದಲೇ ನಿಷೇಧಾಜ್ಞೆ ಜಾರಿಯಲ್ಲಿದೆ.
ಆಹ್ವಾನ ಪತ್ರಿಕೆಯಲ್ಲಿ ಸಿಂಹ ಹೆಸರಿಲ್ಲ
ಮೈಸೂರಿನ ಕಲಾಮಂದಿರದಲ್ಲಿ ಟಿಪ್ಪು ಜಯಂತಿ ನಡೆಯಲಿದ್ದು, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿಲ್ಲ. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕದಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ಬಿಜೆಪಿ ಶಾಸಕರಾದ ಎಸ್ ಎ ರಾಮದಾಸ್ ಮತ್ತು ಎಲ್ ನಾಗೇಂದ್ರ ಹಾಗೂ ಕೇಂದ್ರ ಸಚಿವ ಹರ್ಷವರ್ಧನ್ ಅವರ ಹೆಸರುಗಳನ್ನು ಮುದ್ರಿಸಲಾಗಿದೆ.
ಟಿಪ್ಪು ಜಯಂತಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಕುಮಾರಸ್ವಾಮಿ ಗೈರು
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ನಡೆಯಲಿದೆ. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆದರೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಟಿಪ್ಪು ಜಯಂತಿ ಆರಂಭಿಸಿದಾಗ ಎಚ್ ಡಿ ಕುಮಾರಸ್ವಾಮಿ ಅವರೂ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಅವರು ಕಾರ್ಯಕ್ರಮದಿಂದ ದೂರ ಉಳಿಯಲಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿಯೂ ಅವರ ಹೆಸರು ಮುದ್ರಿಸಿಲ್ಲ.