Traffic Fine: ಟ್ರಾಫಿಕ್ ಫೈನ್ ಉಳಿಸಿಕೊಂಡಿರುವವರಿಗೆ ಸರ್ಕಾರ ನೀಡಿದೆ ಭರ್ಜರಿ ರಿಯಾಯಿತಿ
ರಾಜ್ಯದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿ ದಂಡದ ಮೊತ್ತವನ್ನು ಕಟ್ಟದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಸರ್ಕಾರ ಭರ್ಜರಿ ರಿಯಾಯಿತಿ. ತಿಳಿಯಲು ಮುಂದೆ ಓದಿ.
ಬೆಂಗಳೂರು, ಫೆಬ್ರವರಿ. 03: ಸಂಚಾರಿ ನಿಯಮ ಉಲ್ಲಂಘಿಸಿ ದಂಡದ ಮೊತ್ತವನ್ನು ಕಟ್ಟದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಸರ್ಕಾರ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸ್ಸಿನ ಮೇರೆಗೆ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ಸರಕಾರ ಆದೇಶ ಹೊರಡಿಸಿದೆ.
ಹಾಗಾಗಿ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟದೆ ಬಾಕಿ ಉಳಿಸಿಕೊಂಡಿರುವವರು ಅದನ್ನು ಸುಲಭವಾಗಿ ಪಾವತಿಸಿ ಮುಕ್ತರಾಗಬಹುದು.ಇದೇ ಫೆಬ್ರವರಿ 11ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಿನ್ನೆಲೆಯಲ್ಲಿ ಈ ಆದೇಶವನ್ನು ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತ ರೂ. ಬಂಡವಾಳ ಹರಿದು ಬರಲಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ ನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಬಿ.ವೀರಪ್ಪ ಅಧ್ಯಕ್ಷತೆಯಲ್ಲಿ ಕಳೆದ ಜ.27ರಂದು ನಡೆದ ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಲಾಗಿತ್ತು. ನಂತರ ಕಾನೂನು ಸೇವೆಗಳ ಪ್ರಾಧಿಕಾರದ ಸರಕಾರಕ್ಕೆ ಮನವಿ ಸಲ್ಲಿಸಿತ್ತು.ಅದರಂತೆ ರಿಯಾಯಿತಿ ಸರಕಾರ ಶೇ.50ರಷ್ಟು ರಿಯಾಯಿತಿ ನೀಡಲು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
*11ರವರೆಗೆ ಅವಕಾಶ*
ಸಂಚಾರಿ ನಿಯಮ ಉಲ್ಲಂಘಿಸಿ ದಂಡದ ಮೊತ್ತ ಬಾಕಿ ಉಳಿಸಿಕೊಂಡಿರುವವರು ಫೆಬ್ರವರಿ 11ರೊಳಗೆ ದಂಡ ಕಟ್ಟಿದರೆ ಅಂತಹವರು ರಿಯಾಯಿತಿ ಪಡೆಯಬಹುದಾಗಿದೆ. ಫೆ.11ರ ರಾಜ್ಯವ್ಯಾಪಿ ರಾಷ್ಟ್ರೀಯ ಲೋಕ ಅದಾಲತ್ ಹಿನ್ನೆಲೆಯಲ್ಲಿ ಈ ರಿಯಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ.
ಕೆಲ ವರ್ಷಗಳ ಹಿಂದೆ ತೆಲಂಗಣಾ ರಾಜ್ಯದಲ್ಲಿ ಇದೇ ರೀತಿ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ್ದ ದಂಡದ ಮೊತ್ತಕ್ಕೆ ವಿನಾಯ್ತಿ ನೀಡಿದ್ದರಿಂದ ಅಲ್ಲಿನ ಜನರು ಸರದಿಯಲ್ಲಿ ನಿಂತು ಬಾಕಿ ಕಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.