ಸಚಿವ ಕೆ.ಜೆ.ಜಾರ್ಜ್ರನ್ನು ಸದಾ ವಿವಾದಗಳು ಕಾಡುವುದೇಕೆ?
ಬೆಂಗಳೂರು, ಅಕ್ಟೋಬರ್ 27 : ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಅತೀ ಹೆಚ್ಚು ಬಾರಿ ವಿವಾದಕ್ಕೆ ಒಳಗಾದ ಸಚಿವರು ಕೆ.ಜೆ.ಜಾರ್ಜ್. 'ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಪ್ರತಿಪಕ್ಷಗಳು ನನ್ನ ರಾಜೀನಾಮೆ ಕೇಳುತ್ತಿವೆ' ಎಂದು ಹಿಂದೊಮ್ಮೆ ಕೆ.ಜೆ.ಜಾರ್ಜ್ ಹೇಳಿದ್ದರು.
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಸಿಬಿಐ ತನಿಖೆ ಆರಂಭವಾದ ತಕ್ಷಣ ಬಿಜೆಪಿ ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹಿಸುತ್ತಿದೆ. ಕೆ.ಜೆ.ಜಾರ್ಜ್ ಗೃಹ ಸಚಿವರಾಗಿ ಸಿದ್ದರಾಮಯ್ಯ ಸಂಪುಟ ಸೇರಿದ ಕ್ಷಣದಿಂದಲೇ ಅವರನ್ನು ಒಂದಿಲ್ಲೊಂದು ವಿವಾದಗಳು ಕಾಡುತ್ತಿವೆ.
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ತನಿಖೆ ನಡೆಯುವಾಗ ಜಾರ್ಜ್ ರಾಜೀನಾಮೆ ನೀಡಿದ್ದರು. ಗೃಹ ಸಚಿವ ಸ್ಥಾನ ಕೆ.ಜೆ.ಜಾರ್ಜ್ ಬಳಿಕ ಜಿ.ಪರಮೇಶ್ವರ ಕೈಗೆ ಬಂದಿತ್ತು. ನಂತರ ರಾಮಲಿಂಗಾ ರೆಡ್ಡಿ ಅವರ ಹೆಗಲೇರಿದೆ. ಕೆ.ಜೆ.ಜಾರ್ಜ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸದ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದಾರೆ.
ಸಚಿವ ಕೆ.ಜೆ.ಜಾರ್ಜ್ ಅವರು ಗೃಹ ಸಚಿವರಾಗಿದ್ದಾಗ ಅವರ ಸಲಹೆಗಾರರನ್ನಾಗಿ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ನೇಮಕ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಅಲ್ಲಿಂದ ಅವರ ವಿರುದ್ಧ ಹಲವಾರು ಆರೋಪಗಳು ಕೇಳಿಬರುತ್ತಿದ್ದು, ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. ಜಾರ್ಜ್ ಕಾಡಿದ ವಿವಾದಗಳು ಏನು? ಎಂಬ ಮಾಹಿತಿ ಇಲ್ಲಿದೆ ನೋಡಿ....

ಕೆ.ಜೆ.ಜಾರ್ಜ್ ರಾಜೀನಾಮೆ
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಹೆಸರು ಕೇಳಿಬಂದಿತ್ತು. ಸಾಯುವ ಮುನ್ನ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಗಣಪತಿ ಅವರು ಜಾರ್ಜ್ ಹೆಸರನ್ನು ಉಲ್ಲೇಖಿಸಿದ್ದರು. ಇದನ್ನು ಅಸ್ತ್ರವನ್ನಾಗಿ ಮಾಡಿಕೊಂಡ ಪ್ರತಿಪಕ್ಷಗಳು ರಾಜೀನಾಮೆಗೆ ಒತ್ತಾಯಿಸಿದ್ದವು. 2016ರ ಜುಲೈ 18ರಂದು ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮಾಧ್ಯಮಗಳ ವಿರುದ್ಧ ಟಿಆರ್ಪಿ ಹೇಳಿಕೆ
ಕೆ.ಜೆ.ಜಾರ್ಜ್ ಗೃಹ ಸಚಿವರಾಗಿದ್ದಾಗ 'ಅತ್ಯಾಚಾರದ ಸುದ್ದಿಗಳನ್ನು ಮಾಧ್ಯಮಗಳು ವೈಭವೀಕರಿಸುತ್ತಿವೆ. ಟಿಆರ್ಪಿಗಾಗಿ ಮಾಧ್ಯಮಗಳು ಈ ಸುದ್ದಿಯನ್ನು ಸೆನ್ಸೇಷನಲ್ ಮಾಡುತ್ತಿದೆ. ಬೆಂಗಳೂರನ್ನು ರೇಪ್ ಸಿಟಿ ಎಂದು ಬಿಂಬಿಸುವ ಬದಲು ತಪ್ಪಿತಸ್ಥರ ಬಗ್ಗೆ ವರದಿ ಮಾಡಿ' ಎಂದು ಹೇಳಿಕೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು, ಈ ಬಗ್ಗೆ ಭಾರೀ ಚರ್ಚೆ ನಡೆದಿತ್ತು.

