ಪ್ರಧಾನಿ ಮೋದಿ ವೈಫಲ್ಯವನ್ನು ಮುಚ್ಚಿ ಹಾಕಲು ರಾಜ್ಯದ ಹಿತ ಬಲಿ
ಬೆಂಗಳೂರು, ಸೆ 3: ಜಿಎಸ್ಟಿ ಮತ್ತು ಕೊರೊನಾ ನಿರ್ವಹಣೆಯ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. "ಪ್ರಧಾನಿ ಮೋದಿ ವೈಫಲ್ಯವನ್ನು ಮುಚ್ಚಿಹಾಕಲು, ಯಡಿಯೂರಪ್ಪ ರಾಜ್ಯದ ಹಿತವನ್ನು ಬಲಿಕೊಡುತ್ತಿದ್ದಾರೆ"ಎಂದು ಅವರು ಟ್ವೀಟ್ ಮಾಡಿದ್ದಾರೆ.
Recommended Video
ಈ ವಿಚಾರದಲ್ಲಿ ಆಕ್ರೋಶ ವ್ಯಕ್ತ ಪಡಿಸಿ ಸಿದ್ದರಾಮಯ್ಯ, #GSTMosa ಹ್ಯಾಷ್ ಟ್ಯಾಗ್ ಮೂಲಕ ಮಾಡಿರುವ ಟ್ವೀಟ್ ಹೀಗಿದೆ, "ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ @CMofKarnataka ಅವರು, ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ".
ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಗರಿಗೆದರಿದ ಕಾಂಗ್ರೆಸ್ ರಾಜಕೀಯ
"ಸಾಲ ಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರಿಗೆ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳ ಕೊಡುತ್ತೇನೆ ಎಂದು @CMofKarnataka ಅವರು ಪ್ರತಿಯೊಂದಕ್ಕೂ ಸಾಲದ ಮಂತ್ರ ಪಠಿಸುತ್ತಾ ಬಂದಿದ್ದಾರೆ. ಇವರೇನು ರಾಜ್ಯ ಸರ್ಕಾರವನ್ನು ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ?".
"2020-21ರ ಅಂತ್ಯಕ್ಕೆ ರೂ.3,68,692 ಕೋಟಿ ಸಾಲದ ಅಂದಾಜನ್ನು @CMofKarnataka ಬಜೆಟ್ನಲ್ಲಿ ಮಾಡಿದ್ದರು. ಈಗ ಕೊರೊನಾದಿಂದ ತೆರಿಗೆ ಸಂಗ್ರಹ ಕುಸಿದಿದೆ, ವಿತ್ತೀಯ ಕೊರತೆ ಹೆಚ್ಚಲಿದೆ, ಇವೆಲ್ಲದ್ದಕ್ಕೂ ಸಾಲ ಮಾಡಲು ಹೊರಟರೆ ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಸಾಲದ ಮಿತಿ ಶೇ.25 ಅನ್ನು ಮೀರಲಾರದೇ?".
"ಹೊಸ ಸಾಲದ ಹೊರೆ ರೂ.11,324 ಕೋಟಿಗಷ್ಟೇ ಸೀಮಿತವೇ? ಇದು ಒಟ್ಟು ಜಿಎಸ್ ಟಿ ಪರಿಹಾರ 97,000 ಕೋಟಿಯಲ್ಲಿ ರಾಜ್ಯದ ಪಾಲು ಅಷ್ಟೆ. ಇದರ ಜೊತೆ ಕೊರೊನಾದಿಂದಾಗಿ, ಜಿಎಸ್ ಟಿ ಒಟ್ಟು ನಷ್ಟ ರೂ.2,35,000 ಕೋಟಿ ಎಂದು ಅಂದಾಜು ಮಾಡಲಾಗಿದೆ. ಇದನ್ನು ಕೇಂದ್ರ ತುಂಬಿಕೊಡಲಿದೆಯೇ? ರಾಜ್ಯವೇ ಸಾಲಮಾಡಬೇಕೇ?".
ರಾಹುಲ್ ಗಾಂಧಿ ಪಿಎಂ ಆದರೆ ಸಿದ್ದರಾಮಯ್ಯ ಬೇಕಾದ್ದು ಮಾಡಿಕೊಳ್ಳಲಿ
"ಪ್ರಧಾನಿ @narendramodi ಅವರ ವೈಫಲ್ಯವನ್ನು ಮುಚ್ಚಿಹಾಕಲು @bsy ಅವರು ರಾಜ್ಯದ ಹಿತವನ್ನು ಬಲಿಗೊಡುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಜನತೆಗೆ ಬಗೆದಿರುವ ದ್ರೋಹವನ್ನು ಕಾಂಗ್ರೆಸ್ ಪಕ್ಷ ವಿಧಾನಮಂಡಲದ ಅಧಿವೇಶನದಲ್ಲಿ ಬಿಚ್ಚಿಡಲಿದೆ" ಎಂದು ಸಿದ್ದರಾಮಯ್ಯ ಸಾಲುಸಾಲು ಟ್ವೀಟ್ ಮಾಡಿದ್ದಾರೆ.