ರಾಜ್ಯದಲ್ಲಿ ಜುಲೈ 16ರವರೆಗೂ ಭಾರೀ ಮಳೆ ಸೂಚನೆ; ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಜುಲೈ 12: ಸೋಮವಾರದಿಂದ ಆರಂಭವಾಗಿ ಜುಲೈ 16ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
"ಸೋಮವಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲಿ ಕೂಡ ಉತ್ತಮ ಮಳೆಯಾಗಿದೆ. ಜುಲೈ 16ರವರೆಗೂ ಮಳೆ ಮುಂದುವರೆಯಲಿದ್ದು, ಅಧಿಕ ಮಳೆಯಾಗಲಿದೆ" ಎಂದು ಹವಾಮಾನ ಇಲಾಖೆ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಮುಂದೆ ಓದಿ...

ಜುಲೈ 16ರವರೆಗೂ ವ್ಯಾಪಕ ಮಳೆ
"ಜುಲೈ 12ರಿಂದ ಜುಲೈ 16ರವರೆಗೂ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಜುಲೈ 10-16ರವರೆಗೂ ಕೆಲವು ಪ್ರದೇಶದಲ್ಲಿ ಭಾರೀ ಮಳೆ ದಾಖಲಾಗಲಿದೆ" ಎಂದು ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ವಾರದಿಂದ ಮಳೆ ಕಾರಣವಾಗಿ ಆರು ಮಂದಿ ಸಾವನ್ನಪ್ಪಿದ್ದಾರೆ.

ಮುಂಗಾರು ಚೇತರಿಕೆ ಬೆನ್ನಲ್ಲೇ ಭಾರೀ ಮಳೆ
ಜುಲೈ 6ರಿಂದಲೂ ಉತ್ತರ ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಚೇತರಿಕೆ ಬೆನ್ನಲ್ಲೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಿದ್ದಾರೆ. ಹೀಗಾಗಿ ಈ ಏಳು ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಕ್ಷೀಣಿಸಿದ್ದ ಮುಂಗಾರು
ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಶುರುವಾಗಿದೆ. ಜೊತೆಗೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೇರಳದ ನಂತರ ಜೂನ್ 6ರಂದು ರಾಜ್ಯ ಪ್ರವೇಶಿಸಿದ್ದ ಮುಂಗಾರು, ಕೆಲವೇ ದಿನಗಳಲ್ಲಿ ಕ್ಷೀಣಿಸಿತ್ತು. ಜೂನ್ 19ರ ನಂತರವಂತೂ ಮಳೆ ಸಂಪೂರ್ಣ ಸ್ತಬ್ಧವಾಗಿತ್ತು. ಜುಲೈ 7ರ ನಂತರವಷ್ಟೇ ಮುಂಗಾರು ಚುರುಕುಪಡೆಯಲಿದೆ. ಜುಲೈ 2ನೇ ವಾರದ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.
ಬೆಂಗಳೂರಿನಲ್ಲಿಯೂ ಮಳೆ ಮುಂದುವರಿಕೆ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂಗಾರು ಪ್ರಭಾವದಿಂದಾಗಿ ಬೆಂಗಳೂರಿನಲ್ಲಿಯೂ ಜುಲೈ 16ರವರೆಗೆ ಮಳೆ ಮುಂದುವರೆಯುವ ಸೂಚನೆ ನೀಡಲಾಗಿದೆ. ಬೆಂಗಳೂರು ಪ್ರದೇಶಗಳಲ್ಲಿ ಗುಡುಗು ಸಿಡಿಲು ಮಿಶ್ರಿತ ಹೆಚ್ಚಿನ ಮಳೆಯಾಗುವುದಾಗಿ ತಿಳಿದುಬಂದಿದೆ. ಜುಲೈ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಅಧಿಕ ಮಳೆಯಾಗುವುದಾಗಿ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.












Click it and Unblock the Notifications