ಭರ್ಜರಿ ಮಳೆ: ಚಿಕ್ಕಮಗಳೂರು ಪ್ರವಾಸಕ್ಕೆ ಒಂದು ವಾರಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಮಗಳೂರು, ಅಕ್ಟೋಬರ್ 22: ಚಿಕ್ಕಮಗಳೂರು ಜಿಲ್ಲಾದ್ಯಂತ ಕಳೆದೊಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿದಿದ್ದು, ಇದೀಗ ಕೊಂಚ ಬಿಡುವು ಕೊಟ್ಟಿದೆ. ಆದರೆ ಮಳೆಯಿಂದ ಉಂಟಾಗುತ್ತಿರುವ ಅವಾಂತರ ಮಾತ್ರ ಕಡಿಮೆಯಾಗಿಲ್ಲ. ಹೀಗಾಗಿ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.
ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ಒಂದು ವಾರ ಮುಂದೂಡಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿನ ಹಳ್ಳಿ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು/ಪ್ರವಾಸಿಗರು ಮುಂದಿನ ಒಂದು ವಾರದವರೆಗೆ ಅಥವಾ ಮಳೆ ಕಡಿಮೆಯಾಗುವವರೆಗೆ ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಲಾಗಿದೆ.
ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳಿ, ಕೆರೆ ಕಟ್ಟೆಗಳಿಗೆ ತೆರಳಬಾರದು ಎಂದು ಜಿಲ್ಲಾಡಳಿತ ತಿಳಿಸಿದೆ.
ಅತಿಯಾದ ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಹಾಗೂ ಹೋಂ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಅನ್ನು ಒಂದು ವಾರ ಸ್ಥಗಿತಗೊಳಿಸಿ ಮುಂದೂಡಲಾಗಿದೆ.
ಹಾಸನ ಜಿಲ್ಲೆಯಲ್ಲೂ ಭರ್ಜರಿ ಮಳೆ
ಕಳೆದ ಒಂದು ವಾರದಿಂದ ಹಾಸನ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ದಶಕದ ಬಳಿಕ ಹಾಸನದಲ್ಲಿ ಹೆಚ್ಚು ಮಳೆಯಾದ ಹಿನ್ನಲೆ ಹಿರೆಕಡಲೂರು ಕೆರೆ ಏರಿ ಒಡೆದು ಅಪಾರ ಪ್ರಮಾಣದ ಹಾನಿಯಾಗಿದೆ. ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ಹರಿಯುತ್ತಿರುವ ಕೆರೆ ನೀರಿನಲ್ಲಿ ಜೋಳ, ಶುಂಠಿ, ಅಡಿಕೆ ಭತ್ತದ ಬೆಳೆಗಳು ಮುಳುಗಿ ಹೋಗಿದೆ.
ಇತ್ತ ಭರ್ಜರಿ ಮಳೆಯಿಂದಾಗಿ ಬೆಳೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಇನ್ನೂ ಮಳೆ ನೀರಿನಿಂದ ಕೆರೆ ಏರಿ ಕುಸಿದರೂ ಸ್ಥಳಕ್ಕೆ ಅಧಿಕಾರಿಗಳು ಬಾರದ ಹಿನ್ನೆಲೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವರ್ಷ ಮಳೆಯಿಂದಾಗಿ ಉತ್ತಮ ಬೆಳೆ ಬಂದಿತ್ತು. ಆದರೆ, ಹಿಂಗಾರು ಮಳೆಗೆ ಫಸಲಿಗೆ ಬಂದ ಬೆಳೆಗಳು ಸರ್ವನಾಶವಾಗಿದೆ ಎಂದು ರೈತರು ಕಣ್ಣೀರು ಹಾಕುವಂತಾಗಿದೆ.












Click it and Unblock the Notifications