ಮಲ್ಲಿಕಾರ್ಜುನ ಬಂಡೆ ಪ್ರಕರಣ
ಕಲಬುರಗಿಯಲ್ಲಿ ಸುಫಾರಿ ಹಂತಕ ಮುನ್ನಾ ಜೊತೆಗಿನ ಗುಂಡಿನ ಕಾಳಗದಲ್ಲಿ ಗುಂಡೇಟು ತಿಂದು ಗಾಯಗೊಂಡಿದ್ದ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಅವರ ಸಾವಿನ ಪ್ರಕರಣದಲ್ಲಿ ಅಂದಿನ ಗೃಹ ಸಚಿವರ ಅಸಮರ್ಥತೆ ಇದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಜಾರ್ಜ್ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿದ್ದವು.

ರೌಡಿ ಶೀಟರ್ ಜೊತೆ ಪ್ರಚಾರ
2014ರಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅವರೊಂದಿಗೆ ರೌಡಿ ಶೀಟರ್ ಬ್ರಿಗೇಡ್ ಅಜಂ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಪ್ರಚಾರ ವಾಹನದಲ್ಲಿ ಅಂದು ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಇದ್ದರು. 'ಪ್ರಚಾರ ವಾಹನದಲ್ಲಿ ಯಾರಿದ್ದರು ಎಂಬುದನ್ನು ನಾವು ಸ್ಕ್ಯಾನ್ ಮಾಡಿ ನೋಡಲಾಗುವುದಿಲ್ಲ' ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ಕೆಂಪಯ್ಯ ನೇಮಕ ವಿವಾದ
ಗೃಹ ಸಚಿವರ ಸಲಹೆಗಾರರನ್ನಾಗಿ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರ ನೇಮಕ ಮಾಡಿದ್ದು, ದೊಡ್ಡ ಸುದ್ದಿಯಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ಕೆಂಪಯ್ಯ ನೇಮಕವನ್ನು ಸಮರ್ಥಿಸಿಕೊಂಡಿದ್ದರು. ಸಲಹೆಗಾರರನ್ನಾಗಿ ನೇಮಕ ಮಾಡುವ ಮೂಲಕ ಸಚಿವ ಕೆ.ಜೆ. ಜಾರ್ಜ್ ಅವರು ಅಸಮರ್ಥರೆಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಬೀತು ಪಡಿಸಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು.

ಪೊಲೀಸರ ವರ್ಗಾವಣೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವು ತಿಂಗಳುಗಳಲ್ಲಿಯೇ ಪೊಲೀಸರ ಸಾಮೂಹಿಕ ವರ್ಗಾವಣೆ ನಡೆದಿತ್ತು. ಆಗ ರಾಜ್ಯಪಾಲರಾಗಿದ್ದ ಎಚ್.ಆರ್.ಭಾರದ್ವಾಜ್ ಅವರು ಇದರ ವಿರುದ್ದ ಅತೃಪ್ತಿ ವ್ಯಕ್ತಪಡಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂದು ಆರೋಪಿಸಿದ್ದರು. ಆಗಲೂ ಜಾರ್ಜ್ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದರು.












Click it and Unblock the Notifications