ಕಾಲೇಜು ಶಿಕ್ಷಣ ಇಲಾಖೆಯ ಬೋಧಕ, ಬೋಧಕೇತರ ಸಿಬ್ಬಂದಿಗೆ ವರ್ಗಾವಣೆ ಕೌನ್ಸಿಲಿಂಗ್
ಬೆಂಗಳೂರು, ಏಪ್ರಿಲ್ 5: ಕರ್ನಾಟಕದ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್ಗೆ ಆದೇಶ ಹೊರಡಿಸಲಾಗಿದೆ.
ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ವರ್ಗಾವಣೆ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕರ (ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಗ್ರಂಥಪಾಲಕರು, ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗೆ ಆದೇಶ ಹೊರಡಿಸಲಾಗಿದೆ.
ಮಂಜೂರಾದ ಬೋಧಕರ ಹುದ್ದೆಗಳ ಶೇ.9ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗಳು ಹಾಗೂ ಶೇ.6ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ನಡೆಸಲು ಅವಕಾಶ ಇದೆ.

ವರ್ಗಾವಣೆ ನಿಯಮಗಳಂತೆ ವಿಶೇಷ ಪ್ರಕರಣಗಳಿಗೆ ಅನ್ವಯಿಸುವ ಬೋಧಕರು ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಇಲಾಖೆಯ ವೆಬ್ಸೈಟ್ನಲ್ಲಿ ಲಭ್ಯಗೊಳಿಸುವ ಆನ್ಲೈನ್ ನಮೂನೆಯಲ್ಲಿ ನಿಗದಿತ ದಿನಾಂಕದ ಒಳಗೆ ವರ್ಗಾವಣೆ ಅರ್ಜಿ ಸಲ್ಲಿಸಬೇಕು.
ಕೊನೆಯ ದಿನಾಂಕದ ನಂತರ ಸಲ್ಲಿಸುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅಗತ್ಯ ದಾಖಲಾತಿಗಳಿಲ್ಲದ ಮನವಿಗಳನ್ನು ತಿರಸ್ಕರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ಏ.8 ರಂದು ಕೌನ್ಸಿಲಿಂಗ್
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್ ತಿಳಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಲೇಜು ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರುಗಳನ್ನು ಪ್ರಕಟಿಸಲಾಗಿದೆ. ಇಲಾಖೆಯ ಇಎಂಐಎಸ್ ತಂತ್ರಾಂಶದಲ್ಲಿ ಲಭ್ಯವಿರುವ ಅಭ್ಯರ್ಥಿಗಳ ಸೇವಾ ವಿವರಗಳನ್ನು ಪರಿಗಣಿಸಿ, ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲಾಗುವುದು.
ಈ ಮಾಹಿತಿಯಲ್ಲಿ ಬದಲಾವಣೆ/ ಆಕ್ಷೇಪಣೆ ಇದ್ದಲ್ಲಿ ಏ.6ರ ಒಳಗೆ ಇಲಾಖೆಯ ಇ-ಮೇಲ್ [email protected]ಗೆ ಸಲ್ಲಿಸಬಹುದು ಎಂದಿದ್ದಾರೆ.
ಇದನ್ನು ಆಧರಿಸಿ, ಏ.7ರಂದು ಹುದ್ದೆ ಸ್ಥಳಾಂತರ ಮತ್ತು ಹೆಚ್ಚುವರಿ ಕಾರ್ಯಭಾರ ಲಭ್ಯವಿರುವ ಕಾಲೇಜುಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮರುದಿನ, ಅಂದರೆ ಏ.8ರಂದು ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಿಯಮಗಳ ಪ್ರಕಾರ, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲೆ, ವಾಣಿಜ್ಯ ಮತ್ತು ಭಾಷಾ ವಿಷಯಗಳ ಬೋಧಕರಿಗೆ ವಾರಕ್ಕೆ 16 ಗಂಟೆ ಮತ್ತು ಪ್ರಾಯೋಗಿಕ ತರಗತಿಗಳಿರುವ ವಿಷಯಗಳ ಬೋಧಕರಿಗೆ 20 ಗಂಟೆಗಳ ಕಾರ್ಯಭಾರ ಇರಬೇಕು ಎಂದು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ವಿವರಿಸಿದ್ದಾರೆ.
ವರ್ಗಾವಣೆ ಪ್ರಕ್ರಿಯೆಯಲ್ಲಿ ಸಾಧ್ಯವಾದಷ್ಟೂ ಮಟ್ಟಿಗೆ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿರುವ ವಲಯದೊಳಗೇ ವರ್ಗಾವಣೆ ಮಾಡಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.












Click it and Unblock the Notifications